ಸವಾಲಿನ ನಡುವೆ ಇಂದು ಭದ್ರಾವತಿ ನಗರಸಭೆ ಬಜೆಟ್‌ ಮಂಡನೆ

| Published : Feb 13 2024, 12:47 AM IST

ಸಾರಾಂಶ

ಫೆ.13ರ ಮಂಗಳವಾರ ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ನಡೆಯಲಿದ್ದು, ನಗರಸಭೆ ಆದಾಯ ಹೆಚ್ಚಿಸಿಕೊಳ್ಳುವ ಯೋಜನೆಗಳನ್ನು ರೂಪಿಸಿಕೊಳ್ಳದ ಕಾರಣ ಆದಾಯಕ್ಕಿಂತ ವೆಚ್ಚ ಅಧಿಕವಾಗುತ್ತಿದೆ ಎಂದು ಹೇಳಲಾಗಿದೆ.

ಕನ್ನಡಪ್ರಭ ವಾರ್ತೆ ಭದ್ರಾವತಿ

ನಗರಸಭೆ ವ್ಯಾಪ್ತಿಯ ವಿವಿಧೆಡೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಅನುದಾನದಡಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಇದಕ್ಕೆ ಪೂರಕವಾಗಿ ನಗರಸಭೆ ತನ್ನ ಆದಾಯ ಹೆಚ್ಚಿಸಿಕೊಂಡು ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಲ್ಲಿ ವಿಫಲವಾಗಿದೆ.

ಫೆ.13ರ ಮಂಗಳವಾರ ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ನಡೆಯಲಿದ್ದು, ನಗರಸಭೆ ಆದಾಯ ಹೆಚ್ಚಿಸಿಕೊಳ್ಳುವ ಯೋಜನೆಗಳನ್ನು ರೂಪಿಸಿಕೊಳ್ಳದ ಕಾರಣ ಆದಾಯ ಕ್ಕಿಂತ ವೆಚ್ಚ ಅಧಿಕವಾಗುತ್ತಿದೆ. ಪ್ರಮುಖವಾಗಿ ಕುಡಿಯುವ ನೀರು ನಿರ್ವಹಣೆ ಹಾಗೂ ತ್ಯಾಜ್ಯ ವಿಲೇವಾರಿ ವೆಚ್ಚ ಸರಿದೂಗಿಸಿಕೊಳ್ಳುವುದು ಸವಾಲಾಗಿದೆ. ಕಳೆದ ಕೆಲವು ವರ್ಷಗಳಿಂದ ಕುಡಿಯುವ ನೀರು ಹಾಗೂ ತ್ಯಾಜ್ಯ ವಿಲೇವಾರಿ ಶುಲ್ಕ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಸಮರ್ಪಕ ಕಾರ್ಯನಿರ್ವಹಣೆ ಇಲ್ಲದೆ ಶುಲ್ಕ ಹೆಚ್ಚಳ ಸರಿಯಲ್ಲ ಎಂಬುದು ಸದಸ್ಯರ ನಿಲುವಾಗಿದೆ.

ಹಲವಾರು ವರ್ಷಗಳಿಂದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಆದಾಯ ಹೆಚ್ಚಿಸಿಕೊಳ್ಳುವ ಯೋಜನೆಗಳನ್ನು ರೂಪಿಸಿಕೊಳ್ಳುವಂತೆ ನಗರಸಭೆ ಆಡಳಿತಕ್ಕೆ ಸಲಹೆ ನೀಡುತ್ತಾ ಬಂದಿದ್ದು, ಆದರೆ ಇದನ್ನು ಗಂಭೀರವಾಗಿ ಪರಿಗಣಿಸದಿರುವುದು ವಿಷಾದನೀಯ ಸಂಗತಿಯಾಗಿದೆ. ಈ ನಡುವೆ ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನಗಳನ್ನು ಎದುರು ನೋಡುವಂತಾಗಿದೆ.

ಪ್ರತಿ ವರ್ಷ ಆಯವ್ಯಯದಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗುತ್ತಿದೆ. ಆದರೆ ಬಹುತೇಕ ಯೋಜನೆಗಳು ಅನುಷ್ಠಾನಗೊಂಡಿಲ್ಲ. ಇದಕ್ಕೆ ಇಚ್ಛಾಶಕ್ತಿ ಕೊರತೆಯೋ ಅಥವಾ ಆಯವ್ಯಯದಲ್ಲಿನ ದೋಷಗಳು ಕಾರಣವೇ ತಿಳಿಯುತ್ತಿಲ್ಲ. ಇನ್ನೇನು ಲೋಕಸಭೆ ಚುನಾವಣೆ ಎದುರಾಗುತ್ತಿದ್ದು, ನೀತಿಸಂಹಿತೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುವ ಲಕ್ಷಣಗಳು ಕಂಡುಬರುತ್ತಿವೆ. 15 ಕೋಟಿ ರು.ವಿಶೇಷ ಅನುದಾನ

ಈ ನಡುವೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಕೋರಿಕೆ ಮೇರೆಗೆ ನಗರಸಭೆಗೆ ಸರ್ಕಾರ ಜ.17ರಂದು 15 ಕೋಟಿ ರು. ವಿಶೇಷ ಅನುದಾನ ಬಿಡುಗಡೆಗೊಳಿಸಿದೆ. ಈ ಅನುದಾನವನ್ನು ನಗರಸಭೆ ಆಡಳಿತ ಸದ್ಬಳಕೆ ಮಾಡಿಕೊಳ್ಳುವ ವಿಶ್ವಾಸವಿದೆ. ಅಧ್ಯಕ್ಷೆ ಲತಾ ಚಂದ್ರಶೇಖರ್ ಮೊದಲ ಬಾರಿಗೆ ಆಯವ್ಯಯ ಮಂಡಿಸುತ್ತಿದ್ದು, ಈ ಬಾರಿಯಾದರೂ ಹೊಸ ಯೋಜನೆಗಳು ಅನುಷ್ಠಾನಗೊಳ್ಳುವ ನಿರೀಕ್ಷೆ ಹೊಂದಲಾಗಿದ್ದು, ಕಾದು ನೋಡ ಬೇಕಿದೆ.