ಕನ್ನಡಪ್ರಭ ವಾರ್ತೆ ಪಾವಗಡ

ತಾಲೂಕಿನಲ್ಲಿ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ತೀವ್ರ ಕೊರತೆ ಮತ್ತು ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರ ಖಂಡಿಸಿ ಸೋಮವಾರ ತಾಲೂಕು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಧರಣಿ ನಡೆಸಿ ಗ್ರೇಡ್‌ 2 ತಹಸೀಲ್ದಾರ್‌ ರಿಗೆ ಮನವಿ ಪತ್ರ ಸಲ್ಲಿಸಿದರು.

ಬೆಳಿಗ್ಗೆ 11ಗಂಟೆಗೆ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ತಾಲೂಕಿನ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಸಮಾವೇಶಗೊಂಡು ಇಲ್ಲಿನ ಬಳ್ಳಾರಿ ರಸ್ತೆ ಮೂಲಕ ತೊಲಗಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ಎಂಬ ಘೋಷಣೆಗಳೊಂದಿಗೆ ಮೆರವಣಿಗೆ ಜಾಥ ತೆರಳಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಇದೇ ವೇಳೆ ಪ್ರತಿಭಟನೆ ನೇತೃತ್ವ ವಹಿಸಿದ್ದ ತಾಲೂಕು ಬಿಜೆಪಿಯ ಮಂಡಲ ಅಧ್ಯಕ್ಷ ದೊಡ್ಡಹಳ್ಳಿಯ ಡಿ.ಆರ್‌.ಅಶೋಕ್ ಮಾತನಾಡಿ, ತಾಲೂಕಿನ ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೀವ್ರ ಸಮಸ್ಯೆ ಎದುರಾಗಿದೆ. ಬಡ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದ್ದು, ಅಗತ್ಯ ಶಿಕ್ಷಕರ ನೇಮಕಾತಿ ಹಾಗೂ ನಿಯೋಜನೆಯಲ್ಲಿ ಸರ್ಕಾರ ವಿಫಲವಾಗಿದೆ. ಪರಿಣಾಮ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಇಲ್ಲಿನ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಫಲಾನುಭವಿಗಳ ಹೆಸರಿನಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಅರ್ಹರಿಗೆ ವಂಚನೆ ಅಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಇಲಾಖೆಯ ಭ್ರಷ್ಟಾಚಾರ ತಡೆಯದಿದ್ದರೆ ತಾಲೂಕು ಬಿಜೆಪಿಯ ಹೋರಾಟ ಇನ್ನಷ್ಟು ತೀವ್ರಗೊಳಿಸುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ಮೀನು ಸಾಕಾಣಿಕೆಯ ಟೆಂಡರ್‌ ಪ್ರಕ್ರಿಯೆ ಹಾಗೂ ವಿವಿಧ ಯೋಜನೆಯ ಅನುದಾನ ದುರುಪಯೋಗ ಕುರಿತು ತಾಲೂಕಿನ ಮೀನುಗಾರಿಕೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಇದೇ ರೀತಿ ನೈರ್ಮಲ್ಯ,ಸ್ವಚ್ಛತೆ,ಕುಡಿಯುವ ನೀರು ಹಾಗೂ ಇತರೆ ಯೋಜನೆ ಅಡಿಯ ಅಭಿವೃದ್ಧಿ ಹೆಸರಿನಲ್ಲಿ ತಾಲೂಕಿನ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ಈ ಹಿಂದೆ ನಡೆದಿದ್ದ ಅಕ್ರಮಗಳ ಬಗ್ಗೆ ತನಿಖೆ ನಡೆಸಬೇಕು. ಗ್ಯಾರಂಟಿಯ ಹೆಸರಿನಲ್ಲಿ ಜನಸಾಮಾನ್ಯರಿಗೆ ಸೂಕ್ತ ಸೌಲಭ್ಯ ಸಿಗುತ್ತಿಲ್ಲ ಎಂದು ಆರೋಪಿಸಿದರು. ಇದೇ ವೇಳೆ ಬಿಜೆಪಿ ಮಧುಗಿರಿ ಸಂಘಟನಾತ್ಮಕ ಜಿಲ್ಲಾ ಕೋರ್ ಕಮಿಟಿ ಸದಸ್ಯರಾದ ಡಾ.ಜಿ.ವೆಂಕಟರಾಮಯ್ಯ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾವಗಡದ ರವಿ, ಮಂಡಲ ಪ್ರಧಾನ ಕಾರ್ಯದರ್ಶಿ ಹನುಮಂತ ರೆಡ್ಡಿ, ಮಂಜು, ಮಾಧುರೆಡ್ಡಿ, ಕೋಟಗುಡ್ಡ ನಾರಾಯಣಪ್ಪ,ಕನಿಕಲಬಂಡೆ ನರಸಿಂಹಮೂರ್ತಿ,ಶೇಖರ್ ಬಾಬು,ಮದ್ದೆ ಶಿವು, ಮಲ್ಲಿಕಾರ್ಜುನ್,ರಂಗನಾಥ್, ಹರೀಶ್ ನಾಯ್ಕ ಸೇರಿದಂತೆ ಅನೇಕ ಮಂದಿ ಬಿಜೆಪಿಯ ಕಾರ್ಯಕರ್ತರು ಪಾಲ್ಗೊಂಡಿದ್ದರು.