ಅರಸೀಕೆರೆ: ಹಾಸನ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಮಲ್ಲಮ್ಮ ಅವರು ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೇ 21ರಂದು ಹಾಸನ ಕಲಾಮಂದಿರದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.ಮಲ್ಲಮ್ಮ ಅವರು ತಾಲೂಕಿನ ಚಿಕ್ಕೂರು ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದಲ್ಲದೆ, ನಂತರ ಹಾಸನ ಡಯಟ್‌ನಲ್ಲಿ ಸುಮಾರು 20 ವರ್ಷ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿದ್ದಾರೆ. ತಮ್ಮ ಸೇವಾ ಅವಧಿಯಲ್ಲಿ ಶಾಲೆಗಳಿಗೆ ಭೇಟಿ ನೀಡಿದಾಗ ತರಗತಿಗಳಲ್ಲೇ ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ, ಅವರ ಕಲಿಕಾ ಸಾಮರ್ಥ್ಯ ಮತ್ತು ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸುವಲ್ಲಿ ವಿಶೇಷ ಆಸಕ್ತಿ ತೋರಿದ್ದರು.ವಾಹನ ಸೌಲಭ್ಯವಿಲ್ಲದ ಗಡಿಭಾಗದ ಗ್ರಾಮಗಳ ಶಾಲೆಗಳಿಗೂ ತಲುಪಿ, ಅಗತ್ಯವಿದ್ದರೆ ಇತರ ಶಿಕ್ಷಕರಿಂದ ದ್ವಿಚಕ್ರ ವಾಹನ ಪಡೆದು ಭೇಟಿ ನೀಡಿ, ಮಕ್ಕಳ ಶಿಕ್ಷಣಾಭಿವೃದ್ಧಿಗೆ ಮಾರ್ಗದರ್ಶನ ನೀಡುತ್ತಿದ್ದ ಅವರ ಸರಳ ವ್ಯಕ್ತಿತ್ವ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇಂತಹ ನಿಷ್ಠಾವಂತ ಹಾಗೂ ಕ್ರಿಯಾಶೀಲ ಅಧಿಕಾರಿಯನ್ನು ಸರ್ಕಾರ ಗುರುತಿಸಿರುವುದು ಶ್ಲಾಘನೀಯವಾಗಿದೆ. ಪೋಷಕರು ಮತ್ತು ಶಿಕ್ಷಣ ವಲಯದವರು ಅವರ ಆಯ್ಕೆಯನ್ನು ಅಭಿನಂದಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ಸಾಹದಿಂದ ಸೇವೆ ಸಲ್ಲಿಸಲು ಈ ಪ್ರಶಸ್ತಿ ಪ್ರೇರಣೆ ನೀಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.