ರಾಜ್ಯದ ಕೆಲವೆಡೆ ಅಕಾಲಿಕ ಮಳೆಯ ಅಬ್ಬರ ಮುಂದುವರಿದಿದ್ದು, ಬೆಂಗಳೂರು, ತುಮಕೂರು, ದಾವಣಗೆರೆ, ಬಳ್ಳಾರಿ ಜಿಲ್ಲೆಯ ಕೆಲವೆಡೆ ಭಾನುವಾರ ಮಳೆಯಾಗಿದೆ. ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.

 ಬೆಂಗಳೂರು: ರಾಜ್ಯದ ಕೆಲವೆಡೆ ಅಕಾಲಿಕ ಮಳೆಯ ಅಬ್ಬರ ಮುಂದುವರಿದಿದ್ದು, ಬೆಂಗಳೂರು, ತುಮಕೂರು, ದಾವಣಗೆರೆ, ಬಳ್ಳಾರಿ ಜಿಲ್ಲೆಯ ಕೆಲವೆಡೆ ಭಾನುವಾರ ಮಳೆಯಾಗಿದೆ. ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.

ಬೆಂಗಳೂರಿನ ಹಲವೆಡೆ ಭಾನುವಾರ ಸಂಜೆ ದಿಢೀರ್ ಮಳೆ

ರಾಜಧಾನಿ ಬೆಂಗಳೂರಿನ ಹಲವೆಡೆ ಭಾನುವಾರ ಸಂಜೆ ದಿಢೀರ್ ಮಳೆಯಾಗಿದ್ದು, ವಾಹನ ಸವಾರರು, ವಾರಾಂತ್ಯದ ಶಾಪಿಂಗ್‌ನಲ್ಲಿ ತೊಡಗಿದ್ದವರು ಪರದಾಡುವಂತಾಯಿತು. ಕಳೆದ ಕೆಲವು ದಿನಗಳಿಂದ ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ಜನರಿಗೆ ಮಳೆ ತಂಪು ನೀಡಿತು. ನಗರದ ವಿವಿಧ ರಸ್ತೆಗಳಲ್ಲಿ ಮಳೆ ನೀರು ನಿಂತುಕೊಂಡಿದ್ದ ಕಾರಣ ವಾಹನ ಸವಾರರು ಪರದಾಡಿದರು.

ತುಮಕೂರು ಜಿಲ್ಲೆಯ ಹಲವೆಡೆ ಮಳೆ

ಇದೇ ವೇಳೆ, ಕುಣಿಗಲ್‌ ಸೇರಿ ತುಮಕೂರು ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಕುಣಿಗಲ್‌ ತಾಲೂಕಿನ ಡಿ.ಹೊಸಹಳ್ಳಿ ಗ್ರಾಮದಲ್ಲಿ ಗಾಳಿ-ಮಳೆಗೆ ಮನೆಯ ಮೇಲೆ ಮರ ಬಿದ್ದು, ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದಾಳೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ವಿವಿಧೆಡೆ ಗಾಳಿ-ಮಳೆ ಸಹಿತ ಭಾರೀ ಮಳೆ ಸುರಿದಿದ್ದು, ಬಿರುಗಾಳಿಗೆ ಸುಮಾರು 1,800 ಎಕರೆ ಪ್ರದೇಶದಲ್ಲಿ ಬೆಳೆಯಲಾದ ರಾಗಿ, ಮೆಕ್ಕೆಜೋಳ ಹಾನಿಗೊಳಗಾಗಿವೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ವಿವಿಧೆಡೆ ಸುರಿದ ಆಲಿಕಲ್ಲು ಮಳೆಗೆ ಮಳೆಗೆ ಸುಮಾರು 1,250 ಹೆಕ್ಟೇರ್‌ನಲ್ಲಿ ಬೆಳೆದ ಈರುಳ್ಳಿ ಬೆಳೆ ಹಾನಿಗೊಳಗಾಗಿದೆ.