ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಶುಕ್ರವಾರ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ನಿಯಂತ್ರಿಸುವುದು ಹಾಗೂ ರಾಷ್ಟ್ರದಲ್ಲಿ ಕೆಲವೊಂದು ದುಷ್ಟ ಶಕ್ತಿಗಳು ಕಾನೂನು-ಸುವ್ಯವಸ್ಥೆ ಹಾಳು ಮಾಡುತ್ತಿರುವುದನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಶುಕ್ರವಾರ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ರ್ಯಾಲಿ ನಗರದ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಿತು.
ಈ ವಿಷಯದಲ್ಲಿ ಮಧ್ಯ ಪ್ರವೇಶಿಸಿ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಲಿಖಿತ ಮನವಿ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದರು.ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದ್ದು, ರಾಜ್ಯಾದ್ಯಂತ ಅಕ್ಷರಶಃ ಗೂಂಡಾ ರಾಜ್ಯ ಸೃಷ್ಟಿಯಾಗಿದೆ. ಆಡಳಿತ ಪಕ್ಷದ ಕುಮ್ಮಕ್ಕಿನಿಂದ ಸಮಾಜಘಾತುಕ ಶಕ್ತಿಗಳು ಮತ್ತು ಗೂಂಡಾಗಳು ರಾಜಾರೋಷವಾಗಿ ಮೆರೆಯುತ್ತಿದ್ದಾರೆ. ವಿರೋಧ ಪಕ್ಷದ ನಾಯಕರು, ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಸರ್ಕಾರದ ಜನವಿರೋಧಿ ನೀತಿಗಳನ್ನು ಪ್ರಶ್ನಿಸುವ ಸಾರ್ವಜನಿಕರ ಮೇಲೆ ನಿರಂತರ ದೌರ್ಜನ್ಯ, ಬೆದರಿಕೆ ಹಾಗೂ ಹಲ್ಲೆಗಳು ನಡೆಯುತ್ತಿವೆ ಎಂದು ಅಸಮಾಧಾನ ಹೊರಹಾಕಿದರು.ರಕ್ಷಣೆ ನೀಡಬೇಕಾದ ಪೊಲೀಸ್ ಇಲಾಖೆಯು ಆಡಳಿತ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು, ದೂರು ನೀಡಿದರೂ ಕಿಡಿಗೇಡಿಗಳ ಮೇಲೆ ಯಾವುದೇ ಕಾನೂನು ಕ್ರಮ ಜರುಗಿಸುತ್ತಿಲ್ಲ. ವಿರೋಧದ ದನಿಯನ್ನು ಅಡಗಿಸುವ ದಮನಕಾರಿ ನೀತಿಯನ್ನು ಸರ್ಕಾರ ಅನುಸರಿಸುತ್ತಿದೆ. ಇದರಿಂದ ಜನಸಾಮಾನ್ಯರು, ಮಹಿಳೆಯರು ಭೀತಿಯ ವಾತಾವರಣದಲ್ಲಿ ಬದುಕುವಂತಾಗಿದೆ ಎಂದರು.
ಸಾವಯವ ಬೀಜ ಪ್ರಮಾಣನ ಸಂಸ್ಥೆ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ ಮಾತನಾಡಿ, ರಾಜ್ಯಪಾಲರು ಸಂವಿಧಾನಾತ್ಮಕ ಅಧಿಕಾರವನ್ನು ಚಲಾಯಿಸಿ, ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು ತಕ್ಷಣವೇ ನಿಯಂತ್ರಣಕ್ಕೆ ತರಲು ಹಾಗೂ ಗೂಂಡಾ ಪ್ರವೃತ್ತಿಯನ್ನು ಹತ್ತಿಕ್ಕಲು ರಾಜ್ಯ ಸರ್ಕಾರಕ್ಕೆ ಮತ್ತು ಗೃಹ ಇಲಾಖೆಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು. ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರಲ್ಲಿರುವ ಆತಂಕವನ್ನು ದೂರ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಳುಗೌಡ ಪಾಟೀಲ, ಈರಣ್ಣ ರಾವೂರ, ಸಾಬು ಮಾಶ್ಯಾಳ, ಮುಖಂಡರಾದ ಉಮೇಶ ಕಾರಜೋಳ, ಸುರೇಶ ಬಿರಾದಾರ, ಭೀಮಾಶಂಕರ ಹದನೂರ, ಉಮೇಶ ಕೋಳಕೂರ, ಕೃಷ್ಣಾ ಗುನ್ಹಾಳಕರ, ರಾಜಶೇಖರ ಮಗಿಮಠ, ಕಾಸುಗೌಡ ಬಿರಾದಾರ, ಸಂಜೀವ ಐಹೊಳೆ, ಗೋಪಾಲ ಘಟಕಾಂಬಳೆ, ವಿವೇಕಾನಂದ ಡಬ್ಬಿ, ಮಹೇಂದ್ರಕುಮಾರ ನಾಯಕ, ಚಿದಾನಂದ ಚಲವಾದಿ, ಮಲ್ಲಿಕಾರ್ಜುನ ಜೋಗೂರ, ಸ್ವಪ್ನಾ ಕಣಮುಚನಾಳ, ರಾಹುಲ ಜಾಧವ, ಮಹೇಶ ಒಡೆಯರ, ಮಂಜುನಾಥ ಮಿಸೆ, ರವಿಕಾಂತ ಬಗಲಿ, ರಾಘವೇಂದ್ರ ಕಾಪಸೆ, ರವಿಕಾಂತ ವಗ್ಗೆ, ಸಚೀನ ಬೋಂಬಳೆ, ಭೀಮಸಿಂಗ ರಾಠೋಡ, ಸಂದೀಪ ಪಾಟೀಲ, ಸಂತೋಷ ಪಾಟೀಲ, ಚಂದ್ರಶೇಖರ ಪಾಟೀಲ, ಸಿದ್ದಗೊಂಡ ಬಿರಾದಾರ, ಸಂತೋಷ ಕುರದಡ್ಡಿ, ಹಣಮಂತ್ರಾಯಗೌಡ ಪಾಟೀಲ ಪಾಲ್ಗೊಂಡಿದ್ದರು.