BJP's indefinite protest enters fifth day.
ಕನ್ನಡಪ್ರಭ ವಾರ್ತೆ ಮೊಳಕಾಲ್ಮುರುಬರ ಪಟ್ಟಿಯಿಂದ ತಾಲೂಕನ್ನು ಕೈಬಿಟ್ಟಿರುವ ಸರ್ಕಾರದ ನಿಲುವನ್ನು ಖಂಡಿಸಿ ಬಿಜೆಪಿಯವರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಸೋಮವಾರ ಐದನೇ ದಿನಕ್ಕೆ ಕಾಲಿಟ್ಟಿದೆ.ಇಲ್ಲಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ತಾಲೂಕನ್ನು ಬರ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಿದರು.ಈ ವೇಳೆ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ ರಾಜ್ಯದಲ್ಲಿ ಅತ್ಯಂತ ಹಿಂದುಳಿದಿರುವ ತಾಲೂಕು ಮೊಳಕಾಲ್ಮುರು ಸದಾ ಬರಕ್ಕೆ ತುತ್ತಾಗುತ್ತಿದೆ. ಯಾವುದೇ ನದಿ ಮೂಲಗಳಿಲ್ಲದೆ ಜನರು ಬಹುತೇಕ ಮಳೆಯನ್ನೇ ನಂಬಿಕೊಂಡು ಜೀವನ ನಿರ್ವಹಿಸುತ್ತಿದ್ದಾರೆ. ಈಗಿದ್ದರೂ ಸರ್ಕಾರ ತಾಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಬಹುದೊಡ್ಡ ಮೋಸವಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರ ಪಟ್ಟಿಗೆ ಸೇರ್ಪಡೆಯಾಗಲು ಸದನದಲ್ಲಿ ಹೋರಾಟ ಮಾಡುತ್ತೇನೆ ಎಂದು ಹೇಳಿದರು.
ಮುಂಗಾರು ಕಳೆಯುತ್ತಾ ಬಂದರೂ ಮಳೆ ಬಾರದೆ ಭೀಕರ ಪರಿಸ್ಥಿತಿ ಎದುರಾಗಿದೆ. ದನಕರುಗಳಿಗೆ ಮೇವಿಲ್ಲದೆ, ಕುಡಿಯುವ ನೀರಿಲ್ಲದೆ ಜನರು ತತ್ತರಿಸುವಂತಾಗಿದೆ. ಈ ಭಾಗದ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಬರ ಪಟ್ಟಿಯಲ್ಲಿ ಹೆಸರು ಕೈಬಿಟ್ಟು ಹೋಗಲು ಕಾರಣವಾಗಿದೆ. ವಿದ್ಯಾರ್ಥಿಗಳ ,ಮಹಿಳೆಯರ, ವಿದ್ಯಾರ್ಥಿಗಳ ಪಾಲಿಗೆ ಮರಣ ಶಾಸನ ಬರೆದಂತಾಗಿದೆ.ಬಿಡದಿಯಲ್ಲಿ ಸ್ಮಾರ್ಟ್ ಸಿಟಿ ಹಾಗೂ ಬೆಂಗಳೂರನ್ನು ಅಭಿವೃದ್ಧಿ ಮಾಡುತ್ತೇವೆಂದು ಬೀಗುತ್ತಿರುವ ಮುಖ್ಯಮಂತ್ರಿಗಳು ರಾಜ್ಯದ ಬರ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ. ಎಲ್ಲಾ ವಿಚಾರಕ್ಕೂ ಕೇಂದ್ರದ ಕಡೆ ಬೊಟ್ಟು ಮಾಡುವ ಕಾಂಗ್ರೆಸ್ ನಾಯಕರು ಉಚಿತ ಗ್ಯಾರಂಟಿಯ ನೆಪದಲ್ಲಿ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ. ಭರವಸೆಯ ಮೇಲೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಖಜಾನೆಯನ್ನು ಖಾಲಿ ಮಾಡಿದೆ ಎಂದು ಟೀಕಿಸಿದರು.