ಕಾಲ್ತುಳಿತ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ: ಸಿಎಂ ರಾಜಿನಾಮೆಗೆ ಆಗ್ರಹ

| Published : Jun 07 2025, 03:40 AM IST

ಕಾಲ್ತುಳಿತ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ: ಸಿಎಂ ರಾಜಿನಾಮೆಗೆ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣವಾಗಿದ್ದು, ಮುಖ್ಯಮಂತ್ರಿ ಕೂಡಲೇ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬಳ್ಳಾರಿ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಬಳ್ಳಾರಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣವಾಗಿದ್ದು, ಮುಖ್ಯಮಂತ್ರಿ ಕೂಡಲೇ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಕಾಲ್ತುಳಿತ ಪ್ರಕರಣ ಸರ್ಕಾರದ ಪ್ರಾಯೋಜಿತ ಹತ್ಯಾಕಾಂಡವಾಗಿದೆ. ಮತ್ತೊಬ್ಬರ ಯಶಸ್ಸಿನ ದುರ್ಲಾಭ ಪಡೆಯಲು ಕಾಂಗ್ರೆಸ್ ನಾಯಕರು ಮಾಡಿದ ತಪ್ಪಿನಿಂದಾಗಿ ದೊಡ್ಡ ಅನಾಹುತ ಸಂಭವಿಸಿದೆ. 11 ಜನರು ಮರಣ ಹೊಂದಿದ್ದಾರೆ. ಈ ಎಲ್ಲ ಅವಘಡಕ್ಕೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೇ ಕಾರಣವಾಗಿದ್ದಾರೆ. ಹೀಗಾಗಿ ಈ ಮೂವರು ಕೂಡಲೇ ರಾಜಿನಾಮೆ ನೀಡಬೇಕು ಹಾಗೂ ಆದ ತಪ್ಪಿಗೆ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದೇ ವೇಳೆ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ, ಜನರ ಸಾವು-ನೋವುಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ. ಲಕ್ಷಾಂತರ ಜನರು ಸೇರುವ ನಿರೀಕ್ಷೆ ಇದ್ದಾಗ್ಯೂ ಸೂಕ್ತ ವ್ಯವಸ್ಥೆ ಮಾಡಿಕೊಂಡಿಲ್ಲ. ಆರ್‌ಸಿಬಿ ತಂಡವನ್ನು ವಿಧಾನಸೌಧಕ್ಕೆ ಕರೆಸಿಕೊಂಡ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಜನರ ನಿಯಂತ್ರಣಕ್ಕೆ ಪೂರಕ ಕ್ರಮ ವಹಿಸದೆ ಅತ್ಯಂತ ನಿರ್ಲಕ್ಷ್ಯ ವಹಿಸಿದ್ದಾರೆ. ಅನೇಕರು ಕಾಲ್ತುಳಿತಕ್ಕೆ ಅಸು ನೀಗಿದ್ದರೂ ಕೆಲವು ಸಚಿವರು ಕ್ರಿಕೆಟ್‌ಪಟುಗಳ ಜತೆ ಫೋಟೋ ತೆಗೆಸಿಕೊಳ್ಳುವಲ್ಲಿ ನಿರತರಾಗಿದ್ದರು. ಜನರು ಸತ್ತ ಸುದ್ದಿ ತಿಳಿದ ಕೂಡಲೇ ಕಾರ್ಯಕ್ರಮ ರದ್ದುಗೊಳಿಸುವ ಬದಲು ವಿಜೃಂಭಣೆಯಿಂದ ಕಾರ್ಯಕ್ರಮ ನಡೆಸಿ, ಸಂಭ್ರಮಿಸಿದ್ದಾರೆ. ಇದು ಸರ್ಕಾರಕ್ಕೆ ನಾಡಿನ ಜನರ ಮೇಲಿರುವ ಕಾಳಜಿ ಎಷ್ಟಿದೆ ಎಂಬುದು ಗೊತ್ತಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಗಡಗಿ ಚನ್ನಪ್ಪ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೆ, ರಾಜ್ಯ ಸರ್ಕಾರದ ಪ್ರತಿಕೃತಿ ದಹಿಸಿದರು. ಪಕ್ಷದ ಮುಖಂಡರಾದ ಕೆ.ಎ. ರಾಮಲಿಂಗಪ್ಪ, ಪಾಲಿಕೆ ಸದಸ್ಯರಾದ ಗೋವಿಂದರಾಜು, ಸುರೇಖಾ ಮಲ್ಲನಗೌಡ, ಗುಡಿಗಂಟಿ ಹನುಮಂತು, ದಾಸರಿ ಗೋವಿಂದ, ಪುಷ್ಪಲತಾ ಚಂದ್ರಶೇಖರ್, ಸುಗುಣ ಮತ್ತಿತರರು ಭಾಗವಹಿಸಿದ್ದರು.