ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ತಾಲೂಕಿನ ಹೇಮಗಿರಿಯ ಬಿಜಿಎಸ್ ಶಿಕ್ಷಣ ಸಂಸ್ಥೆ ಗುರುಕುಲ ಪದ್ಧತಿ ಮಾದರಿಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಭವಿಷ್ಯದ ನಾಯಕರನ್ನು ರೂಪಿಸುವ ಕೆಲಸವನ್ನು ಬದ್ಧತೆಯಿಂದ ಮಾಡುತ್ತಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪತ್ರಾಂಕಿತ ವ್ಯವಸ್ಥಾಪಕ ಬಳ್ಳೇಕೆರೆ ಮಂಜುನಾಥ್ ಹೇಳಿದರು.

ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರವಾದ ಹೇಮಗಿರಿ ಬಿಜಿಎಸ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಕ್ಷರ ಅಭ್ಯಾಸ ಕಾರ್ಯಕ್ರಮ ಹಾಗೂ ವಿಶ್ವ ಪರಿಸರ ದಿನದ ಅಂಗವಾಗಿ ವಿವಿಧ ಹೂವು ಮತ್ತು ಹಣ್ಣಿನ ಸಸಿಗಳನ್ನು ವಿತರಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಆಯೋಜಿಸಿ ಗುರು ಹಿರಿಯರು, ತಂದೆ ತಾಯಿಗಳನ್ನು ಗೌರವಿಸಿ ಪೂಜಿಸುವ ಸಂಸ್ಕಾರವನ್ನು ಕಲಿಸಿ ಮಕ್ಕಳಿಗೆ ಬಾಲ್ಯದಿಂದಲೇ ನೈತಿಕ ಶಿಕ್ಷಣ, ಸಂಸ್ಕಾರವನ್ನು ನೀಡುವ ಜಾಗೃತಿ ಕಾರ್ಯಕ್ರಮವಾಗಿದೆ ಎಂದು ಶ್ಲಾಘಿಸಿದರು.

ಶಾಖಾ ಮಠದ ಗೌರವ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡರು, ಪ್ರತಿ ವರ್ಷವೂ ಅಕ್ಷರಾಭ್ಯಾಸದ ನಮ್ಮ ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವ ಕಾಯಕವನ್ನು ಶ್ರದ್ಧಾಭಕ್ತಿಯಿಂದ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಕಸಾಪ ಅಧ್ಯಕ್ಷ ಎಂ.ಕೆ.ಹರಿಚರಣತಿಲಕ್ ಮಾತನಾಡಿ, ನಗರೀಕರಣದ ಪ್ರಭಾವದಿಂದ ಗಿಡಮರಗಳನ್ನು ಕಡಿದು ನಾಶ ಮಾಡುತ್ತಿರುವುದರಿಂದ ಕಾಲಕಾಲಕ್ಕೆ ಮಳೆ, ಬೆಳೆಯಾಗದೆ ಜನರು ಸಂಕಷ್ಟದಲ್ಲಿದ್ದಾರೆ. ನಮ್ಮ ಮುಂದಿನ ತಲೆಮಾರಿಗೆ ಉತ್ತಮ ಪರಿಸರ ನೀಡುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಪುರಸಭೆ ಮಾಜಿ ಸದಸ್ಯ ಕೆ.ಆರ್.ನೀಲಕಂಠ ಮಾತನಾಡಿ, ಮಕ್ಕಳಿಗೆ ಉತ್ತಮ ಸಂಸ್ಕಾರ ಹಾಗೂ ಶಿಕ್ಷಣವನ್ನು ಕೊಡಿಸಿ ಸಮಾಜದ ಮುಖ್ಯವಾಹಿನಿಗೆ ಬಂದು ಸಾಧನೆ ಮಾಡುವಂತೆ ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ನಿರ್ದೇಶಕ ಗಂಜೀಗೆರೆ ಮಹೇಶ್, ಗ್ರಾಪಂ ಮಾಜಿ ಸದಸ್ಯ ಅಗ್ರಹಾರ ಬಾಚಹಳ್ಳಿ ಶ್ರೀನಿವಾಸ್, ಹೊನ್ನೇನಹಳ್ಳಿ ರವಿ, ಕಾಮನಹಳ್ಳಿ ಮಂಜುನಾಥ್, ಮಾಕವಳ್ಳಿ ಮನು, ಸಾಯಿಕುಮಾರ್, ಸೈಯದ್ ಖಲೀಲ್, ಬಿಜಿಎಸ್ ಶಾಲೆಯ ಮುಖ್ಯಸ್ಥ ಪುನೀತ್ ಕುಮಾರ್, ಜಯಶೀಲ, ಸುರೇಶ್ ಸೇರಿದಂತೆ ಮಕ್ಕಳ ಪೋಷಕರು ಇದ್ದರು.