14ರಂದು ಬಳ್ಳಾರಿಯಿಂದ ಬೆಂಗಳೂರಿಗೆ ಬೈಕ್ ರೈಡಿಂಗ್‌

| Published : Sep 13 2025, 02:05 AM IST

ಸಾರಾಂಶ

ಬೆಂಗಳೂರಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯಿಂದ 10 ಅನುಭವಿ ಬೈಕ್ ರೈಡರ್‌ಗಳು ಪಾಲ್ಗೊಳ್ಳಲಿದ್ದು, ಸೆ. 14ರಂದು ಬೆಳಗ್ಗೆ 10.30ಕ್ಕೆ ಬಳ್ಳಾರಿಯಿಂದ ರಾಷ್ಟ್ರಧ್ವಜದೊಂದಿಗೆ ಬೆಂಗಳೂರಿಗೆ ತೆರಳಲಿದ್ದಾರೆ.

ಬಳ್ಳಾರಿ: ಬೆಂಗಳೂರಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯಿಂದ 10 ಅನುಭವಿ ಬೈಕ್ ರೈಡರ್‌ಗಳು ಪಾಲ್ಗೊಳ್ಳಲಿದ್ದು, ಸೆ. 14ರಂದು ಬೆಳಗ್ಗೆ 10.30ಕ್ಕೆ ಬಳ್ಳಾರಿಯಿಂದ ರಾಷ್ಟ್ರಧ್ವಜದೊಂದಿಗೆ ಬೆಂಗಳೂರಿಗೆ ತೆರಳಲಿದ್ದಾರೆ. ಈ ಕುರಿತು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್. ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುವ ವಿವಿಧ ಕಾರ್ಯಕ್ರಮಗಳನ್ನು ಇಲಾಖೆಗಳ ಸಹಯೋಗದೊಂದಿಗೆ ಯಶಸ್ವಿಗೊಳಿಸಬೇಕು. ಸೆ. 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ “ನನ್ನ ಮತ ನನ್ನ ಹಕ್ಕು” ಎಂಬ ಧ್ಯೇಯವಾಕ್ಯದಡಿ ಜಿಲ್ಲಾಮಟ್ಟದಲ್ಲಿ ಬೈಕ್ ರ‍್ಯಾಲಿ ಹಾಗೂ ಸೈಕಲ್ ರ‍್ಯಾಲಿಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಎಲ್ಲ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಬೈಕ್ ರ‍್ಯಾಲಿಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಬಳ್ಳಾರಿ ಜಿಲ್ಲೆಯ ಎಲ್ಲ ಕ್ಷೇತ್ರಗಳ ಶಾಸಕರು ಚಾಲನೆ ನೀಡಲಿದ್ದಾರೆ. ಸೆ. 15ರಂದು ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ಏರ್ಪಡಿಸಿರುವ ಸೈಕಲ್ ರ‍್ಯಾಲಿಗೆ ಬೆಳಗ್ಗೆ 8 ಗಂಟೆಗೆ ನೂತನ ಜಿಲ್ಲಾಡಳಿತ ಭವನದಿಂದ ಗಡಿಗಿ ಚೆನ್ನಪ್ಪ ವೃತ್ತದಿಂದ ಕನಕ ದುರ್ಗಮ್ಮ ದೇವಸ್ಥಾನ ಮಾರ್ಗವಾಗಿ ಎಚ್.ಆರ್. ಗವಿಯಪ್ಪ ವೃತ್ತದಿಂದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆ ಕಾರ್ಯಕ್ರಮಕ್ಕೆ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದರು.

ರ‍್ಯಾಲಿ ಮಾರ್ಗದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ವ್ಯವಸ್ಥೆ, ಲಘು-ಉಪಾಹಾರ ವ್ಯವಸ್ಥೆ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜು, ಡಿಎಚ್‌ಒ ಡಾ. ಯಲ್ಲಾ ರಮೇಶ್ ಬಾಬು, ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀನಿವಾಸ ಗಿರಿ ಇದ್ದರು.