ಹೊಸಪೇಟೆ: ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಮುಂದೆ ಕಾಂಗ್ರೆಸ್ ಪಕ್ಷವು ನಡೆಸಿದ ಸಂವಿಧಾನಬಾಹಿರ ಪ್ರತಿಭಟನೆ, ಸಂಸತ್ತಿಗೆ ಮುತ್ತಿಗೆ ಹಾಗೂ ಬೆಂಗಳೂರಿನಲ್ಲಿ ಪ್ರತಿಭಟನೆ ಭಾಗವಹಿಸಿದ್ದ ಬಿಜೆಪಿ ರಾಜ್ಯ ನಾಯಕರ ಮೇಲೆ ಮೊಟ್ಟೆ ಎಸದಿರುವ ಘಟನೆ ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಬೃಹತ್‌ ಪ್ರತಿಭಟನೆ ನಡೆಸಿದರು.ಇಲ್ಲಿನ ಪಟೇಲ್ ನಗರದ ಬಿಜೆಪಿ ಕಛೇರಿಯಿಂದ ಮೆರವಣಿಗೆ ಮೂಲಕ ಆಗಮಿಸಿ, ಡಾ.ಪುನೀತ್ ರಾಜಕುಮಾರ್ ವೃತ್ತದಲ್ಲಿ ರಸ್ತೆತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸಭೆಯನ್ನು‌ ಉದ್ದೇಶಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವರೆಡ್ಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್. ಕೃಷ್ಣನಾಯ್ಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್, ಜಿಲ್ಲಾ ಉಪಾಧ್ಯಕ್ಷ ಸಂದೀಪ್ ಸಿಂಗ್ ಮುಖಂಡರಾದ ಅಶೋಕ ಜೀರೆ, ಓದೋ ಗಂಗಪ್ಪ, ಮಾತನಾಡಿ, ದೆಹಲಿಯ ಪ್ರಧಾನಿ ನಿವಾಸದ ಎದುರು ಕಾಂಗ್ರೆಸ್ ಮುಖಂಡರು ನಡೆಸಿದ ಪ್ರತಿಭಟನೆ ಹಾಗೂ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮುಖಂಡರ ಮೇಲೆ ದಾಳಿ ನಡೆಸಿ ಮೊಟ್ಟೆ ಎಸೆದ ಘಟನೆಯನ್ನು ತೀವ್ರವಾಗಿ ಖಂಡಿಸಿದರು.

ಪ್ರತಿಭಟನಾನಿರತ ಬಿಜೆಪಿ ಮುಖಂಡರ ಮೇಲೆ ದಾಳಿ ನಡೆಸಿ, ಮೊಟ್ಟೆ ಎಸೆದಿರುವುದು ಕಾಂಗ್ರೆಸ್ ಸಂಸ್ಕೃತಿ. ಸಂವಿಧಾನದ ಹೆಸರೇಳಿಕೊಂಡು ಸಂವಿಧಾನ ವಿರೋಧಿ ಚಟುವಟಿಕೆಗಳನ್ನು ಕಾಂಗ್ರೆಸ್‌ನವರು ನಡೆಸಿಕೊಂಡು ಬರುತ್ತಿದ್ದಾರೆ. ಜನರು ಇದನ್ನೆಲ್ಲ ಗಮನಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಪ್ರತಿಭಟನೆಯಲ್ಲಿ ನಗರಸಭೆ ಅಧ್ಯಕ್ಷ ಎನ್. ರೂಪೇಶಕುಮಾರ್, ಉಪಾಧ್ಯಕ್ಷ ಜೀವರತ್ನಂ, ಜಿಲ್ಲಾ ಕಾರ್ಯದರ್ಶಿ ಕೆ.ಎಸ್.ರಾಘ ವೇಂದ್ರ, ಬಿಜೆಪಿ ಮುಖಂಡರಾದ ಕಾಸಟ್ಟಿ ಉಮಾಪತಿ, ರೇವಣಸಿದ್ದಪ್ಪ, ಶಂಕರ್ ಮೇಟಿ, ಜೆ.ಎಸ್. ರಮೇಶ್ ಗುಪ್ತ,ಮಧುರಚನ್ನ ಶಾಸ್ತ್ರಿ, ಭಾಗ್ಯಮ್ಮ, ರವಿಕಿರಣ್, ನಾಗರಾಜ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಇತರೆ ಪೊಲೀಸ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿದ್ದರು.