ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬಹುದು ಎಂದು ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಪಿ.ಎಂ. ಸುಬ್ಬಯ್ಯ ಹೇಳಿದರು.

ನಾಪೋಕ್ಲು: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬಹುದು ಎಂದು ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಪಿ.ಎಂ. ಸುಬ್ಬಯ್ಯ ಹೇಳಿದರು. ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಭಾಗಮಂಡಲ ವಲಯ ಪ್ರೌಢಶಾಲೆ ವಿಭಾಗದ ಬಾಲಕರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಅರುಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಆರ್. ರಮೇಶ್ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದು ಮುಖ್ಯ, ಸೋಲು ಗೆಲುವು ಸಾಮಾನ್ಯ. ಎರಡನ್ನೂ ಸಮಾನವಾಗಿ ಸ್ವೀಕರಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಕುಟ್ಟೇಟಿರ ಕುಂಙಪ್ಪ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಗಣನೀಯವಾಗಿ ಇಳಿಮುಖಗೊಂಡಿದೆ. ಇತ್ತೀಚೆಗೆ ಹಲವರು ಮೊಬೈಲ್ ವ್ಯಸನಿಗಳಾಗುತ್ತಿದ್ದಾರೆ. ಮೊಬೈಲ್ ಬಳಕೆಗೆ ಕಡಿವಾಣ ಹಾಕಿ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚಾಗಿ ತೊಡಗಿಸಿಕೊಂಡರೆ ಮಾನಸಿಕವಾಗಿ ಶಾರೀರಿಕವಾಗಿ ಸದೃಡರಾಗಬಹುದು ಎಂದರು.

ಮುಖ್ಯ ಶಿಕ್ಷಕ ಸಿ.ಆರ್. ಲೋಕೇಶ್ ಮಾತನಾಡಿ, ಭಾಗಮಂಡಲ ವಲಯದ ವಿವಿಧ ಶಾಲೆಗಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿದ್ದು, ಸಾಮರಸ್ಯದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.

ಭಾಗಮಂಡಲ ವಲಯದ ಅಟಲ್ ಬಿಹಾರಿ ವಾಜಪೇಯಿ ಶಾಲೆ, ಕಾವೇರಿ ಪ್ರೌಢಶಾಲೆ, ಅರುಣ ಪ್ರೌಢಶಾಲೆ, ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆ,, ಉದಯ ಪ್ರೌಢಶಾಲೆ ಹಾಗೂ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕಬ್ಬಡ್ಡಿ ಪಂದ್ಯಾಟದಲ್ಲಿ ಅಟಲ್ ಬಿಹಾರಿ ವಾಜಪೇಯಿ ಶಾಲೆ ವಿದ್ಯಾರ್ಥಿಗಳ ತಂಡ, ಖೊಖೊ ಪಂದ್ಯಾಟದಲ್ಲಿ ಚೇರಂಬಾಣೆಯ ಅರುಣ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ, ವಾಲಿಬಾಲ್ ಪಂದ್ಯಾಟದಲ್ಲಿ ಅಟಲ್ ಬಿಹಾರಿ ವಾಜಪೇಯಿ ಶಾಲಾ ವಿದ್ಯಾರ್ಥಿಗಳ ತಂಡ ಹಾಗೂ ತ್ರೋಬಾಲ್‌ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆಯಾಯಿತು.

ಉದ್ಘಾಟನಾ ಸಮಾರಂಭದಲ್ಲಿ ರಾಜರಾಜೇಶ್ವರಿ ವಿದ್ಯಾ ಸಂಸ್ಥೆಯ ಸಂಸ್ಥಾಪಕ ನಾಟೋಳಂಡ ವಿಜು ದೇವಯ್ಯ, ಮುಖ್ಯ ಶಿಕ್ಷಕ ಕುದುಪಜೆ ಕವನ್, ದೈಹಿಕ ಶಿಕ್ಷಣ ಶಿಕ್ಷಕ ಅಯ್ಯಪ್ಪ, ವಿವಿಧ ಪ್ರೌಢಶಾಲೆ ಶಿಕ್ಷಕರು ಪಾಲ್ಗೊಂಡಿದ್ದರು. ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆ ನೇತೃತ್ವದಲ್ಲಿ ಕ್ರೀಡಾಕೂಟ ನಡೆಯಿತು.