ಕನ್ನಡಪ್ರಭವಾರ್ತೆ ಮಡಿಕೇರಿ

ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆ ನಡೆಸದೆ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿತು.

ಈ ಸಂದರ್ಭ ಮಡಿಕೇರಿ ಗ್ರಾಮಾಂತರ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಮಾತನಾಡಿ, ಕಳೆದ ಆರು ವರ್ಷದಿಂದ ಚುನಾವಣೆ ನಡೆಸದೆ ಸ್ಥಳೀಯ ಪ್ರಜಾಪ್ರಭುತ್ವವನ್ನು ಹತ್ತಿಕ್ಕಲಾಗುತ್ತಿದೆ. ನಾಗರಿಕ ಆಡಳಿತದಲ್ಲಿ ಉಂಟಾಗಿರುವ ಸಂವಿಧಾನಿಕ ಬಿಕ್ಕಟ್ಟು ಇದು ಪ್ರಜಾಪ್ರಭುತ್ವದ ಅಣಕವಾಗಿದೆ. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದರೆ ಮಾತ್ರ ಕೇಂದ್ರ ಸರ್ಕಾರದಿಂದ ಅನುದಾನ ಬರುತ್ತದೆ. ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಚುನಾವಣೆ ನಡೆಯದೆ ಇರುವುದರಿಂದ ಅನುದಾನಕ್ಕೆ ಕುತ್ತು ಆಗಿರುತ್ತದೆ. ಸರ್ಕಾರದ ಹಠಮಾರಿತನದಿಂದ ಕಳೆದ ಆರು ವರ್ಷದಿಂದ ಇಂದಿನವರೆಗೆ ಸತತವಾಗಿ ವಿವಿಧ ನೆಪಗಳನ್ನು ಒಡ್ಡುತ್ತಾ ಚುನಾವಣೆಗಳನ್ನು ಮುಂದೂಡಿಕೊಂಡು ಬಂದಿರುವುದು ಖಂಡನೀಯ. ತಕ್ಷಣ ರಾಜ್ಯ ಚುನಾವಣಾ ಆಯೋಗ ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರಕ್ಕೆ ಸೂಚನೆ ನೀಡುವಂತಾಗಬೇಕು ಎಂದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಚುನಾವಣೆ ನಡೆಸದ ಕಾಂಗ್ರೆಸ್ ಸರ್ಕಾರ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಪರಿಣಾಮ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಕ್ಷೇತ್ರಗಳಿಗೆ ಅನುದಾನ ಸಮರ್ಪಕವಾಗಿ ಹಂಚಿಕೆಯಾಗದೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲವೆಂದು ಆರೋಪಿಸಿದರು.ಜಿಲ್ಲಾ ಬಿಜೆಪಿ ವಕ್ತಾರ ತಳೂರು ಎ.ಕಿಶೋರ್ ಕುಮಾರ್ ಮಾತನಾಡಿ, ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒಗಳು ಕಚೇರಿಗೆ ಸರಿಯಾಗಿ ಬರುತ್ತಿಲ್ಲ. ಕೆಲವೆಡೆ ಅವರು ಇದ್ದು ಇಲ್ಲದಂತಾಗಿದೆ. ಆದ್ದರಿಂದ ಪಿಡಿಒ ಮತ್ತು ಆಡಳಿತಾಧಿಕಾರಿಗಳು ಕಡ್ಡಾಯವಾಗಿ ಪಂಚಾಯಿತಿಗಳಲ್ಲಿ ಇರುವಂತೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.ಮನವಿಯನ್ನು ಆಲಿಸಿದ ತಾಲೂಕು ಪಂಚಾಯಿತಿ ಇಒ(ಪ್ರಭಾರ) ಶೇಖರ್ ಮಾತನಾಡಿ, ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಡಿಒ ಮತ್ತು ಆಡಳಿತಾಧಿಕಾರಿಗಳ ದೂರಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.ಪ್ರತಿಭಟನೆಯಲ್ಲಿ ಮಾಜಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ, ನಗರ ಉಪಾಧ್ಯಕ್ಷ ಬಿ.ಕೆ.ಜಗದೀಶ್, ಜಿ.ಪಂ ಮಾಜಿ ಅಧ್ಯಕ್ಷ ಬಿ.ಎ.ಹರೀಶ್, ಪ್ರಮುಖರಾದ ಮುದ್ದಂಡ ಡೀನ್ ಬೋಪಣ್ಣ ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.