ಫೆ.10 ರಂದು ಚಂದ್ರಶೇಖರನಾಥ ಸ್ವಾಮೀಜಿಗಳ ಪುಣ್ಯಸ್ಮರಣೆ ಮತ್ತು ಗುರುವಂದನೆ ನಡೆಸಲು ಸಭೆಯಲ್ಲಿ ನಿರ್ಧರಿಸಿ. ಕಾರ್ಯಕ್ರಮದ ಅಂಗವಾಗಿ ಶ್ರೀಗಳ ಬೃಹತ್ ಮೆರವಣಿಗೆ, ಗುರುವಂದನೆ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನಿಸಲು ತೀರ್ಮಾನ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಪಟ್ಟಣದಲ್ಲಿ ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಭೈರವೈಕ್ಯ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಗಳ ಸಂಸ್ಮರಣೆ ಮತ್ತು ಶ್ರೀಮಠದ ಹಾಲಿ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಶ್ರೀಗಳ ಗುರುವಂದನೆ ಕಾರ್ಯಕ್ರಮ ನಡೆಸಲು ವಿಶ್ವ ಒಕ್ಕಲಿಗರ ಮಠದ ಅಭಿಮಾನಿ ಭಕ್ತರು ನಿರ್ಧರಿಸಿದರು.

ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ನಡೆದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ವಿಶ್ವ ಒಕ್ಕಲಿಗರ ಮಠದ ಅಭಿಮಾನಿಗಳು ಕುಮಾರ ಚಂದ್ರಶೇಖರನಾಥ ಸ್ವಾಮೀಜಿಗಳು ಪಟ್ಟಣದ ಬಸ್ ತಿಮ್ಮೇಗೌಡರ ಕುಟುಂಬಕ್ಕೆ ಸೇರಿದವರಾಗಿದ್ದು, ಸನ್ಯಾಸತ್ವ ಸ್ವೀಕರಿಸಿ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು.

ಶ್ರೀಗಳು ಭೈರವೈಕ್ಯರಾಗಿದ್ದು, ಫೆ.10ರಂದು ಅವರ ಜನ್ಮ ದಿನವಾಗಿರುವುದರಿಂದ ಪಟ್ಟಣದಲ್ಲಿ ಸಂಸ್ಮರಣೆ ಕಾರ್ಯಕ್ರಮ ನಡೆಸಿ ಪುಣ್ಯಸ್ಮರಣೆ ಮಾಡಲಾಗುವುದು. ಕೆಂಗೇರಿ ಮಠದ ಹಾಲಿ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಅವರು ಸನ್ಯಾಸತ್ವ ಸ್ವೀಕರಿಸಿದ ನಂತರ ಅವರಿಗೆ ತಾಲೂಕು ಮಟ್ಟದಲ್ಲಿ ಗುರುವಂದನೆ ಮಾಡಿ ಗೌರವಿಸಲಾಗಿಲ್ಲ. ಆದ್ದರಿಂದ ಫೆ.10 ರಂದು ಚಂದ್ರಶೇಖರನಾಥ ಸ್ವಾಮೀಜಿಗಳ ಪುಣ್ಯಸ್ಮರಣೆ ಮತ್ತು ಗುರುವಂದನೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಶ್ರೀಗಳ ಬೃಹತ್ ಮೆರವಣಿಗೆ, ಗುರುವಂದನೆ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನಿಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ತಾಲೂಕು ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮೆಣಸ ಕುಮಾರ್, ರಾಜ್ಯ ಕೈಮಗ್ಗ ನಿಗಮದ ಅಧ್ಯಕ್ಷ ಬಿ.ನಾಗೇಂದ್ರ ಕುಮಾರ್, ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ವಿ.ಡಿ.ಹರೀಶ್, ನಿವೃತ್ತ ಪ್ರಾಂಶುಪಾಲ ಕೆ.ಕಾಳೇಗೌಡ, ರಾಜ್ಯ ನಗರ ನೈರ್ಮಲ್ಯ ಮತ್ತು ಹಣಕಾಸು ಸಂಸ್ಥೆ ಮಾಜಿ ಅಧ್ಯಕ್ಷ ಮತ್ತಿಘಟ್ಟ ಕೃಷ್ಣಮೂರ್ತಿ, ಪುರಸಬಾ ಸದಸ್ಯ ಡಿ.ಪ್ರೇಂಕುಮಾರ್, ರೆವಿನ್ಯೂ ಅಧಿಕಾರಿಗಳಾದ ಚಂದ್ರಕಲಾ, ನರೇಂದ್ರ, ಜಗದೀಶ್, ತಾಲೂಕು ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಜಾನಪದ ಪರಿಷತ್ ಅಧ್ಯಕ್ಷ ಕತ್ತರಘಟ್ಟ ವಾಸು, ಕಸಾಪ ಮಾಜಿ ಅಧ್ಯಕ್ಷ ಎಂ.ಕೆ.ಹರಿಚರಣತಿಲಕ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್, ದೇವರಾಜು, ಬಿ.ಆರ್.ಪ್ರಸನ್ನ, ಕರವೇ ಜಿಲ್ಲಾಧ್ಯಕ್ಷ ಡಿ.ಎಸ್.ವೇಣು, ಬಳ್ಳೇಕೆರೆ ಮಂಜುನಾಥ್, ವಡಕಹಳ್ಳಿ ಮಂಜೇಗೌಡ, ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶಿವಮ್ಮ ಸೇರಿದಂತೆ ಹಲವರಿದ್ದರು.