ಕನ್ನಡಪ್ರಭ ವಾರ್ತೆ ಮಂಡ್ಯ

ಭೀಮನ ಅಮಾವಾಸ್ಯೆ ಅಂಗವಾಗಿ ಜಿಲ್ಲೆಯ ವಿವಿಧ ಶಕ್ತಿ ದೇವಾಲಯಗಳಲ್ಲಿ ಬುಧವಾರ ವಿಶೇಷ ಪೂಜಾ ಕಾರ್‍ಯಕ್ರಮಗಳು ನಡೆದವು. ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು.

ಮಂಡ್ಯ ನಗರದ ಶ್ರೀ ಕಾಳಿಕಾಂಬ ದೇವಸ್ಥಾನ, ಚಾಮುಂಡೇಶ್ವರಿ ದೇವಸ್ಥಾನ, ಶಂಕರಪುರದಲ್ಲಿರುವ ಶ್ರೀ ಗಂಗಾಧರೇಶ್ವರ, ಶ್ರೀರಂಗಪಟ್ಟಣದ ಗಂಜಾಂನ ಶ್ರೀ ನಿಮಿಷಾಂಭ, ಶ್ರೀ ಕ್ಷಣಾಂಭಿಕೆ, ಶ್ರೀಲಕ್ಷ್ಮೀದೇವಿ, ಪಾಂಡವಪುರ ತಾಲೂಕಿನ ಆರತಿ ಉಕ್ಕಡ, ಮಹಾಕಾಳಿ ದೇವಸ್ಥಾನ, ಮಳವಳ್ಳಿ ತಾಲೂಕಿನ ದಂಡಿನ ಮಾರಮ್ಮ, ಪಟ್ಟಲದಮ್ಮ, ನಾಗಮಂಗಲ ತಾಲೂಕಿನ ಮುಳುಕಟ್ಟಮ್ಮ, ಲಕ್ಷ್ಮೀದೇವಿ, ಮದ್ದೂರು ತಾಲೂಕಿನ ಮದ್ದೂರಮ್ಮ, ಆದಿಶಕ್ತಿ, ಕೆ.ಆರ್. ಪೇಟೆ ತಾಲೂಕಿನ ಪಟ್ಟಲದಮ್ಮ, ಕಿಕ್ಕೇರಮ್ಮ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ನಡೆದವು.

ನಗರದ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಬೆಳಗಿನಿಂದಲೇ ವಿಶೇಷ ಧಾರ್ಮಿಕ ಪೂಜಾ ವಿಧಿ- ವಿಧಾನಗಳು ನಡೆದವು. ಸಹಸ್ರಾರು ಮಂದಿ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ದೇವಸ್ಥಾನ ಟ್ರಸ್ಟ್‌ನವರು ಭಕ್ತಾದಿಗಳಿಗಾಗಿ ಪ್ರಸಾದ ವ್ಯವಸ್ಥೆಯನ್ನೂ ಮಾಡಿದ್ದರು. ಭೀಮನ ಅಮಾವಾಸ್ಯೆ ಪ್ರಯುಕ್ತ ಮನೆಗಳಲ್ಲಿ ಮಹಿಳೆಯರು ತಮ್ಮ ಗಂಡನಿಗೆ ಒಳಿತಾಗಬೇಕು ಎಂಬ ಕಾರಣದಿಂದ ಪಾದಪೂಜೆ ಮಾಡಿ ಖುಷಿಪಟ್ಟರು.