ಕನ್ನಡಪ್ರಭ ವಾರ್ತೆ ಮೈಸೂರು
ರಾಜ್ಯದ ಮತದಾರರ ಪಟ್ಟಿಯಿಂದ 86 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಸುಳ್ಳು ಆರೋಪ ಮಾಡುವ ಮೂಲಕ ಜನರಲ್ಲಿ ಆತಂಕ ಮೂಡಿಸುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಕಿಡಿಕಾರಿದರು.ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯಿಂದ 86 ಲಕ್ಷ ಮತದಾರರನ್ನು ಕೈಬಿಡಲಾಗಿದೆ ಎಂದು ಹೇಳಿರುವುದು ಬೇಜವಾಬ್ದಾರಿತನದ ಪರಮಾವಧಿ. ರಾಜ್ಯದಲ್ಲಿ ಇನ್ನೂ ನೋಟಿಫಿಕೇಷನ್ ಆಗಿಲ್ಲ. ಮ್ಯಾಪಿಂಗ್ ಮಾಡುವ ಕೆಲಸ ನಡೆಯುತ್ತಿದೆ. ಆಗಲೇ ಮತದಾರರ ಪಟ್ಟಿಯ ಪರಿಷ್ಕರಣೆ ಆಗಿದೆ ಎಂದು ಸುಳ್ಳು ಸುದ್ದಿ ಹರಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ದೂರಿದರು.
ಇಂತಹ ರಾಷ್ಟ್ರ ದ್ರೋಹದ ಕೆಲಸ ಮಾಡುತ್ತಿರುವ ಕೆಪಿಸಿಸಿ ವಕ್ತಾರನನ್ನು ಕೂಡಲೇ ಬಂಧಿಸಬೇಕು. ಆತನ ವಿರುದ್ದ ರಾಜ್ಯ ಗೃಹ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು. ಚುನಾವಣಾ ಆಯೋಗ ಕೂಡ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಲು ಮುಂದಾಗಿರುವ ಅವರ ವಿರುದ್ಧ ಬಿಜೆಪಿ ವತಿಯಿಂದ ಅಧಿಕೃತವಾಗಿ ದೂರು ನೀಡುತ್ತೇವೆ ಎಂದು ಅವರು ಹೇಳಿದರು.ಸ್ಥಾಪಿತ ಹಿತಾಸಕ್ತಿಗಳ ಕೈವಾಡ
ನೀಟ್ ಪರೀಕ್ಷೆಗೂ ಮುನ್ನ ಪಶ್ನೆಪತ್ರಿಕೆ ಬಹಿರಂಗ ಆಗಿರುವುದರ ಹಿಂದೆ ಸ್ಥಾಪಿತ ಹಿತಾಸಕ್ತಿಗಳ ಕೈವಾಡವಿದೆ. ಇದರಿಂದ ಪರೀಕ್ಷೆಗೆ ಸಿದ್ಧವಾಗಿದ್ದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದರು.
ಇಂಧನ ಬಳಕೆ ಮಿತವ್ಯಯ, ಚಿನ್ನ ಖರೀದಿ ಕಡಿಮೆ ಮಾಡುವಂತೆ ಪ್ರಧಾನಿ ಮೋದಿ ನೀಡಿರುವ ಸಂದೇಶ ಕುರಿತು ಪ್ರತಿ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಇಂಧನ ಮತ್ತು ಚಿನ್ನದ ಅತಿಯಾದ ಆಮದಿನಿಂದಾಗಿ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿದೆ. ಇದನ್ನು ತಪ್ಪಿಸುವ ಸಲುವಾಗಿ ಪ್ರಧಾನಿ ಮೋದಿ ದೇಶದ ಜನರಿಗೆ ಸಂದೇಶ ನೀಡಿದ್ದಾರೆ ಎಂದು ಅವರು ಹೇಳಿದರು.
ಬಿಜೆಪಿ ಮುಖಂಡರಾದ ಗಿರಿಧರ್, ಸೋಮಸುಂದರ್, ಮಹೇಶ್ ರಾಜೇ ಅರಸ್ ಮೊದಲಾದವರು ಇದ್ದರು.