- ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿಕೆ । ಚನ್ನಗಿರಿ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಕ್ರಮ
- - -ಕನ್ನಡಪ್ರಭ ವಾರ್ತೆ ಚನ್ನಗಿರಿ
ದೇಶ ರಕ್ಷಣೆಗೆ, ಭಾರತ ದೇಶದ ಮೂಲ ನಿವಾಸಿಗಳ ರಕ್ಷಣೆಗಾಗಿ ಹುಟ್ಟಿಕೊಂಡ ಭಾರತೀಯ ಜನತಾ ಪಕ್ಷವು ಸಂಘಟನೆಯ ಮೂಲಕ ವಿಶ್ವದಲ್ಲಿಯೇ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ರಾಜಕೀಯ ಪಕ್ಷವಾಗಿ ಖ್ಯಾತಿ ಗಳಿಸಿದೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದರು.ಶನಿವಾರ ತಾಲೂಕಿನ ಮಾವಿನಹೊಳೆ ಗ್ರಾಮದ ಶ್ರೀ ಗುರುಮಹಾರುದ್ರ ಸ್ವಾಮಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಚನ್ನಗಿರಿ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಪಶ್ವಿಮ ಬಂಗಾಳದಲ್ಲಿನ ಬಿಜೆಪಿ ಕಾರ್ಯಕರ್ತರು ನಕಲಿ ಮತದಾರರನ್ನು ಹುಡುಕಿ ಅವರ ಮತದಾನದ ಹಕ್ಕನ್ನು ರದ್ದುಪಡಿಸಿದ ಕಾರಣ ಸ್ವತಂತ್ರ್ಯ ಭಾರತದ ನಂತರ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರವನ್ನು ಹಿಡಿಯಲು ಸಾಧ್ಯವಾಗಿದೆ. ಕಾರ್ಯಕರ್ತರು ಮನಸ್ಸು ಮಾಡಿದರೆ ಯಾವುದು ಅಸಾಧ್ಯವಿಲ್ಲ ಎಂಬುದಕ್ಕೆ ಪಶ್ಚಿಮ ಬಂಗಾಳದ ಚುನಾವಣೆಯೇ ಸಾಕ್ಷಿಯಾಗಿದೆ ಎಂದರು.
ಜೂನ್ 20ರಿಂದ ನಮ್ಮ ರಾಜ್ಯದಲ್ಲಿಯೂ ಎಸ್.ಐ.ಆರ್. ಪ್ರಾರಂಭಗೊಳ್ಳಲಿದ್ದು, ನಮ್ಮ ಪಕ್ಷದ ಕಾರ್ಯಕರ್ತರು ಅಕ್ರಮ ಮತದಾರರನ್ನು ಹುಡುಕಿ ಅವರನ್ನು ಹೊರಹಾಕಬೇಕಾಗಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. 2023ರ ಚುನಾವಣೆ ಸಂದರ್ಭ ₹370 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನಡೆಸಿದ್ದೆ. ಅನಂತರ ಶಾಸಕರಾಗಿ ಬಂದವರು ಆ ಕೆಲಸಗಳನ್ನೇ ಮಾಡಿಸುತ್ತಾ ಇದು ನಾನು ತಂದ ಅನುದಾನ ಎಂದು ಹೇಳಿಕೊಂಡು ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ. ಕ್ಷೇತ್ರದ ಜನತೆ ಎಲ್ಲ ತಿಳಿದವರಿದ್ದು, ಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಎರಡು ಬಾರಿ ಶಾಸಕನಾಗಿದ್ದ ಸಂದರ್ಭದಲ್ಲಿ ಕ್ಷೇತ್ರದ ಪ್ರತಿ ಹಳ್ಳಿಗಳಿಗೂ ಕುಡಿಯುವ ನೀರು, ರಸ್ತೆ, ಚರಂಡಿ, ಶಾಲಾ ಕಟ್ಟಡ, ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳು ಸೇರಿದಂತೆ ಹಲವಾರು ಜನಪರ ಕೆಲಸಗಳನ್ನು ಮಾಡಿದ್ದೆ. ಇದರ ಫಲವಾಗಿ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಜನರು ಮನ್ನಣೆ ನೀಡುತ್ತಿದ್ದಾರೆ ಎಂದರು.ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಬಿಜೆಪಿ ಇತಿಹಾಸ ಮತ್ತು ವಿಕಾಸ ಎಂಬ ವಿಷಯ ಬಗ್ಗೆ ಸಮಗ್ರವಾಗಿ ಮಾತನಾಡಿದವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಧನಂಜಯ ಕಡ್ಲೆಬಾಳು, ರಾಜ್ಯ ಪರಿಷತ್ ಸದಸ್ಯ ಮಾಡಾಳು ಮಲ್ಲಿಕಾರ್ಜುನ್, ತಾಲೂಕು ಬಿಜೆಪಿ ಅಧ್ಯಕ್ಷ ಮಲಹಾಳ್ ಡಿ.ಸಿ. ಕುಮಾರಸ್ವಾಮಿ, ತರಕಾರಿ ಮಂಜುನಾಥ್, ಕುಬೇಂದ್ರೋಜಿ ರಾವ್, ಸಿ.ಎಂ. ಗುರುಸಿದ್ದಯ್ಯ, ಹರೋನಹಳ್ಳಿ ಮಲ್ಲಿಕಾರ್ಜುನ್, ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.
- - --16ಕೆಸಿಎನ್ಜಿ1:
ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರು ಭಾರತ ಮಾತೆ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸುವ ಮೂಲಕ ಸಮಾರಂಭ ಉದ್ಘಾಟಿಸಿದರು. ಶಿವಮೊಗ್ಗ ನಗರ ಕ್ಷೇತ್ರ ಶಾಸಕ ಚನ್ನಬಸಪ್ಪ ಮತ್ತಿತರ ಗಣ್ಯರು ಇದ್ದರು.