ಸಾರಾಂಶ
‘ರಾಜಕೀಯ ದುರುದ್ದೇಶದಿಂದ ಬಾನು ಮುಷ್ತಾಕ್ ಅವರು ನಾಡಹಬ್ಬ ಉದ್ಘಾಟಿಸುವುದನ್ನು ಬಿಜೆಪಿಯವರು ವಿರೋಧಿಸುತ್ತಿದ್ದಾರೆ. ಸರ್ಕಾರ ರಾಜಕೀಯವಾಗಿ ಉತ್ತರ ನೀಡುವ ಜತೆಗೆ ಕೋರ್ಟಿನಲ್ಲೂ ಪ್ರತ್ಯುತ್ತರ ನೀಡಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಜಯಪುರ : ‘ರಾಜಕೀಯ ದುರುದ್ದೇಶದಿಂದ ಬಾನು ಮುಷ್ತಾಕ್ ಅವರು ನಾಡಹಬ್ಬ ಉದ್ಘಾಟಿಸುವುದನ್ನು ಬಿಜೆಪಿಯವರು ವಿರೋಧಿಸುತ್ತಿದ್ದಾರೆ. ಸರ್ಕಾರ ರಾಜಕೀಯವಾಗಿ ಉತ್ತರ ನೀಡುವ ಜತೆಗೆ ಕೋರ್ಟಿನಲ್ಲೂ ಪ್ರತ್ಯುತ್ತರ ನೀಡಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಿಜೆಪಿಯ ಮಾಜಿ ಸಂಸದ ಪ್ರತಾಪ ಸಿಂಹ ಅವರು ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವ ವಿರುದ್ಧ ಕೋರ್ಟಿಗೆ ಹೋಗಿದ್ದನ್ನು ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿದ ಸಿದ್ದರಾಮಯ್ಯ, ‘ಈ ಹಿಂದೆ ಕವಿ ನಿಸಾರ್ ಅಹಮ್ಮದ್ ದಸರಾ ಉದ್ಘಾಟನೆಗೆ ಬಂದಾಗ ಏಕೆ ಕೋರ್ಟ್ಗೆ ಹೋಗಲಿಲ್ಲ? ಹೈದರಾಲಿ ಟಿಪ್ಪು, ಮಿರ್ಜಾ ಇಸ್ಮಾಯಿಲ್ ಮೆರವಣಿಗೆ ಮಾಡಿದಾಗ ಏಕೆ ವಿರೋಧ ಮಾಡಲಿಲ್ಲ?’ ಎಂದು ಪ್ರಶ್ನಿಸಿದರು. ಅಲ್ಲದೆ, ‘ಅವರಿಗೆ ನಾವು ನ್ಯಾಯಾಲಯದಲ್ಲಿಯೇ ಉತ್ತರ ನೀಡುತ್ತೇವೆ’ ಎಂದು ತಿಳಿಸಿದರು.
‘ಬಾನು ಮುಷ್ತಾಕ್ ಅವರು ಕನ್ನಡಾಂಬೆಯ ಬಗ್ಗೆ ಹೀಗಳೆದು ಮಾತನಾಡಿರುವ ಬಗ್ಗೆ ಯಾವ ಪುರಾವೆ ಇಲ್ಲ. ಅವರು ಕನ್ನಡದಲ್ಲಿ ಬರೆದ ಕೃತಿಯ ಅನುವಾದಕ್ಕೆ ಬುಕರ್ ಪ್ರಶಸ್ತಿ ಬಂದಿದೆ. ಹೀಗಾಗಿ ಸರ್ಕಾರ ಬಾನು ಮುಷ್ತಾಕ್ ಮತ್ತು ಆ ಕೃತಿ ಅನುವಾದಿಸಿದ ದೀಪಾ ಭಸ್ತಿಯವರಿಗೆ ಸನ್ಮಾನಿಸಲಾಗಿದೆ. ಬಾನು ಮುಷ್ತಾಕ್ ಕನ್ನಡ ಸಾಹಿತಿ ಆಗಿರುವುದರಿಂದ ದಸರಾ ಉದ್ಘಾಟಿಸಲಿದ್ದಾರೆ’ ಎಂದು ಸ್ಪಷ್ಟಪಡಿಸಿದರು.
ಪ್ರತಾಪ್ ಸಿಂಹ ಕೋರ್ಟಿಗೆ ಹೋಗಿದ್ದಕ್ಕೆ ಪ್ರತಿಕ್ರಿಯಿಸಿದ ಸಿಎಂ, ‘ಅವರು ರಾಜಕೀಯಕ್ಕಾಗಿ ಮಾಡುತ್ತಿದ್ದಾರೆ. ನಾವು ಅದನ್ನು ನ್ಯಾಯಾಲಯದಲ್ಲೇ ಹೋರಾಟ ಮಾಡುತ್ತಿದ್ದೇವೆ. ಬಾನು ಮುಷ್ತಾಕ್ ಅವರು ಕನ್ನಡ ರೈಟರ್. ಕನ್ನಡದಲ್ಲೇ ಎದೆಯ ಹಣತೆ ಬರೆದಿದ್ದಾರೆ. ಅದಕ್ಕೆ ಬುಕರ್ ಅವಾರ್ಡ್ ಕೂಡ ಬಂದಿದೆ’ ಎಂದರು.
ಸಿಎಂ ತಿರುಗೇಟು
- ಹೈದರಾಲಿ ಟಿಪ್ಪು, ಮಿರ್ಜಾ ಇಸ್ಮಾಯಿಲ್ರಿಂದ ಕೂಡ ದಸರೆ ಮೆರವಣಿಗೆ
- ಬಾನು ಮುಷ್ತಾಕ್ ಕನ್ನಡಾಂಬೆ ಬಗ್ಗೆ ಹೀಗಳೆದು ಮಾತಾಡಿದ ಸಾಕ್ಷ್ಯ ಇಲ್ಲ
- ಕನ್ನಡದಲ್ಲೇ ಎದೆಯ ಹಣತೆ ಬರೆದಿದ್ದಾರೆ. ಅದಕ್ಕೆ ಬುಕರ್ ಪ್ರಶಸ್ತಿ ಬಂದಿದೆ
- ಅದನ್ನು ಪರಿಗಣಿಸಿಯೇ ಅವರಿಂದ ದಸರಾ ಕಾರ್ಯಕ್ರಮ ಉದ್ಘಾಟನೆ
- ಈ ಬಗ್ಗೆ ಕಾನೂನು ಹಾಗೂ ರಾಜಕೀಯ ಮಾರ್ಗದಲ್ಲಿ ಹೋರಾಟ: ಸಿಎಂ