ಸಾರಾಂಶ
ಹುಬ್ಬಳ್ಳಿ:
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಬಗ್ಗೆ ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರು ಕೇವಲ ರಾಜಕಾರಣ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಬೇಸರ ವ್ಯಕ್ತಪಡಿಸಿದರು.ಅವರು ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಎಲ್ಲ ವಿಷಯದಲ್ಲಿಯೂ ಕೇವಲ ರಾಜಕಾರಣ ಮಾಡುತ್ತಾ ಬರುತ್ತಿದ್ದಾರೆ. ಉತ್ತರ ಕರ್ನಾಟಕದ ನೀರಾವರಿ, ಮಹದಾಯಿ ಸೇರಿದಂತೆ ಹಲವಾರು ವಿಷಯಗಳು ಚರ್ಚೆಯಾಗಬೇಕಿದೆ. ಅದಕ್ಕೆ ನಾವು ಸಿದ್ಧರಿದ್ದೇವೆ. ಆದರೆ, ಅದಕ್ಕೆ ಬಿಜೆಪಿಯವರಿಗೆ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣ ಹೊರತಾಯಿ ಬೇರೆ ವಿಚಾರ ಬೇಕಿಲ್ಲ. ಅವರ ಪಕ್ಷದಲ್ಲಿಯೇ ಒಗ್ಗಟ್ಟಿಲ್ಲದಂತಾಗಿದೆ ಎಂದು ದೂರಿದರು.
ಶೆಟ್ಟರ್-ಜೋಶಿ ಜವಾಬ್ದಾರಿ ವಹಿಸಲಿ:ಮಹದಾಯಿ ಯೋಜನೆ ತಾರ್ಕಿಕ ಅಂತ್ಯ ಕಾಣುವುದು ಯಾವಾಗ? ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಈ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಸಂಸದ ಜಗದೀಶ ಶೆಟ್ಟರ್ ಮಹದಾಯಿಗೆ ಅನುಮತಿ ಸಿಕ್ಕಿದೆ ಎಂದು ಪತ್ರ ಹರಿಬಿಟ್ಟು, ವಿಜಯೋತ್ಸವ ಆಚರಣೆ ಮಾಡಿದವರು. ಈಗ ಅವರಿಬ್ಬರು ಜವಾಬ್ದಾರಿ ವಹಿಸಿಕೊಂಡು ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.
ಸಚಿವರಿಗೆ ಮನವಿ:ಮಹದಾಯಿ ಯೋಜನೆ ಅನುಷ್ಠಾನಕ್ಕೆ ಅಗತ್ಯವಾದ ಕಾಮಗಾರಿಗೆ ರಾಜ್ಯ ಸರ್ಕಾರ ಟೆಂಡರ್ ಸೇರಿದಂತೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಹಾಗೂ ಅರಣ್ಯ ಇಲಾಖೆಯಿಂದ ಅನುಮತಿ ದೊರೆತ ತಕ್ಷಣವೇ ಕಾಮಗಾರಿ ಆರಂಭಿಸುತ್ತೇವೆ. ಈಗಾಗಲೇ ನಾನು ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾಗಿ, ಮನವಿ ಸಲ್ಲಿಸಿದ್ದೇನೆ. ಕೇಂದ್ರದಿಂದ ಅನುಮತಿ ದೊರೆಯುವ ವಿಶ್ವಾಸವಿದೆ ಎಂದರು.
ಕುನ್ಹಾ ಸಮಿತಿ ನೀಡಿದ ವರದಿ ಮೇಲೆ ಎಫ್ಐಆರ್ಕೋವಿಡ್ ಸಂದರ್ಭದಲ್ಲಿ ನಡೆದ ಅಕ್ರಮದ ಬಗ್ಗೆ ನ್ಯಾಯಮೂರ್ತಿ ಕುನ್ಹಾ ಅವರ ಸಮಿತಿ ನೀಡಿದ ವರದಿಯ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ. ನಾವು ಬಿಜೆಪಿಯವರ ಮೇಲೆ ಪ್ರಕರಣ ದಾಖಲಿಸಲು ತನಿಖೆ ಮಾಡಿಸುತ್ತಿಲ್ಲ. ಸಮಿತಿಯ ವರದಿ ಆಧರಿಸಿದ ಎಫ್ಐಆರ್ ದಾಖಲಾಗಿದ್ದು, ಅದರ ಆಧಾರದ ಮೇಲೆ ತನಿಖೆ ನಡೆಯಲಿದೆ. ಅಧಿಕಾರಿಗಳು ಕಾನೂನು ರೀತಿಯ ಮುಂದಿನ ಕ್ರಮಗಳನ್ನು ಕೈಗೊಳ್ಳಲಿದ್ದಾರೆ. ಇದರಲ್ಲಿ ಕಾಂಗ್ರೆಸ್ ಸರ್ಕಾರದ ಯಾವುದೇ ಹಸ್ತಕ್ಷೇಪ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.