ಹೂವಿನಹಡಗಲಿ: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಬಡ ಮಕ್ಕಳ ಶಿಕ್ಷಣ ಕಲಿಕೆಗಾಗಿ, ಸರ್ಕಾರ ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳ ಸದುಪಯೋಗ ಪಡಿಸಿಕೊಳ್ಳಲು ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಬೇಕೆಂದು ಬಿಇಒ ಕೆ.ಮಂಗಳ ಕರೆ ನೀಡಿದರು.
ತಾಲೂಕಿನ ಮಾಗಳ ಗ್ರಾಮದ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಿ, ನಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಸರ್ಕಾರಿ ಶಾಲೆಗಳಲ್ಲಿ ಎಲ್ಲ ವರ್ಗದ ಮಕ್ಕಳ ಶೈಕ್ಷಣಿಕ ಬೆಳವಣಿಗೆಗಾಗಿ, ಗುಣಮಟ್ಟದ ಶಿಕ್ಷಣ ನೀಡಲು ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ. ಜತೆಗೆ ಸರ್ಕಾರಿ ಶಾಲೆಯ ಎಲ್ಲ ಮಕ್ಕಳಿಗೆ ಪುಸ್ತಕ, ಬಟ್ಟೆ, ಶೂ, ಬಿಸಿಯೂಟದ ಜತೆಗೆ ಮೊಟ್ಟೆ, ಹಾಲು, ಹಣ್ಣು ನೀಡಲಾಗುತ್ತಿದೆ. ಈ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಿ, ಸರ್ಕಾರಿ ಶಾಲೆಗಳನ್ನು ಬಲಿಷ್ಠಗೊಳಿಸಬೇಕೆಂದು ಕರೆ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನಾ ಯೋಜನೆಗಳಿವೆ. ಕಂಪ್ಯೂಟರ್ ಶಿಕ್ಷಣ, ಸ್ಮಾಟ್ ಕ್ಲಾಸ್ಗಳಲ್ಲಿ ಮಕ್ಕಳ ಕಲಿಕೆಯ ಆಸಕ್ತಿ ಹೆಚ್ಚಿಸುವಂತಹ ಕಾರ್ಯಕ್ರಮಗಳಿವೆ. ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮಕ್ಕಳಿಗೆ ಪರಿಣಾಮಕಾರಿ ಶಿಕ್ಷಣ ಒದಗಿಸಲು ಶಾಲಾ ಶಿಕ್ಷಕರಿಗೆ ಸೂಕ್ತ ತರಬೇತಿ ನೀಡಲಾಗಿದೆ. ಸರ್ಕಾರಿ ಶಾಲೆಗಳ ದಾಖಲಾತಿಗಾಗಿ ಶಿಕ್ಷಕರು, ಪಾಲಕರು ಸೇರಿದಂತೆ, ಶಿಕ್ಷಣ ಪ್ರೇಮಿಗಳು ಗ್ರಾಮಸ್ಥರು ಸಹಕರಿಸಬೇಕೆಂದು ಮನವಿ ಮಾಡಿದರು.ಮಾಗಳ ಪಿಎಂಶ್ರೀ ಶಾಲೆಯಲ್ಲಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ವ್ಯವಸ್ಥೆ ಇದೆ. ಈ ಶಾಲಾ ಮಕ್ಕಳಿಗೆ ಯೋಗಾ ಸೇರಿದಂತೆ ವಿಭಿನ್ನ ಪಠ್ಯೇತರ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಇಂತಹ ಗ್ರಾಮೀಣ ಪ್ರದೇಶದಲ್ಲಿ ಪಿಎಂಶ್ರೀ ಶಾಲೆ ಮಂಜೂರಾಗಿರುವುದು, ಈ ಭಾಗದ ಮಕ್ಕಳ ಗುಣಮಟ್ಟದ ಶಿಕ್ಷಣ ಕಲಿಕೆಗೆ ಬಹಳಷ್ಟು ಸಹಕಾರಿಯಾಗುತ್ತದೆ ಎಂದರು.
ಎಸ್ಡಿಎಂಸಿ ಅಧ್ಯಕ್ಷೆ ಕೆ.ಮಮತಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ದೈಹಿಕ ಅಧೀಕ್ಷಕ ಮಹಮದ್ ರಫಿ ಖವಾಸ್ ಉಪಸ್ಥಿತರಿದ್ದರು. ಬಿಆರ್ಸಿ ಎ.ಕೋಟೆಪ್ಪ ಪ್ರಾಸ್ತಾವಿಕ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕ ಡಿ.ವಿರೂಪಣ್ಣ ಸ್ವಾಗತಿಸಿದರು. ಮಾದೇಶ್ವರ ನಿರೂಪಿಸಿದರು. ಕುಮಾರ್ ವಂದಿಸಿದರು.
ಇದೇ ಸಂದರ್ಭದಲ್ಲಿ ಬಿಇಒ ಕೆ.ಮಂಗಳ ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಪದಾಧಿಕಾರಿಗಳು, ಮಕ್ಕಳ ಪಾಲಕರು, ಗ್ರಾಮಸ್ಥರು ಹಾಗೂ ಶಿಕ್ಷಣ ಪ್ರೇಮಿಗಳು, ಎಲ್ಲ ಶಿಕ್ಷಕರು ಉಪಸ್ಥಿತರಿದ್ದರು.