ಸಾರಾಂಶ
ಕನ್ನಡಪ್ರಭ ವಾರ್ತೆ ಪುತ್ತೂರು ಕನಾಟಕ ಸರ್ಕಾರದ ಜನ ವಿರೋಧಿ, ಸ್ವಜನ ಪಕ್ಷಪಾತ, ಭ್ರಷ್ಟಾಚಾರ ಹಾಗೂ ವಿರೊಧ ಪಕ್ಷದ ದಮನನೀತಿ ವಿರೋಧಿಸಿ ಬಿಜೆಪಿಯಿಂದ ಸ್ಥಳೀಯಾಡಳಿತಗಳಾದ ಗ್ರಾ.ಪಂ.ಗಳು, ಪಟ್ಟಣ ಪಂಚಾಯಿತಿ, ನಗರಸಭೆಗಳ ಮುಂಭಾಗ ೨೩ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಜನವಿರೋಧಿ ನೀತಿ ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದು, ೯೪ಸಿ ಯಿಂದ ಆರಂಭಗೊಂಡು ವಾಲ್ಮೀಕಿ ನಿಗಮದ ತನಕ ರಾಜ್ಯದಲ್ಲಿ ಬಹಿರಂಗವಾಗಿ ಭ್ರಷ್ಟಾಚಾರ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ಸಂಘರ್ಷಕ್ಕೆ ರಾಜ್ಯ ಸರಕಾರ ಎಡೆ ಮಾಡಿಕೊಟ್ಟಿದೆ. ಇಲ್ಲಿನ ಕಲುಷಿತ ವಾತಾವರಣಕ್ಕೆ ಸರ್ಕಾರವೇ ನೇರ ಹೊಣೆಯಾಗಿದೆ ಎಂದರು.ಮೇ ತಿಂಗಳಲ್ಲಿ ಮಳೆ ಬಂದು ಪ್ರಾಕೃತಿಕ ವಿಕೋಪ ಆದಾಗ ಸರ್ಕಾರ ಗಾಢ ನಿದ್ರೆಯಲ್ಲಿತ್ತು. ಈ ಬಗ್ಗೆ ಸಭೆ ನಡೆಸಿರುವ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಪ್ರಾಕೃತಿಕ ವಿಕೋಪಗಳಿಗೆ ಪರಿಹಾರ ನೀಡಬೇಕು ಮತ್ತು ನಮ್ಮಲ್ಲಿ ಹಣಕಾಸಿನ ಸಮಸ್ಯೆ ಇಲ್ಲ, ಅಧಿಕಾರಿಗಳು ೨೪/೭ ಗ್ರಾಮದಲ್ಲೇ ವಾಸ್ತವ್ಯ ಮಾಡಬೇಕೆಂದು ತಿಳಿಸಿದ್ದಾರೆ. ಆದರೆ ಈ ಹೇಳಿಕೆ ಪತ್ರಿಕೆಗಳಿಗೆ ಸೀಮಿತವಾಗಿದೆ. ಪರಿಹಾರ ನೀಡಲು ಆದೇಶ ಮಾತ್ರ ಬಂದಿದ್ದು ಹಣ ಬಂದಿಲ್ಲ ಎಂದು ಗ್ರಾ.ಪಂನಿಂದ ಮಾಹಿತಿ ದೊರಕಿದೆ. ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರದಲ್ಲಿ ಬೇಕಾದಷ್ಟು ದುಡ್ಡಿದೆ ಎಂದು ಹೇಳಿದ್ದಾರೆ ಎಂದು ಟೀಕಿಸಿದರು.
ಸುದ್ಧಿಗೋಷ್ಠಿಯಲ್ಲಿ ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಅನಿಲ್ ತೆಂಕಿಲ, ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ ಇದ್ದರು.