ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ರಸ್ತೆ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದ್ದು, ರಾಜ್ಯ ಸರ್ಕಾರ ರಸ್ತೆ ಅಭಿವೃದ್ಧಿ ವಿಷಯದಲ್ಲಿ ಬೇಜವಾಬ್ದಾರಿತನ ಪ್ರದರ್ಶಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಅಥಣಿ ರಸ್ತೆತಡೆ ಮಾಡಿ ಗುಂಡಿಗಳಲ್ಲಿ ಸಸಿಗಳನ್ನು ನೆಡುವ ಮೂಲಕ ವಿನೂತನ ರೀತಿ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ನಗರದಲ್ಲಿ ರಸ್ತೆ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದ್ದು, ರಾಜ್ಯ ಸರ್ಕಾರ ರಸ್ತೆ ಅಭಿವೃದ್ಧಿ ವಿಷಯದಲ್ಲಿ ಬೇಜವಾಬ್ದಾರಿತನಪ್ರದರ್ಶಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಅಥಣಿ ರಸ್ತೆತಡೆ ಮಾಡಿ ಗುಂಡಿಗಳಲ್ಲಿ ಸಸಿಗಳನ್ನು ನೆಡುವ ಮೂಲಕ ವಿನೂತನ ರೀತಿ ಪ್ರತಿಭಟನೆ ನಡೆಸಿದರು.
ಪ್ರವಾಸಿ ಮಂದಿರದ ಮುಂಭಾಗದಲ್ಲಿ ಅಥಣಿ ರಸ್ತೆಯಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿದರು. ಕಾಂಗ್ರೆಸ್ ಸರ್ಕಾರ ಜೀವಕ್ಕೆ ಸಂಚಕಾರ, ಗುಂಡಿ ಮುಚ್ಚದೇ ರಾಜ್ಯದ ಜನತೆ ಹಾಳು ಮಾಡಿದ ಸರ್ಕಾರಕ್ಕೆ ಧಿಕ್ಕಾರ, ಗುಂಡಿಗಳ ಜನಕ ಡಿ.ಕೆ. ಶಿವಕುಮಾರ ಎಂಬ ಪ್ಲೇಕಾರ್ಡ್ಗಳನ್ನು ಪ್ರದರ್ಶಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಮಾತನಾಡಿ, ರಾಜ್ಯ ಸರ್ಕಾರ ಒಂದೇ ಒಂದು ಸುಸಜ್ಜಿತ ರಸ್ತೆ ನಿರ್ಮಿಸಿಲ್ಲ, ರಸ್ತೆಗಳ ಅವ್ಯವಸ್ಥೆ ಖಂಡಿಸಿ ಅನೇಕ ಉದ್ಯಮಗಳು ರಾಜ್ಯ ಬಿಟ್ಟು ಹೋಗುತ್ತೇವೆ ಎಂದು ಹೇಳಿದರೆ ಉಪಮುಖ್ಯಮಂತ್ರಿಗಳು ಇದನ್ನು ಬ್ಲಾಕ್ ಮೇಲ್ ಎಂದು ಕರೆದರು. ರಸ್ತೆ ನಿರ್ಮಿಸಿಕೊಡಿ ಎಂದು ಹೇಳುವುದು ಬ್ಲಾಕ್ ಮೇಲ್ ಎಂದಾದರೇ ಹೇಗೆ ಎಂದು ಕಿಡಿಕಾರಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಕೇವಲ ಗ್ಯಾರಂಟಿ ಎಂದು ಹೇಳಿ ಅಭಿವೃದ್ಧಿಗೆ ಒಂದೇ ಒಂದು ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ನೀಡಿಲ್ಲ. ಕರ್ನಾಟಕದ ರಸ್ತೆಗಳು ಸರ್ಕಾರದ ನಿರ್ಲಕ್ಷ್ಯದಿಂದಾಗಿ ಸರ್ವನಾಶವಾಗಿವೆ. ರಾಜ್ಯದ ಘನತೆಗೆ ಕಾಂಗ್ರೆಸ್ ಸರ್ಕಾರ ಧಕ್ಕೆ ತರುತ್ತಿದೆ ಎಂದು ಆರೋಪಿಸಿದರು. ಕೂಡಲೇ ರಾಜ್ಯ ಸರ್ಕಾರ ರಸ್ತೆಗಳ ಅಭಿವೃದ್ಧಿಗೆ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮುಖಂಡರಾದ ಚಂದ್ರಶೇಖರ ಕವಟಗಿ, ಉಮೇಶ ಕಾರಜೋಳ, ಮಳುಗೌಡ ಪಾಟೀಲ, ಡಾ.ಸುರೇಶ ಬಿರಾದಾರ, ಭೀಮಾಶಂಕರ ಹದನೂರ, ಉಮೇಶ ಕೋಳಕೂರ, ಸಂದೀಪ ಪಾಟೀಲ, ಸಚಿನ ಬೋಂಬಳೆ, ರಾಹುಲ ಜಾಧವ, ಸ್ಬಪ್ನಾ ಕಣಮುಚನಾಳ, ವಿಜಯ ಜೋಶಿ, ಗೋಪಾಲ ಘಟಕಾಂಬಳೆ, ಚಿದಾನಂದ ಛಲವಾದಿ, ಮಲ್ಲಿಕಾರ್ಜುನ ಜೋಗುರ, ಎಸ್.ಎ.ಪಾಟೀಲ ಉಪಸ್ಥಿತರಿದ್ದರು.