ಸಾರಾಂಶ
ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.
ಕಾರ್ಕಳ : ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ನಕ್ಸಲರಿಗೆ, ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ಸಿಗುತ್ತದೆ ಎಂದು ಟೀಕಿಸಿದ್ದಾರೆ.
ಭೂಗತ ಚಟುವಟಿಕೆ ನಡೆಸಿ ತಲೆಮರೆಸಿಕೊಂಡಿದ್ದ ನಕ್ಸಲರು ಶರಣಾಗಬೇಕಿರುವುದು ಸಂಬಂಧಪಟ್ಟ ಎಸ್ಪಿ ಕಚೇರಿ ಅಥವಾ ಸಬ್ ಇನ್ಸ್ಪೆಕ್ಟರ್ ಎದುರು. ಆದರೆ ಮುಖ್ಯಮಂತ್ರಿ ತಮ್ಮ ಅಧಿಕೃತ ಕಚೇರಿಯಲ್ಲಿ ನಕ್ಸಲರನ್ನು ಸ್ವಾಗತಿಸಲು ನಡು ಬಗ್ಗಿಸಿ ನಿಂತಿದ್ದಾರೆ. ಕರ್ನಾಟಕದಲ್ಲಿ ಕಾನೂನಿನ ಕೊಲೆಯಾಗಿದೆ ಎಂದು ಅವರು ಟೀಕಿಸಿದ್ದಾರೆ.