ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿ ನಗರದ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಘಟನೆ ದೇಶಾದ್ಯಂತ ಚರ್ಚೆ ಚರ್ಚೆಗೆ ಒಳಪಟ್ಟಿದೆ. ಪರಿಶಿಷ್ಟ ಜಾತಿ ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದು ಖಂಡನಾರ್ಹ ಮತ್ತು ಖೇದಕರ ಎಂದರು.
ಸಂತ್ರಸ್ತೆಯನ್ನು ಮುಖ್ಯಮಂತ್ರಿಗಳು ಭೇಟಿ ಮಾಡಿಲ್ಲ. ಗೃಹ ಸಚಿವರು ಹೊರತುಪಡಿಸಿ ಬೇರೆ ಯಾರೂ ಭೇಟಿ ಕೊಟ್ಟಿಲ್ಲ. ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದೆ. ಯಾಕೆ ಸರ್ಕಾರ ಇದು ನಡೆಯಲು ಬಿಟ್ಟಿದೆ? ಪೊಲೀಸ್ ಗಸ್ತು ಯಾಕೆ ಇರಲಿಲ್ಲ? ರಾಜ್ಯ ಸರ್ಕಾರ ಇಂಥ ಘಟನೆ ಆಗದಂತೆ ತಡೆಯಲು ಏನು ಕ್ರಮ ಕೈಗೊಂಡಿದೆ? ಎಂದು ಕೇಳಿದ್ದಾಗಿ ತಿಳಿಸಿದರು.ಸಂತ್ರಸ್ತೆಯ ಸಹಾಯಕ್ಕೆ ಧಾವಿಸದ ಕುರಿತು ಚಾಟಿ ಬೀಸಿದೆ. ಆದರೂ, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಜನರಿಗೂ ಅನಿಸಿದೆ. ಈ ಘಟನೆಯನ್ನು ಖಂಡಿಸಿ ಬಿಜೆಪಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ದೊಡ್ಡ ಪ್ರತಿಭಟನೆ ನಡೆಸಲಿದೆ. ದೊಡ್ಡ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುತ್ತಾರೆ ಎಂದರು.
ಹೊಸ ವಂಟಮೂರಿ ಗ್ರಾಮದಲ್ಲಿ ನಡೆದ ಮಹಿಳೆಯ ವಿವಸ್ತ್ರ ಪ್ರಕರಣವನ್ನು ಬಿಜೆಪಿ ಹೈಕಮಾಂಡ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಸಂಸದರ ನಿಯೋಗ ನಾಳೆಯೇ ಭೇಟಿ ನೀಡಲಿದೆ. ಐವರು ಸಂಸದರು ದೆಹಲಿಯಿಂದ ಆಗಮಿಸಲಿದ್ದಾರೆ. ಅಪರಾಜಿತ್ ಸಾರಂಗಿ ಸುನಿತಾ ದುಗ್ಗಲ್, ರಂಜಿತಾ ಕೂಲಿ, ರಾಕೆಟ್ ಚಟರ್ಜಿ ಹಾಗೂ ಆಶಾಲಾಕಡ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿಯಲ್ಲಿ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ ಎಂದರು.ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ನಡೆದ ಘಟನೆ ಸಾಕಷ್ಟು ಚರ್ಚೆಯಾಗಿದೆ. ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಅಧಿವೇಶನ ನಡೆಯುವ ಸಂದರ್ಭದಲ್ಲಿ ಈ ಘಟನೆ ಜರುಗಿದೆ. ನಾನು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿ ಬಂದಿದ್ದೇನೆ ಎಂದರು.
ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ, ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಶಾಸಕರಾ ಸುನೀಲ್ ಕುಮಾರ, ವಿಠ್ಠಲ ಹಲಗೇಕರ, ಮಾಜಿ ಶಾಸಕರಾದ ಅನಿಲ ಬೆನಕೆ, ಮಹಾಂತೇಶ ದೊಡಗೌಡರ, ಅರವಿಂದ ಪಾಟೀಲ, ಮಹೇಶ ಕುಮಟಳ್ಳಿ, ಸಂಜಯ ಪಾಟೀಲ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.ಕೋಟ್...ಕಾಂಗ್ರೆಸ್ ಸರ್ಕಾರ ಬಂದಾಗ ಕಾನೂನು ಸುವ್ಯವಸ್ಥೆ ಹಾಳುಗೆಡುತ್ತಿದೆ. ಪೊಲೀಸ್ರ ಬಗ್ಗೆ ಯಾರಿಗೂ ಭಯ ಇಲ್ಲದಂತಾಗಿದೆ. ಜವಾಬ್ದಾರಿಯುತ ಸಚಿವರ ತವರು ಕ್ಷೇತ್ರದಲ್ಲಿ ಘಟನೆ ನಡೆದಿದೆ. ಇದನ್ನು ನಾವು ರಾಜಕೀಯವಾಗಿ ಬಳಸಿಕೊಳ್ಳುತ್ತಿಲ್ಲ.
ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷರು.---15ಬಿಇಎಲ್34