ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ವಿರೋಧಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅನುಷ್ಟಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ವಿರೋಧಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬುಧವಾರ ನಗರದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನಗರದ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಬಂದ ಪ್ರತಿಭಟನಾಕಾರರು ಒನಕೆ ಓಬವ್ವ ವೃತ್ತ ಸಭೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿದರು. ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಭಾರತದ ಸಂವಿಧಾನಕ್ಕೆ ವಿರುದ್ಧವಿದ್ದು, ನಾಗರಿಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸಂವಿಧಾನದ 19(1)ಪರಿಚ್ಛೇದ, (2)ಪರಿಚ್ಛೇದದಡಿ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಆಗುತ್ತದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರಕಾರ ಕಿತ್ತುಕೊಳ್ಳುತ್ತಿದೆ ಎಂದು ದೂರಿದರು.

ರೈತ ಮೋರ್ಚಾದ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್ ಮಾತನಾಡಿ, ಈ ವಿಧೇಯಕ ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದು ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಮಾತನಾಡಿ, ಈ ಕಾಯ್ದೆ ಜಾರಿಯಾಗುವುದರಿಂದ ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ ಮಾತ್ರವಲ್ಲ, ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನವಾಗಿದೆ. ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ. ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನು ಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ಕಾಯಿದೆ ನಮಗೆ ಬೇಕೇ ? ಎಂಬ ಪ್ರಶ್ನೆ ಮೂಡಿದೆ. ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಮತ್ತು ಜನರ ಧ್ವನಿಯನ್ನು ನಾಶಪಡಿಸುವ ಇಂತಹ ಕಾಯಿದೆ ಯಾವ ಕಾರಣಕ್ಕೂ ಜಾರಿಯಾಗಬಾರದು ಎಂದರು.

ಚಿತ್ರದುರ್ಗ ನಗರ ಮಂಡಲದ ಅಧ್ಯಕ್ಷ ಹೆಚ್.ಎನ್. ಲೋಕೇಶ್ ಮಾತನಾಡಿ ಕರ್ನಾಟಕ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಭಾರತದ ಸಂವಿಧಾನಕ್ಕೆ ವಿರುದ್ಧವಿದ್ದು, ನಾಗರೀಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ ಎಂದರು.

ಮಹಿಳಾ ಕಾರ್ಯಕಾರಿಣಿ ಸದಸ್ಯೆ ಶ್ಯಾಮಲಾ ಶಿವಪ್ರಕಾಶ್ ಮಾತನಾಡಿ, ಈ ವಿಧೇಯಕದಿಂದ ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಸುವವರು ಹೆಚ್ಚು ತೊಂದರೆಗೆ ಸಿಲುಕುತ್ತಾರೆ. ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಮತ್ತು ಜನರ ಧ್ವನಿಯನ್ನು ನಾಶಪಡಿಸುವ ಇಂತಹ ಕಾಯಿದೆ ಯಾವ ಕಾರಣಕ್ಕೂ ಜಾರಿಯಾಗಬಾರದು ಎಂದರು.

ಬಿಜೆಪಿ ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಜಿಲ್ಲಾ ಕಾರ್ಯದರ್ಶಿ ರಜನಿ, ರೇಖಾ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪಾಲಯ್ಯ, ಗ್ರಾಮಾಂತರ ಮಾಜಿ ಅಧ್ಯಕ್ಷ ಕಲ್ಲೇಶಯ್ಯ, ಸಿಂಧುತನಯ, ಲಿಂಗರಾಜು, ಬಸವೇಶ್, ಲಕ್ಷ್ಮೀ ನರಸಿಂಹಸ್ವಾಮಿ, ಕವಿತ ಜವಳಿ, ಬಸುರಾಜ್, ಮಂತೇಶ್, ಮಲ್ಲಿಕಾರ್ಜನ್ ಚಿನಪ್ಪ, ನಾಗರಾಜ್, ಪಾಲಯ್ಯ, ಬೋಮಣ್ಣ, ಸುಮಾ ಭಾರತಿ ಹರೀಶ್, ವಸಂತಾಚಾರ್, ಶಾಂತಮ್ಮ, ಕಿರಣ್, ರಂಗಸ್ವಾಮಿ, ಶಶಿಧರ್, ವಿಜಯಕುಮಾರ್, ಅಣ್ಣಪ್ಪ, ಪಲ್ಲವಿ ಪ್ರಸನ್ನ ಪ್ರತಿಭಟನೆ ನೇತೃತ್ವ ವಹಿಸಿದ್ದರು.