ಸಾರಾಂಶ
ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಮೆಟ್ರೋ ಕಾಮಗಾರಿಯಿಂದ ಆಗುತ್ತಿರುವ ಸಂಚಾರ ದಟ್ಟಣೆ ನಿವಾರಿಸಲು ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆ ನಡುವಣ ರಸ್ತೆ ವಿಭಜಕ (ಡಿವೈಡರ್) ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ
ಬೆಂಗಳೂರು : ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಮೆಟ್ರೋ ಕಾಮಗಾರಿಯಿಂದ ಆಗುತ್ತಿರುವ ಸಂಚಾರ ದಟ್ಟಣೆ ನಿವಾರಿಸಲು ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆ ನಡುವಣ ರಸ್ತೆ ವಿಭಜಕ (ಡಿವೈಡರ್) ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ.
ಸೋಮವಾರ ಹೆಬ್ಬಾಳ ಜಂಕ್ಷನ್ನಿಂದ ಸಿಲ್ಕ್ ಬೋರ್ಡ್ವರೆಗೆ ಮೆಟ್ರೋ ಮಾರ್ಗದಲ್ಲಿ ಬರುವ ಮಹದೇವಪುರ ಹಾಗೂ ಮಾರತಹಳ್ಳಿ ಮೇಲ್ಸೇತುವೆ ಬಳಿ ವೀಕ್ಷಣೆ ಮಾಡಿದರು.
ಮೆಟ್ರೋ ಕಾಮಗಾರಿ ನಡೆಯುತ್ತಿರುವ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ನೆರವಾಗಲು ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆಗಳನ್ನು ವಿಲೀನ ಮಾಡಬೇಕಿದೆ. ಇತ್ತೀಚೆಗೆ ನಡೆದ ಗ್ರೇಟರ್ ಬೆಂಗಳೂರು ಸಭೆಯಲ್ಲಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಮೆಟ್ರೋ ಕಾಮಗಾರಿಯಿಂದ ಆಗುತ್ತಿರುವ ಸಂಚಾರ ದಟ್ಟಣೆ ನಿವಾರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಖ್ಯರಸ್ತೆ ಹಾಗೂ ಸರ್ವೀಸ್ ರಸ್ತೆಗಳ ನಡುವೆ ಇರುವ ರಸ್ತೆ ವಿಭಜಕ (ಡಿವೈಡರ್) ತೆರವುಗೊಳಿಸಲು ತೀರ್ಮಾನ ಮಾಡಲಾಗಿತ್ತು.
ಈ ವಿಚಾರವಾಗಿ ಈಗಾಗಲೇ ನಗರದ ಶಾಸಕರ ಜತೆ ಚರ್ಚೆ ಮಾಡಿ, ಅವರ ಅಭಿಪ್ರಾಯವನ್ನು ಪಡೆಯಲಾಗಿದ್ದು, ಸುಮಾರು 40-50 ಕಿಮೀ ಉದ್ದದ ರಸ್ತೆಗಳಲ್ಲಿ ಮುಖ್ಯರಸ್ತೆ ಹಾಗೂ ಸರ್ವೀಸ್ ರಸ್ತೆಗಳನ್ನು ವಿಲೀನಗೊಳಿಸಲು ತೀರ್ಮಾನಿಸಲಾಗಿದೆ. ಮೆಟ್ರೋ ರೈಲು ಯೋಜನೆ ಕಾಮಗಾರಿ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯ ಬಹುತೇಕ ಭಾಗ ಕಾಮಗಾರಿ ಉದ್ದೇಶಕ್ಕೆ ಬಳಕೆಯಾಗುತ್ತಿದ್ದು ವಾಹನಗಳು ಸುಗಮವಾಗಿ ಸಾಗಲು ಸಾಧ್ಯವಾಗದೆ ಸಂಚಾರ ದಟ್ಟಣೆ ಹೆಚ್ಚಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.