ಸಾರಾಂಶ
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದ 3.75 ಲಕ್ಷ ಸುಸ್ತಿದಾರರಿಗೆ ನೋಟಿಸ್ ಜಾರಿ ಮಾಡಿ, ಬಾಕಿ ತೆರಿಗೆ ವಸೂಲಿ ಮಾಡಲು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದ 3.75 ಲಕ್ಷ ಸುಸ್ತಿದಾರರಿಗೆ ನೋಟಿಸ್ ಜಾರಿ ಮಾಡಿ, ಬಾಕಿ ತೆರಿಗೆ ವಸೂಲಿ ಮಾಡಲು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಆಸ್ತಿ ತೆರಿಗೆ ಸಂಗ್ರಹವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಬೇಕು. ಸುಸ್ತಿದಾರರನ್ನು ಪತ್ತೆ ಮಾಡಿ ಬಾಕಿ ತೆರಿಗೆ ವಸೂಲಿಗೆ ಕ್ರಮ ಕೈಗೊಳ್ಳಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ 3.75 ಲಕ್ಷ ಆಸ್ತಿ ಮಾಲೀಕರು ತೆರಿಗೆ ಪಾವತಿಸದೆ ಸುಸ್ತಿದಾರರಾಗಿದ್ದು, ಇವರಿಂದ ಸುಮಾರು ₹700 ರಿಂದ 800 ಕೋಟಿ ಬಾಕಿ ತೆರಿಗೆ ವಸೂಲಿ ಮಾಡಬೇಕಿದೆ. ತೆರಿಗೆ ವಸೂಲಿಗೆ ಎಸ್ಎಂಎಸ್ ಹಾಗೂ ಇ-ಮೇಲ್ ಮೂಲಕ ನೋಟೀಸ್ ಜಾರಿ ಮಾಡಬೇಕು ಎಂದು ಹೇಳಿದರು.
ನಗರದಲ್ಲಿ ಹೊಸ ಖಾತಾಗಾಗಿ ಸಲ್ಲಿರುವ 50 ಸಾವಿರಕ್ಕೂ ಹೆಚ್ಚಿನ ಅರ್ಜಿಗಳನ್ನು ಆದ್ಯತೆ ಮೇರೆಗೆ ಪರಿಶೀಲಿಸಿ, ಖಾತಾ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿನ ರಸ್ತೆ ಗುಂಡಿಗಳನ್ನು ಆದ್ಯತೆ ಮೇಲೆ ಶೀಘ್ರದಲ್ಲಿ ಮುಚ್ಚಬೇಕು. ಮಳೆಗಾಲವಾದ ಕಾರಣ ಕೋಲ್ಡ್ಮಿಕ್ಸ್ ಹಾಗೂ ಇಕೋಫಿಕ್ಸ್ ಬಳಸಿ ರಸ್ತೆ ಗುಂಡಿ ಮುಚ್ಚಬೇಕು. ರಸ್ತೆ ಬದಿಯ ಚರಂಡಿಗಳನ್ನು ಕೂಡಲೇ ಸ್ವಚ್ಛಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು..ಅಪಾಯ ಸ್ಥಿತಿಯಲ್ಲಿರುವ ಮರಗಳು ಮತ್ತು ಕೊಂಬೆಗಳನ್ನು ಗುರುತಿಸಿ ಕೂಡಲೇ ತೆರವು ಮಾಡುವಂತೆ ನಿರ್ದೇಶಿಸಿದರು.
ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಕರೀಗೌಡ, ಡಾ. ಕೆ.ಹರೀಶ್ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಪ್ರೀತಿ ಗೆಹಲೋಥ್ ಇತರರಿದ್ದರು.
15 ದಿನಗಳಲ್ಲಿ ಎ-ಖಾತಾ ವಿತರಣೆ ಪ್ರಕ್ರಿಯೆ ಆರಂಭ:
ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡುವ ಪ್ರಕ್ರಿಯೆಯನ್ನು ಮುಂದಿನ 15 ದಿನಗಳಲ್ಲಿ ಆರಂಭಿಸಲಾಗುವುದು,ಇದಕ್ಕಾಗಿ ಆನ್ಲೈನ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡುವುದಕ್ಕೆ ಸಂಬಂಧಿಸಿದಂತೆ 15 ದಿನಗಳಲ್ಲಿ ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಬಿ-ಖಾತಾ ಹೊಂದಿರುವವರು ಅಥವಾ ಯಾವುದೇ ಖಾತಾ ಇಲ್ಲದವರು ಎ-ಖಾತಾ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಖಾತಾ ನೀಡುವಲ್ಲಿ ಯಾವುದೇ ರೀತಿಯ ಮಧ್ಯವರ್ತಿಗಳಿಲ್ಲದಂತೆ ಆನ್ಲೈನ್ ವ್ಯವಸ್ಥೆ ಮಾಡಲಾಗುವುದು. ಬಿಬಿಎಂಪಿಗೆ ಕಚೇರಿಗೆ ಹೋಗದೆಯೇ ಎ-ಖಾತಾ ಪಡೆಯುವಂತೆ ಮಾಡಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.