ಭಾರತೀಯ ಜನತಾ ಪಕ್ಷದ ತೆಕ್ಕೆಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರವನ್ನು ತೆಗೆದುಕೊಳ್ಳಲು ಕ್ಷೇತ್ರದ ಎಲ್ಲಾ ಬಿಜೆಪಿ ಕಾರ್ಯಕರ್ತರು ಪಣ ತೊಡಬೇಕೆಂದು ತುರುವೇಕೆರೆ ಮಂಡಲದ ಅಧ್ಯಕ್ಷ ಡೊಂಕಿಹಳ್ಳಿ ಪ್ರಕಾಶ್ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.
ಕನ್ನಡಪ್ರಭ ವಾರ್ತೆ ತುರುವೇಕೆರೆ
2028 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅತ್ಯಂತ ಬಹುಮತದಿಂದ ಗೆಲ್ಲಿಸಿ ಮತ್ತೊಮ್ಮೆ ಭಾರತೀಯ ಜನತಾ ಪಕ್ಷದ ತೆಕ್ಕೆಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರವನ್ನು ತೆಗೆದುಕೊಳ್ಳಲು ಕ್ಷೇತ್ರದ ಎಲ್ಲಾ ಬಿಜೆಪಿ ಕಾರ್ಯಕರ್ತರು ಪಣ ತೊಡಬೇಕೆಂದು ತುರುವೇಕೆರೆ ಮಂಡಲದ ಅಧ್ಯಕ್ಷ ಡೊಂಕಿಹಳ್ಳಿ ಪ್ರಕಾಶ್ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.ಮಾಜಿ ಶಾಸಕ ಮಸಾಲಾ ಜಯರಾಮ್ ರವರ ಫಾರಂ ಹೌಸ್ ನಲ್ಲಿ ನಡೆದ ತಾಲೂಕು ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಲವು ಸಣ್ಣಪುಟ್ಟ ಲೋಪದೋಷಗಳಿಂದಾಗಿ ಗೆಲುವು ಕೈ ತಪ್ಪಿತ್ತು. ಕಳೆದ ಬಾರಿ ಆಗಿರುವ ಅನುಭವವನ್ನು ಅರಿತು ಪಕ್ಷ ಸಂಘಟನೆ ಮಾಡೋಣ. ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಮಸಾಲಾ ಜಯರಾಮ್ ರವರನ್ನು ಅಭ್ಯರ್ಥಿ ಮಾಡಿ ಗೆಲುವು ಸಾಧಿಸೋಣ ಎಂದರು.
ಮಾಜಿ ಶಾಸಕ ಮಸಾಲಾ ಜಯರಾಮ್ ಮಾತನಾಡಿ ಮುಂಬರುವ ನವೆಂಬರ್ ನಲ್ಲಿ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳು ಬರಲಿದೆ. ಹಾಗಾಗಿ ನಮ್ಮ ಎಲ್ಲಾ ಕಾರ್ಯಕರ್ತರು ಸಜ್ಜಾಗಬೇಕು. ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಕಾರ್ಯಕರ್ತರು ಗೆದ್ದು ಬರಬೇಕು. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಎನ್ ಡಿ ಎ ಅಭ್ಯರ್ಥಿ ಯನ್ನು ಬಹುಮತದಿಂದ ಗೆಲ್ಲಿಸಲು ಮುಂದಾಗಬೇಕೆಂದರು.ಜಿಲ್ಲಾ ಉಸ್ತುವಾರಿ ಡಾ.ಶಿವಕುಮಾರ್ ಮಾತನಾಡಿ ಮುಂಬರುವ ದಿನಗಳಲ್ಲಿ ರೈತ ಮೋರ್ಚಾ, ಮಹಿಳಾ ಮೋರ್ಚಾ, ಹಿಂದುಳಿದ ವರ್ಗಗಳ ಮೋರ್ಚಾ, ಎಸ್ ಸಿ. ಎಸ್ಟಿ ಮೋರ್ಚಾ, ಅಲ್ಪಸಂಖ್ಯಾತರ ಮೋರ್ಚಾ ಸೇರಿದಂತೆ ವಿವಿಧ ಘಟಕಗಳ ರಚನೆ ಆಗಬೇಕು. ಪ್ರತಿಯೊಂದು ಘಟಕದಲ್ಲಿ 25 ಪದಾಧಿಕಾರಿಗಳನ್ನು ನೇಮಕ ಮಾಡಬೇಕೆಂದು ಸೂಚನೆ ನೀಡಿದರು.
ಬಿಜೆಪಿ ಮುಖಂಡರಾದ ಎಂ.ಡಿ.ಲಕ್ಷ್ಮೀನಾರಾಯಣ್, ಜಿಲ್ಲಾ ಕಾರ್ಯದರ್ಶಿ ಬಸವರಾಜು, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಕೆ.ಎಸ್.ರಾಧಾ, ಎಚ್.ಎಸ್.ಪ್ರಸಾದ್, ಯೋಗಾನಂದ್, ದಬ್ಬೇಘಟ್ಟ ಮಹೇಶ್ , ಸಿದ್ದಪ್ಪಾಜಿ ಉಪಸ್ಥಿತರಿದ್ದರು.