ಖಾಸಗಿ ವಾಹಿನಿ ನಡೆಸುವ ಬಿಗ್ಬಾಸ್ ರಿಯಾಲಿಟಿ ಶೋ ಸಂಬಂಧ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ಇಲಾಖೆಯಿಂದ ಈವರೆಗೆ ಯಾವುದೇ ಅನುಮತಿ ಪಡೆದಿಲ್ಲ. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರಷ್ಟೇ ಅನುಮತಿ ನೀಡಲಾಗುವುದು
ಬೆಂಗಳೂರು : ಖಾಸಗಿ ವಾಹಿನಿ ನಡೆಸುವ ಬಿಗ್ಬಾಸ್ ರಿಯಾಲಿಟಿ ಶೋ ಸಂಬಂಧ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ಇಲಾಖೆಯಿಂದ ಈವರೆಗೆ ಯಾವುದೇ ಅನುಮತಿ ಪಡೆದಿಲ್ಲ. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರಷ್ಟೇ ಅನುಮತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಪರಿಸರ ಇಲಾಖೆಯಿಂದ ಅನುಮತಿ ಪಡೆಯಬೇಕು
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಬಿಗ್ಬಾಸ್ ರಿಯಾಲಿಟಿ ಶೋ ನಡೆಸುವುದಕ್ಕೆ ಪರಿಸರ ಇಲಾಖೆಯಿಂದ ಅನುಮತಿ ಪಡೆಯಬೇಕು. ಕಳೆದ ವರ್ಷ ತ್ಯಾಜ್ಯ ನೀರು ಸಂಸ್ಕರಣೆ ನಿಯಮ ಪಾಲಿಸಿಲ್ಲ ಎಂಬ ಕಾರಣಕ್ಕಾಗಿ ಬಿಗ್ಬಾಸ್ ರಿಯಾಲಿಟಿ ಶೋ ಆಯೋಜಕರಿಗೆ ನೋಟಿಸ್ ನೀಡಲಾಗಿತ್ತು. ಈಗ ಮತ್ತೆ ರಿಯಾಲಿಟಿ ಶೋ ಆರಂಭಕ್ಕೆ ಸಂಬಂಧಿಸಿದಂತೆ ಅನುಮತಿ ಕೋರಿ ಇಲಾಖೆಗೆ ಮನವಿ ಸಲ್ಲಿಸಿಲ್ಲ ಎಂದರು.
ಬಿಗ್ಬಾಸ್ ಆಯೋಜಕರು ಅನುಮತಿ ಕೋರಿ ಮನವಿ
ಬಿಗ್ಬಾಸ್ ಆಯೋಜಕರು ಅನುಮತಿ ಕೋರಿ ಮನವಿ ಸಲ್ಲಿಸಿದರೆ, ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ಒಂದು ವೇಳೆ ನಿಯಮ ಪಾಲನೆಯಾಗದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಜತೆಗೆ, ನಿಯಮ ಉಲ್ಲಂಘನೆ ಆಗಿದ್ದಲ್ಲಿ ನಿಗದಿತ ದಂಡ ವಿಧಿಸಿ ಅಧಿಕಾರಿಗಳು ಮುಂದಿನ ಪ್ರಕ್ರಿಯೆ ಮಾಡಲಿದ್ದಾರೆ ಎಂದು ಹೇಳಿದರು.
