ಕನ್ನಡಪ್ರಭ ವಾರ್ತೆ ಮದ್ದೂರು

ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನಗರದ ಬಸ್ ನಿಲ್ದಾಣ ಸಮೀಪ ನೂತನ ಆಟೋ ನಿಲ್ದಾಣ ಮತ್ತು ಟ್ಯಾಕ್ಸಿ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿರುವ ಬ್ರಿಡ್ಜ್ ಆ್ಯಂಡ್ ರೂಫ್ಸ್ ಕಂಪನಿಯ ₹40 ಲಕ್ಷ ಸಿಎಸ್ ಆರ್ ನಿಧಿಯಿಂದ ಬಸ್ ನಿಲ್ದಾಣದ ಸಮೀಪದಲ್ಲಿ ಆಟೋ ನಿಲ್ದಾಣ ಹಾಗೂ ಸಂಸದರ ಪ್ರದೇಶಾಭಿವೃದ್ಧಿ ನಿಧಿ ₹30 ಲಕ್ಷ ಅನುದಾನದಿಂದ ಟ್ಯಾಕ್ಸಿ ನಿಲ್ದಾಣವನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.

ಈಗಾಗಲೇ ಮಂಡ್ಯದ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಸುಸಜ್ಜಿತ ಆಟೋ ನಿಲ್ದಾಣ ನಿರ್ಮಿಸಿಕೊಟ್ಟಿದ್ದೇವೆ. ಅದಾದ ನಂತರ ಮದ್ದೂರಿನಲ್ಲಿಯೂ ಆಟೋ ಮತ್ತು ಟ್ಯಾಕ್ಸಿ ನಿಲ್ದಾಣಗಳ ನಿರ್ಮಾಣಕ್ಕೆ ಚಾಲಕರಿಂದ ಮನವಿ ಬಂದ ಹಿನ್ನೆಲೆಯಲ್ಲಿ ಅವರ ಮನವಿಗೆ ಸ್ಪಂದಿಸಲಾಯಿತು ಎಂದರು.

ಎರಡು ಮೂರು ತಿಂಗಳಲ್ಲಿ ಎರಡು ನಿಲ್ದಾಣಗಳ ನಿರ್ಮಾಣ ಕಾಮಗಾರಿ ಮುಗಿಸಲಾಗುವುದು. ನಂತರದ ದಿನಗಳಲ್ಲಿ ಚಾಲಕರಿಗೆ ಮಾತ್ರವಲ್ಲದೆ, ಸಾರ್ವಜನಿಕರಿಗೂ ಹೆಚ್ಚು ಅನುಕೂಲವಾಗಲಿದೆ ಎಂದು ತಿಳಿಸಿದರು.


ಎರಡೂ ನಿಲ್ದಾಣಗಳಿಗೆ ಭೂಮಿಪೂಜೆ ನೆರವೇರಿಸಿದ ನಂತರ ಅನೇಕ ಆಟೋ ಮತ್ತು ಟ್ಯಾಕ್ಸಿ ಚಾಲಕರು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜತೆಯಲ್ಲಿದ್ದು ಧನ್ಯವಾದ ಸಲ್ಲಿಸಿದರು. ಈ ವೇಳೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಜೆಡಿಎಸ್ ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ತಾಲೂಕು ಘಟಕದ ಅಧ್ಯಕ್ಷ ಚಿಕ್ಕತಿಮ್ಮೇಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಳಿಯಪ್ಪ, ಮಹಿಳಾ ಘಟಕದ ಅಧ್ಯಕ್ಷೆ ದಿವ್ಯ ರಾಮಚಂದ್ರ ಶೆಟ್ಟಿ, ಮುಖಂಡರಾದ ಕೊಳಗೆರೆ ಶೇಖರ್, ಪ್ರಿಯಾಂಕಾ ಅಪ್ಪು ಗೌಡ, ಬ್ಯಾಡರಹಳ್ಳಿ ರಾಮಕೃಷ್ಣ ಮತ್ತಿತರರಿದ್ದರು.