ನಾಗಮಂಗಲ ಘಟನೆಗೆ ಬಿಜೆಪಿ ನಾಯಕರು ಕೆಂಡ

| Published : Sep 13 2024, 01:40 AM IST

ಸಾರಾಂಶ

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆಯನ್ನು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಘಟನೆಗೆ ಸರ್ಕಾರದ ವೈಫಲ್ಯವೇ ಕಾರಣವಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆಯನ್ನು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಘಟನೆಗೆ ಸರ್ಕಾರದ ವೈಫಲ್ಯವೇ ಕಾರಣವಾಗಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ, ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ, ಶಾಸಕ ಸುನಿಲ್‌ ಕುಮಾರ್‌ ಸೇರಿದಂತೆ ಹಲವರು ಘಟನೆಯನ್ನು ಖಂಡಿಸಿ ಸರ್ಕಾರದ ವೈಫಲ್ಯವೇ ಕಾರಣ ಎಂದು ಟೀಕಿಸಿದ್ದಾರೆ.

ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ನಾಗಮಂಗಲದಲ್ಲಿನ ಘಟನೆಯು ಸಮಾಜದ ಶಾಂತಿ ಮತ್ತು ಏಕತೆಗೆ ಧಕ್ಕೆಯನ್ನುಂಟು ಮಾಡಿದೆ. ಧರ್ಮ, ಜಾತಿ ಅಥವಾ ಇತರೆ ಕಾರಣಗಳಿಂದ ಯಾವ ರೀತಿಯ ಅಹಿತಕರ ವರ್ತನೆಗಳು ಸಹ ಸಮರ್ಥನೀಯವಲ್ಲ. ಕಿಡಿಗೇಡಿತನದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಘಟನೆ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸರ್ಕಾರ ಸಮುದಾಯಗಳ ನಡುವೆ ನೆಮ್ಮದಿಯನ್ನು ಕಾಪಾಡಲು ಸಹಕರಿಸಬೇಕು. ಭಯ, ಅಸಹನೆ ಮತ್ತು ಅಶಾಂತಿ ಎಂಬುವಂತಹ ಸ್ಥಿತಿಗಳನ್ನು ತಡೆಯಬೇಕು ಎಂದು ಆಗ್ರಹಿಸಿದರು.

ಮಾಜಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ನಮ್ಮ ರಕ್ಷಣೆಗೆ ಹಿಂದುಗಳು ಸಹ ಖಡ್ಗ ಹಿಡಿದುಕೊಂಡು ಓಡಾಡುವ ಸಮಯ ಬಂದಿದೆ. ರಾಜ್ಯದಲ್ಲಿ ಯೋಗಿ ಮಾದರಿಯ ಆಡಳಿತ ಮತ್ತು ಯೋಗಿಯಂತಹ ನಾಯಕ ಬೇಕಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಗಳು ಖಡ್ಗ ಹಿಡಿದ ದಿನ ಇರುವುದಿಲ್ಲ. 2013ರಿಂದ 2018 ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿದ್ದು, ಆಗಲೂ ಹಿಂದುಗಳ ಕಗ್ಗೊಲೆ ಆಗ್ತಿತ್ತು. ಸಿದ್ದರಾಮಯ್ಯ ಸರ್ಕಾರ ಬಂದರೆ ಅದು ತಾಲಿಬಾನ್ ಸರ್ಕಾರ ಆಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಸುನಿಲ್‌ ಕುಮಾರ್‌ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ, ಶಾಂತಿಯುತವಾಗಿ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ವೇಳೆ ಉದ್ದೇಶಪೂರ್ವಕವಾಗಿಯೇ ಸಮುದಾಯವೊಂದು ದಾಂಧಲೆ ನಡೆಸಿದೆ. ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹಿಂದುಗಳನ್ನು ಗುರಿಯಾಗಿಸಿ, ಹಿಂದುಗಳ ಆಚರಣೆಗೆ ಅಡ್ಡಿಪಡಿಸಲಾಗುತ್ತಿದೆ. ಘಟನೆಯ ಹೊಣೆಯನ್ನು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಹೊರಬೇಕು ಎಂದು ಕಿಡಿಕಾರಿದ್ದಾರೆ.