ಅದಾನಿ, ಅಂಬಾನಿಯವರ ಬಗ್ಗೆ ಮಾತನಾಡುವ ರಾಹುಲ್ ಗಾಂಧಿ ಅವರನ್ನು ಮನೆಗೆ ಕರೆದು ಆತಿಥ್ಯ ನೀಡಿದ್ದಾರೆ.ವಾಲ್ಮೀಕಿ ನಿಗಮದಲ್ಲಿ ದಲಿತರಿಗೆ ಸೇರಬೇಕಾದ 187 ಕೋಟಿ ರು. ಹಣ ದುರುಪಯೋಗವಾಗಿದೆ. ಸರ್ಕಾರ ನಾಗೇಂದ್ರ ಅವರ ರಾಜೀನಾಮೆ ಪಡೆದರೆ ಸಾಲದು ಅಷ್ಟು ಹಣ ವಾಪಸ್ ಬರುವವರೆಗೆ ಹೋರಾಟ ಮಾಡುತ್ತೇವೆ. ಕೇವಲ ನಾಗೇಂದ್ರ ಈ ಹಗರಣದ ಹಿಂದೆ ದೊಡ್ಡ ತಿಮಿಂಗಿಲಗಳು ಇದ್ದು ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಹುಳಿ ಹಟ್ಟಿ ಜಗದೀಶ್ ಮಾತನಾಡಿ ಮಳೆ ಬಾರದೆ ಜಿಲ್ಲೆಯಲ್ಲಿ ಕೃಷಿ ಭೂಮಿಗಳು ಕಣ್ಮರೆಯಾಗತೊಡಗಿವೆ. ಅಲ್ಲದೆ ಈ ತಾಲೂಕಿನಲ್ಲಿ ಬರ ಪರಿಸ್ಥಿತಿ ಭೀಕರವಾಗಿದೆ. ಉದ್ಯೋಗವಿಲ್ಲದೆ ಜನರು ಗುಳೆ ಹೋಗುವ ಪರಿಸ್ಥಿತಿ ಎದುರಾಗಿದೆ.
ಈಗಿದ್ದರೂ ತಾಲೂಕಿನ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸದೆ ಸರ್ಕಾರ ಬರ ಪಟ್ಟಿಯಿಂದ ಕೈ ಬಿಟ್ಟು ತಾಲೂಕನ್ನು ಕಡೆಗಣಿಸಲಾಗಿದೆ. ಕೂಡಲೇ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿದರು.ಈ ವೇಳೆ ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಡಾ.ಪಿ.ಎಂ. ಮಂಜುನಾಥ, ಸಹಕಾರ ಮಂಡಲದ ರಾಜ್ಯ ನಿರ್ದೇಶಕ ರಾಮರೆಡ್ಡಿ, ಮಂಡಲ ಅಧ್ಯಕ್ಷ ಕೆ.ಟಿ. ಶ್ರೀರಾಮರೆಡ್ಡಿ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ನೇರ್ಲಹಳ್ಳಿ ಪ್ರಭಾಕರ್, ಹರೀಶ್ ಕಡೆತೋಟ, ಹಿರಿಯ ಮುಖಂಡ ಜಿಂಕಲ್ ಬಸವರಾಜ್, ಚಂದ್ರ ಶೇಖರ ಗೌಡ, ತಿಮ್ಮಾಪುರ ಮೂರ್ತಿ, ವಿಎಸ್ ಎಸ್ ಎನ್ ಅಧ್ಯಕ್ಷ ಪ್ರಕಾಶ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಟಿ.ರವಿಕುಮಾರ್, ಸಿದ್ದಣ್ಣ, ಬಿ, ಮಂಜಣ್ಣ, ತಿಪ್ಪೇಸ್ವಾಮಿ, ಕಿರಣ್ ಗಾಯಕ್ವಾಡ್, ನಾಗರಾಜ್, ಎಸ್. ಸಿ. ಮೋರ್ಚಾ ಅಧ್ಯಕ್ಷ ಬಲರಾಮ್ ತುಮಕೂರ್ಲಹಳ್ಳಿ ಮಂಜುನಾಥ್, ಬಸವರಾಜ ಇದ್ದರು.