26ರಿಂದ ಭಗವತಿ ಸೂಪರ್ ಸೆವೆನ್ಸ್ ಫುಟ್ಬಾಲ್ ಕಪ್ ಕೂಟ

| Published : Dec 11 2023, 01:15 AM IST

26ರಿಂದ ಭಗವತಿ ಸೂಪರ್ ಸೆವೆನ್ಸ್ ಫುಟ್ಬಾಲ್ ಕಪ್ ಕೂಟ
Share this Article
  • FB
  • TW
  • Linkdin
  • Email

ಸಾರಾಂಶ

ಹಾಲುಗುಂದ ಸರ್ಕಾರಿ ಶಾಲಾ ಮೈದಾನದಲ್ಲಿ ಜಿಲ್ಲಾಮಟ್ಟದ ಮುಕ್ತ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ

ಕನ್ನಡಪ್ರಭ ವಾರ್ತೆ ಮಡಿಕೇರಿ ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿ ಸಂಘ, ಹಾಲುಗುಂದ ಗ್ರಾಮಸ್ಥರು, ಭಗವತಿ ಯೂತ್ ಕ್ಲಬ್ ಹಾಲುಗುಂದ ಹಾಗೂ ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ಡಿ.26ರಿಂದ 29ರ ವರೆಗೆ ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜಿಲ್ಲಾಮಟ್ಟದ 7+2 ಜನರ ಮುಕ್ತ ಕಾಲ್ಚೆಂಡು ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಹಾಲುಗುಂದ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಪಂದಿಕಂಡ ದಿನೇಶ್ (ಕುಶ) ಮಾಹಿತಿ ನೀಡಿದರು.

ಹಾಲುಗುಂದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಂದಿಕಂಡ ದಿನೇಶ್, ಹಾಲುಗುಂದ ಸರ್ಕಾರಿ ಪ್ರಾಥಮಿಕ ಶಾಲೆಯ ಅಭಿವೃದ್ಧಿಗಾಗಿ ಹಳೆಯ ವಿದ್ಯಾರ್ಥಿ ಸಂಘವನ್ನು ಸ್ಥಾಪಿಸಿದ್ದೇವೆ. ಶಾಲೆಯ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ಶಾಲಾ ಶಿಕ್ಷಕರು ನಮ್ಮ ಗಮನಕ್ಕೆ ತಂದಿದ್ದರು. ತಕ್ಷಣ ನಾವು, ಶಾಲೆಯಲ್ಲಿ ಓದಿದ ಹಳೆಯ ವಿದ್ಯಾರ್ಥಿಗಳನ್ನು ಒಗ್ಗೂಡಿಸಿ, ಶಾಲೆಯ ಅಭಿವೃದ್ಧಿಗಾಗಿ ಹಳೆಯ ವಿದ್ಯಾರ್ಥಿ ಸಂಘವನ್ನು ಸ್ಥಾಪಿಸಿದ್ದೇವೆ. ಡಿ.26ರಂದು ಬೆಳಗ್ಗೆ 10 ಗಂಟೆಗೆ ಫುಟ್ಬಾಲ್ ಪಂದ್ಯಾವಳಿಯ ಉದ್ಘಾಟನೆಯನ್ನು ಮಡಿಕೇರಿ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ ನೆರವೇರಿಸಲಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ, ಹಾಲುಗುಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಹಾಲುಗುಂದ ಗ್ರಾಮದ ತಕ್ಕಮುಖ್ಯಸ್ಥರು ಭಾಗವಹಿಸಲಿದ್ದಾರೆ ಎಂದರು.ಡಿ.28ರಂದು ಬೆಳಗ್ಗೆ ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ನಡೆಯಲಿದ್ದು, ವಾರ್ಷಿಕೋತ್ಸವದ ಉದ್ಘಾಟನೆಯನ್ನು ಬಿ.ಇ.ಓ ಪ್ರಕಾಶ್ ನೆರವೇರಿಸಲಿದ್ದಾರೆ. ಡಿ.29ರಂದು ಮಧ್ಯಾಹ್ನ 3 ಗಂಟೆಗೆ ಫೈನಲ್ ಪಂದ್ಯ ನಡೆಯಲಿದ್ದು, ಫೈನಲ್ ಪಂದ್ಯದ ಉದ್ಘಾಟನೆಯನ್ನು ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಸುಜಾಕುಶಾಲಪ್ಪ ಆಗಮಿಸಲಿದ್ದಾರೆ ಎಂದು ಪಂದಿಕಂಡ ದಿನೇಶ್ ಮಾಹಿತಿ ನೀಡಿದರು.