======

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡಲು ಹೊರಟಿದೆ. ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ದುಷ್ಕೃತ್ಯ ಖಂಡನೀಯ. ಸರ್ವ ಜನಾಂಗದ ಶಾಂತಿಯ ತೋಟ ಎಂಬಂತಿರುವ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ರಾಜಕೀಯ ತುಷ್ಟೀಕರಣಕ್ಕಾಗಿ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.ಇಸ್ಲಾಮಿಕ್ ಮತಾಂಧರಿಗೆ ನಮ್ಮ ಸರ್ಕಾರ ಎನಿಸಿದೆ. ಹೀಗಾಗಿ ಗಲಭೆ ಮಾಡಿದ್ದಾರೆ. ಇದು ಸರ್ಕಾರದ ವೈಫಲ್ಯವಾಗಿದ್ದು, ಓಲೈಕೆ ರಾಜಕೀಯ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಎಲ್ಲದಕ್ಕೂ ಮಧ್ಯಪ್ರದೇಶ ಮಾಡಲು ಸಾಧ್ಯವಿಲ್ಲ. ಪೆಟ್ರೋಲ್ ಬಾಂಬ್ ಎಲ್ಲಾ ಬಳಕೆ ಆಗಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಮಾಹಿತಿ ಸಂಗ್ರಹ ಮಾಡಿ ಕೇಂದ್ರ ಗೃಹ ಸಚಿವರ ಜೊತೆ ಮಾತನಾಡುತ್ತೇವೆ ಎಂದು ಹೇಳಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದುಗಳನ್ನು ತುಳಿಯುವ ಕೆಲಸವಾಗುತ್ತಿದೆ. ಹಿಂದೂಗಳಿಗೆ ನಿರಂತರವಾಗಿ ಅಪಮಾನವಾಗುತ್ತಿದೆ. ನಾಗಮಂಗಲದಲ್ಲಿ ನಡೆದ ಘಟನೆಯು ದುಃಖ ತಂದಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಹಿಂದೂಗಳು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು.ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಮಾತನಾಡಿ, ನಾಗಮಂಗಲದಲ್ಲಿ ನಡೆದ ಘಟನೆಯು ಪೂರ್ವ ನಿಯೋಜಿತವಾಗಿದೆ. ಅವರ ಮತವೇ ಇನ್ನೊಬ್ಬರನ್ನು ಸಹಿಸದೇ ಇರುವುದು. ಗಣೇಶೋತ್ಸವ ಆ ರಸ್ತೆಯಲ್ಲಿ ಹೋಗಬಾರದು ಎನ್ನೋದಕ್ಕೆ ಅವರು ಯಾರು? ಕಲ್ಲು ರೆಡಿಯಾಗಿ ಇಟ್ಟಿದ್ದರು. ಬೀಗ ಹಾಕಿದ ಅಂಗಡಿ ಸುಟ್ಟಿದ್ದಾರೆ. ಗಲಭೆ ಎಬ್ಬಿಸಲೆಂದೇ ಕೃತ್ಯ ಎಸಗಿದ್ದಾರೆ. ತುಷ್ಟೀಕರಣದಿಂದ ಇದೆಲ್ಲಾ ನಡೆಯುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು.

==

ಪರಂ ಆಕಸ್ಮಿಕವಾಗೇ ರಾಜೀನಾಮೆ ನೀಡ್ಲಿ: ಯತ್ನಾಳ್‌ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗುಂಪು ಘರ್ಷಣೆ ವಿಷಯದಲ್ಲಿ ಪೊಲೀಸ್‌ ಇಲಾಖೆ ಸಂಪೂರ್ಣ ವಿಫಲವಾಗಿದೆ. ಇದು ಆಕಸ್ಮಿಕ ಘಟನೆ ಎಂದಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಆಕಸ್ಮಿಕವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಆಗ್ರಹಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮಂಗಲದ ಘಟನೆ ವ್ಯವಸ್ಥಿತವಾಗಿ ನಡೆದಿದೆ. ಪೂರ್ವ ತಯಾರಿ ಮಾಡಿಕೊಂಡು ಗಣೇಶ ಮೂರ್ತಿ ಮೆರವಣಿಗೆ ಮೇಲೆ ಪೆಟ್ರೋಲ್‌ ಬಾಂಬ್‌ ಹಾಗೂ ಕಲ್ಲು ತೂರಾಟ ಮಾಡಲಾಗಿದೆ. ಈ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಬಾಲ ಬಿಚ್ಚುತ್ತಿದ್ದಾರೆ. ಸರ್ಕಾರಕ್ಕೆ ಹಿಂದೂಗಳ ಮೇಲೆ ಕಳಕಳಿ ಇದ್ದಲ್ಲಿ ಈ ಘಟನೆ ಹಿಂದೆ ಇರುವವರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.