ವಿಜಯಪುರ: ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ವಿಜಯಪುರ ಜಿಲ್ಲೆಯಲ್ಲಿ ಬಿಜೆಪಿ ನಾಯಕರು ಗುರುವಾರ ಬರ ವೀಕ್ಷಣೆ ಹಾಗೂ ಅಧ್ಯಯನ ನಡೆಸಿದರು.
ವಿಜಯಪುರ: ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ವಿಜಯಪುರ ಜಿಲ್ಲೆಯಲ್ಲಿ ಬಿಜೆಪಿ ನಾಯಕರು ಗುರುವಾರ ಬರ ವೀಕ್ಷಣೆ ಹಾಗೂ ಅಧ್ಯಯನ ನಡೆಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ನೇತೃತ್ವದ ತಂಡ ಜಿಲ್ಲೆಯ ಮುದ್ದೇಬಿಹಾಳ, ಸಿಂದಗಿ, ದೇವರ ಹಿಪ್ಪರಗಿ ಹಾಗೂ ನಾಗಠಾಣ ವಿಧಾನಸಭಾ ಕ್ಷೇತ್ರಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರದ ಪರಿಸ್ಥಿತಿ ಪರಿಶೀಲಿಸಿತು. ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಕೇಸರಿ ಪಾಳಯದ ತಂಡ ಬೆಳೆ ಹಾನಿ ವೀಕ್ಷಣೆ ಮಾಡಿತು.
ಮುಂಗಾರು ಆರಂಭದಲ್ಲಿ ಸುರಿದ ಅಲ್ಪ ಪ್ರಮಾಣದ ಮಳೆಯನ್ನು ನಂಬಿ ರೈತರು ಬಿತ್ತನೆ ಮಾಡಿದ್ದರೂ ನಂತರ ಮಳೆ ಕೈಕೊಟ್ಟ ಪರಿಣಾಮ ತೊಗರಿ, ಉದ್ದು, ಹೆಸರು ಸೇರಿದಂತೆ ವಿವಿಧ ಮಳೆಯಾಶ್ರಿತ ಬೆಳೆಗಳು ಒಣಗುತ್ತಿರುವುದಾಗಿ ರೈತರು ಬಿಜೆಪಿ ಮುಖಂಡರ ಬಳಿ ಅಳಲು ತೋಡಿಕೊಂಡರು.ಬಳಿಕ ದೇವರಹಿಪ್ಪರಗಿ ತಾಲೂಕಿನ ಕಡ್ಲೇವಾಡ, ಮುಳಸಾವಳಗಿ ಬಳಿಯ ಬರಿದಾದ ಕೆರೆಯನ್ನು ವೀಕ್ಷಣೆ ಮಾಡಿದರು. ರೈತರೊಂದಿಗೆ ಬಿಜೆಪಿ ನಾಯಕರು ಸಂವಾದ ನಡೆಸಿ ಬರದ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ನಂತರ ಜಮೀನಿನಲ್ಲಿ ಹಾಳಾಗಿರುವ ಬೆಳೆಗಳನ್ನೂ ಪರಿವೀಕ್ಷಣೆ ಮಾಡಿ ಹಾನಿಯ ಕುರಿತು ಮಾಹಿತಿ ಪಡೆದರು.
ಬರ ಪರಿಸ್ಥಿತಿಯನ್ನು ಎದುರಿಸಲು ಯುದ್ಧೋಪಾಯದಿಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ನೀರಿಲ್ಲದೇ ಒಣಗಿರುವ ಕೆರೆಗಳ ಹೂಳು ತೆಗೆದು, ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸಬೇಕು. ಆಲಮಟ್ಟಿ ಜಲಾಶಯದಿಂದ ತಕ್ಷಣದಲ್ಲಿ ನೀರು ಹರಿಸಿ ಕೆರೆಗಳನ್ನು ಭರ್ತಿ ಮಾಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದರು.ಬರ ಅಧ್ಯಯನ ತಂಡದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ, ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಾಜಿ ಶಾಸಕರಾದ ರಮೇಶ ಭೂಸನೂರ, ಸೋಮನಗೌಡ ಪಾಟೀಲ ಸಾಸನೂರ, ದುರ್ಯೋಧನ ಐಹೊಳೆ, ಮುಖಂಡರಾದ ಡಾ.ಸುರೇಶ ಬಿರಾದಾರ, ಉಮೇಶ ಕಾರಜೋಳ, ವಿಜುಗೌಡ ಪಾಟೀಲ, ಸ್ವಪ್ನಾ ಕಣಮುಚನಾಳ, ಸಂಜೀವ ಐಹೊಳೆ, ಶಿವರಾಜ ಕೆಂಗನಾಳ ಸೇರಿದಂತೆ ಜಿಲ್ಲೆಯ ಮುಖಂಡರು ಇದ್ದರು.
