ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪನೆಗೆ ಆಗ್ರಹಿಸಿ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ರಾಜ್ಯದ ಹಲವೆಡೆ ಮಂಗಳವಾರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪನೆಗೆ ಆಗ್ರಹಿಸಿ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ರಾಜ್ಯದ ಹಲವೆಡೆ ಮಂಗಳವಾರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಹಾಸನದಲ್ಲಿ ಆರ್.ಸಿ.ರಸ್ತೆ ಬಳಿ ಇರುವ ಜಿಲ್ಲಾ ಬಿಜೆಪಿ ಕಚೇರಿಯಿಂದ ಬಿಜೆಪಿ ಕಾರ್ಯಕರ್ತರು ಎತ್ತಿನ ಗಾಡಿ ಏರಿ, ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾ ಪಂಚಾಯತ್ ಎದುರು ಬಿ.ಎಂ.ರಸ್ತೆ ಮಧ್ಯೆ ಮಾನವ ಸರಪಳಿ ನಿರ್ಮಿಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಸೇರಿದ ಬಿಜೆಪಿ ಹಾಗೂ ರೈತ ಮೋರ್ಚಾ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಬೀದರ್ನಲ್ಲಿ ಗಾಂಧಿ ಗಂಜ್ನಿಂದ ಜಂಟಿ ಕೃಷಿ ನಿರ್ದೇಶಕರ ಕಚೇರಿವರೆಗೆ ಟ್ರಾಕ್ಟರ್ನಲ್ಲಿ ಕಬ್ಬು ಹಾಗೂ ತೊಗರಿ ಬೆಳೆಯೊಂದಿಗೆ ಬಂದಿದ್ದ ಪ್ರತಿಭಟನಾಕಾರರು ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಕಚೇರಿ ಬಳಿ ಬ್ಯಾರಿಕೇಡ್ ಹಾಕಿ, ಪ್ರತಿಭಟನಾಕಾರರನ್ನು ತಡೆದರು. ನಂತರ, ರಾಜ್ಯಪಾಲರಿಗೆ ಬರೆದ ಮನವಿಯನ್ನು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಿಗೆ ಸಲ್ಲಿಸಿ, ಮೆಕ್ಕೆಜೋಳ ಖರೀದಿ ತೆರೆಯಬೇಕು. ರೈತರ ಬೆಳೆಹಾನಿಗೆ ಶೀಘ್ರವೇ ಪರಿಹಾರ ಬಿಡುಗಡೆ ಮಾಡಬೇಕು. ರೈತರಿಗೆ ನೀಡಬೇಕಾದ ಹಾಲಿನ ಪ್ರೋತ್ಸಾಹ ಧನದ ಬಾಕಿಯನ್ನು ಶೀಘ್ರವೇ ಬಿಡುಗಡೆ ಎಂದು ಆಗ್ರಹಿಸಿದರು.ಧಾರವಾಡದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ, ಶಾಸಕ ಎಂ.ಆರ್.ಪಾಟೀಲ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಇದಕ್ಕೂ ಮೊದಲು, ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಲಾಯಿತು. ಇದೇ ವೇಳೆ, ವಿಜಯನಗರ, ಹಾವೇರಿಗಳಲ್ಲಿಯೂ ಪ್ರತಿಭಟನೆಗಳು ನಡೆದವು.