ಬಿಜೆಪಿ- ಜೆಡಿಎಸ್‌ ಮಧ್ಯೆ ಮೇಲ್ಮನೆಗೂ ದೋಸ್ತಿ

| Published : May 12 2024, 01:15 AM IST / Updated: May 12 2024, 09:03 AM IST

ಸಾರಾಂಶ

ಲೋಕಸಭಾ ಚುನಾವಣೆ ಬಳಿಕ ವಿಧಾನಪರಿಷತ್‌ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿದಿದ್ದು, ಬಿಜೆಪಿ ಐದು ಸ್ಥಾನ ಮತ್ತು ಜೆಡಿಎಸ್‌ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿದೆ. ಬಿಜೆಪಿ ಹೈಕಮಾಂಡ್‌ ಐದು ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ.

 ಬೆಂಗಳೂರು :  ಲೋಕಸಭಾ ಚುನಾವಣೆ ಬಳಿಕ ವಿಧಾನಪರಿಷತ್‌ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿದಿದ್ದು, ಬಿಜೆಪಿ ಐದು ಸ್ಥಾನ ಮತ್ತು ಜೆಡಿಎಸ್‌ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿದೆ. ಬಿಜೆಪಿ ಹೈಕಮಾಂಡ್‌ ಐದು ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ.

ಶನಿವಾರ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯಿಂದ ಟಿಕೆಟ್‌ ಘೋಷಣೆ ಮಾಡಿದ್ದು, ಮೇಲ್ಮನೆಯ ಇಬ್ಬರು ಹಾಲಿ ಸದಸ್ಯರು ಸೇರಿ ಐವರಿಗೆ ಹೆಸರನ್ನು ಪ್ರಕಟಿಸಿದೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ ಎ.ದೇವೇಗೌಡ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿಗೆ ಟಿಕೆಟ್‌ ನೀಡಲಾಗಿದೆ. ಇನ್ನುಳಿದಂತೆ ಈಶಾನ್ಯ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್‌ ಮಾಜಿ ಸದಸ್ಯ ಅಮರನಾಥ ಪಾಟೀಲ್‌, ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ। ಧನಂಜಯ್ ಸರ್ಜಿ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ.ನಿಂಗರಾಜು ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ.

ಇನ್ನುಳಿದ ಒಂದು ಕ್ಷೇತ್ರವಾದ ನೈಋತ್ಯ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಮೇಲ್ಮನೆ ಹಾಲಿ ಸದಸ್ಯ ಎಸ್‌.ಎಲ್‌.ಭೋಜೇಗೌಡ ಅವರಿಗೆ ಜೆಡಿಎಸ್‌ ಟಿಕೆಟ್‌ ನೀಡುವುದು ಖಚಿತವಾಗಿದೆ. ಅವರೇ ಈ ಬಾರಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಆದರೆ, ಈವರೆಗೆ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಶೀಘ್ರದಲ್ಲಿಯೇ ಅಧಿಕೃತವಾಗಿ ಹೆಸರನ್ನು ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

ಮುಂದಿನ ತಿಂಗಳು 3ರಂದು ನಡೆಯುವ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಮೇ16ರಂದು ಉಮೇದುವಾರಿಕೆ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ 20ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಜೂ.6ರಂದು ಮತ ಎಣಿಕೆ ನಡೆಯಲಿದೆ.

ಬಿಜೆಪಿ ಟಿಕೆಟ್‌ ಘೋಷಣೆ ಮಾಡಿರುವುದರಿಂದ ಅಭ್ಯರ್ಥಿಗಳು ಸೋಮವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನು ಆರಂಭಿಸುವ ಸಾಧ್ಯತೆ ಇದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಿ ಫಾರಂ ನೀಡಿದ ಬಳಿಕ ಉಮೇದುವಾರಿಕೆ ಸಲ್ಲಿಕೆ ಮಾಡಲಾಗುವುದು. ಅಲ್ಲದೇ, ಅಭ್ಯರ್ಥಿಗಳು ಬಿರುಸಿನ ಪ್ರಚಾರವನ್ನು ಪ್ರಾರಂಭಿಸಲಿದ್ದಾರೆ.