ಸಾರಾಂಶ
ಹಾವೇರಿ:ವಾಲ್ಮೀಕಿ ನಿಗಮದ ೧೮೭ ಕೋಟಿ ರು. ಅಕ್ರಮ ವರ್ಗಾವಣೆ ಹಗರಣ ಖಂಡಿಸಿ, ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಶುಕ್ರವಾರ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದ ಅವಧಿಯಲ್ಲಿ ಪರಮ ಭ್ರಷ್ಟತೆಯಿಂದ ಕೆಲಸ ಮಾಡುತ್ತಿದೆ. ಇತ್ತೀಚಿಗೆ ಮಹರ್ಷಿ ವಾಲ್ಮೀಕಿ ನಿಗಮದ ೧೮೭ ಕೋಟಿ ರು. ಹಣವನ್ನು ಅಕ್ರಮವಾಗಿ ಬೇರೆ ಬೇರೆ ವ್ಯಕ್ತಿಗಳಿಗೆ ಹಾಗೂ ಹೊರ ರಾಜ್ಯದ ಖಾತೆಗಳಿಗೆ ವರ್ಗಾವಣೆ ಮಾಡಿ ನಿಗಮದ ಹಣವನ್ನು ಲೂಟಿ ಮಾಡಿದೆ. ನಿಗಮದ ಅಧೀಕ್ಷಕರಾದ ಚಂದ್ರಶೇಖರ ಡೆತ್ನೋಟ್ ಅವರು ಸಚಿವರ ಮೌಖಿಕ ಆದೇಶದ ಮೇರೆ ವ್ಯವಹಾರ ನಡೆದಿದೆ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ರಾಜ್ಯ ಸರ್ಕಾರ ನಾಮಕವಾಸ್ತೆಯಾಗಿ ಸಚಿವ ನಾಗೇಂದ್ರ ಅವರಿಂದ ರಾಜೀನಾಮೆ ಪಡೆದು ಸಮಗ್ರ ತನಿಖೆ ಮಾಡದೆ ಪ್ರಕರಣವನ್ನು ಮುಚ್ಚಿಹಾಕುತ್ತಿದೆ. ಈ ಹಗರಣದಲ್ಲಿ ಭಾಗಿಯಾದ ಇನ್ನುಳಿದ ವ್ಯಕ್ತಿಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣಗಳನ್ನು ಮುಚ್ಚಿಹಾಕಲಾಗುತ್ತಿದೆ ಎಂದು ಆರೋಪಿಸಿದರು.ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದಕ್ಷ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಿಗಳೇ ಸಚಿವರುಗಳ ಹೆಸರು ಪ್ರಸ್ತಾಪಿಸಿದರೂ ಸರ್ಕಾರ ಸಚಿವರ ಮೇಲೆ ಕ್ರಮಕೈಗೊಳ್ಳದೇ ತಮ್ಮ ಸರ್ಕಾರದ ಭ್ರಷ್ಟ ಸಚಿವರ ರಕ್ಷಣೆ ಮಾಡುತ್ತಿದೆ. ವಾಲ್ಮೀಕಿ ನಿಗಮದ ಹಣ ದುರುಪಯೋಗ ಆಗಿರುವ ಬಗ್ಗೆ ಮುಖ್ಯಮಂತ್ರಿಗಳು ಮಾತನಾಡುತ್ತಿಲ್ಲ. ಶೀಘ್ರವೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ಜಿಪಂ ಮಾಜಿ ಸದಸ್ಯ, ರಾಜ್ಯ ಎಸ್ಟಿ ಮೋರ್ಚಾ ಸದಸ್ಯ ಎನ್.ಎಂ. ಈಟೇರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರದ ಪೂರ್ವದಲ್ಲಿ ನಾವು ದಲಿತ ಪರ ಎಂದು ಮಾತನಾಡುತ್ತಾರೆ. ಆದರೆ ಅಧಿಕಾರಕ್ಕೆ ಬಂದ ಮೇಲೆ ದಲಿತರ ಕುತ್ತಿಗೆ ಮೇಲೆ ಕಾಲಿಟ್ಟು ಅವರ ಅಭಿವೃದ್ಧಿಗೆ ಮೀಸಲಿದ್ದ ಹಣವನ್ನು ಲೂಟಿ ಮಾಡಿ ದಲಿತರ ಸರ್ವನಾಶ ಮಾಡುತ್ತಿದೆ ಎಂದರು. ನಿಕಟಪೂರ್ವ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಸಂತೋಷ ಆಲದಕಟ್ಟಿ ಮಾತನಾಡಿದರು. ತದನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಯಿತು.ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ ನಂಜುಂಡೇಶ ಕಳ್ಳೇರ, ಮಂಜುನಾಥ ಗಾಣಿಗೇರ, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ಚಳಗೇರಿ, ಎಸ್ಟಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಹನುಮಂತಪ್ಪ ಮೀನಕಟ್ಟಿ, ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಬಿದ್ದಾಡಪ್ಪ ಮತ್ತೂರ, ಉಮೇಶ ಮಾಗಳ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದ್ರಣ್ಣ ಹರಿಜನ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅಭಿಷೇಕ ಗುಡಗೂರ, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು, ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.