ಸನ್ಮಾನ:ಫೈನಲ್ ಪಂದ್ಯದ ಸಮಾರೋಪ ಸಮಾರಂಭದಲ್ಲಿ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ, ಎಂ.ಎಲ್.ಸಿ ಸುಜಾಕುಶಾಲಪ್ಪ ಹಾಗೂ ಹಾಲುಗುಂದ ಸರ್ಕಾರಿ ಹಿರಿಯ ‌ಪ್ರಾಥಮಿಕ ಶಾಲೆಯಲ್ಲಿ ಓದಿ, ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಹಾಲುಗುಂದ ಗ್ರಾಮದ ಸಾಧಕರನ್ನು ಸನ್ಮಾನಿಸಲಾಗುವುದೆಂದು ಹೇಳಿದರು.

ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಪಂದಿಕಂಡ ನಾಗೇಶ್ (ಈಶ್ವರ್) ಮಾತನಾಡಿ, ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್‌ನಲ್ಲಿ ನೋಂದಣಿಗೊಂಡ 18 ತಂಡಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಪಂದ್ಯಾವಳಿಯು ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಹಾಗೂ ರಾಜ್ಯ ಫುಟ್ಬಾಲ್ ಸಂಸ್ಥೆಯ ನಿಯಮಾವಳಿಯಂತೆ ಪಂದ್ಯ ನಡೆಯಲಿದೆ. ಜಿಲ್ಲಾ ಫುಟ್ಬಾಲ್ ಸಂಸ್ಥೆಯ, ರಾಷ್ಟ್ರಮಟ್ಟದ ಫುಟ್ಬಾಲ್ ತೀರ್ಪುಗಾರರು ಪಂದ್ಯಾವಳಿಯನ್ನು ನಿಯಂತ್ರಿಸಲಿದ್ದು, 7+2 ಆಟಗಾರ ಪಂದ್ಯಾವಳಿಯಲ್ಲಿ ರೋಲಿಂಗ್ ಸಬ್‌ಸ್ಟಿಟ್ಯೂಟ್‌ ಮಾಡಲು ಅವಕಾಶ ನೀಡಲಾಗಿದೆ. ಆದರೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಬಹುದಾಗಿದೆ ಎಂದರು.

ನಗದು ಬಹುಮಾನ: ಪಂದ್ಯಾವಳಿಯು‌ 25+25 ನಿಮಿಷಗಳಿಗೆ ಸೀಮಿತವಾಗಿದ್ದು, ಫುಟ್ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ 40 ಸಾವಿರ ಹಾಗೂ ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ 30 ಸಾವಿರ ನಗದು, ಆಕರ್ಷಕ ಟ್ರೋಫಿ ಮತ್ತು ವೈಯಕ್ತಿಕ ಬಹುಮಾನಗಳನ್ನು ನೀಡಲಿದ್ದೇವೆ ಎಂದು ನಾಗೇಶ್ ಮಾಹಿತಿ ನೀಡಿದರು.ಫೈನಲ್ ಪಂದ್ಯಕ್ಕೂ ಮೊದಲು ಲಯನ್ಸ್ ಸಂಸ್ಥೆಯ ವಿದ್ಯಾರ್ಥಿನಿಯರು ಹಾಗೂ ವೈಷ್ಣವಿ ಫುಟ್ಬಾಲ್ ಕ್ಲಬ್ ಮಹಿಳಾ ತಂಡಗಳ ನಡುವೆ ಪ್ರದರ್ಶನ ಪಂದ್ಯ ನಡೆಯಲಿದೆ ಎಂದರು.

ಈ ಸಂದರ್ಭ ಭಗವತಿ ಯೂತ್ ಕ್ಲಬ್ ಅಧ್ಯಕ್ಷ ಮಚ್ಚೆಟ್ಟೀರ ಮೋಹನ್ ಕಾರ್ಯಪ್ಪ, ಹಾಲಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಮೇಕೇರಿರ ವಿಜಯ್, ಬೆಳೆಗಾರರಾದ ಚೆಯ್ಯಂಡ ಭರತ್ ಹಾಜರಿದ್ದರು.