ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಸಚಿವ ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಸೋಮವಾರ ರಾಜ್ಯಾದ್ಯಂತ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬೆಂಗಳೂರು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಸಚಿವ ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಸೋಮವಾರ ರಾಜ್ಯಾದ್ಯಂತ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಕೊಡಗು ಡೀಸಿ ಕಚೇರಿ ಎದುರು ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರು ಸರ್ದಾರ್ ಪಟೇಲ್ ಸರ್ಕಲ್‌ನಿಂದ ಡೀಸಿ ಕಚೇರಿ ಎದುರು ಮಾನವ ಸರಪಳಿ ರಚಿಸಿ, ರಸ್ತೆ ತಡೆ ನಡೆಸಿದರು. ಚಿಕ್ಕಮಗಳೂರಲ್ಲಿ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಡೀಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಕೋಲಾರ ಹಾಗೂ ರಾಮನಗರಗಳಲ್ಲಿ ಡೀಸಿ ಕಚೇರಿ ಮುಂಭಾಗ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ದಾವಣಗೆರೆಯಲ್ಲಿ ಉಪವಿಭಾಗಾಧಿಕಾರಿ ಕಚೇರಿ ಎದುರು ಬಿಜೆಪಿ ಧರಣಿ ನಡೆಸಿತು. ಇದೇ ವೇಳೆ, ಬಳ್ಳಾರಿಯಲ್ಲಿ ಡೀಸಿ ಕಚೇರಿ ಮುಂಭಾಗ, ಶಿವಮೊಗ್ಗದಲ್ಲಿ ಡೀಸಿ ಕಚೇರಿ ಮುಂಭಾಗ, ಬೆಳಗಾವಿಯ ಡೀಸಿ ಕಚೇರಿ ಮುಂಭಾಗ, ತುಮಕೂರಲ್ಲಿ ಬಿಜೆಪಿ ಎಸ್.ಟಿ ಮೋರ್ಚಾ ಘಟಕದಿಂದ ಡೀಸಿ ಕಚೇರಿ ಮುಂಭಾಗ, ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ, ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸ್ಥಳೀಯ ತಹಸೀಲ್ದಾರ್‌ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ.