ಹುಬ್ಬಳ್ಳಿ:
ಎಸ್ಐಆರ್ ಬಗ್ಗೆ ರಾಜ್ಯದಲ್ಲಿ ಬಿಜೆಪಿಗರು ವಿನಾಕಾರಣ ಗೊಂದಲ ಸೃಷ್ಟಿಸುತ್ತಿದ್ದಾರೆ. ಗೊಂದಲ ಸೃಷ್ಟಿಸುವ ಬದಲು ಎಸ್ಐಆರ್ ಪ್ರಕ್ರಿಯೆಗೆ ಸಹಕಾರ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ, ಹುಡಾ ಅಧ್ಯಕ್ಷ ಶಾಕೀರ ಸನದಿ ಹೇಳಿದರು.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಿಜೆಪಿಗರು ಎಸ್ಐಆರ್ ಕುರಿತು ನೀಡುತ್ತಿರುವ ಹೇಳಿಕೆಗಳು ಜನರಲ್ಲಿ ಗೊಂದಲವನ್ನುಂಟು ಮಾಡುತ್ತಿವೆ. ಬಿಜೆಪಿಗೆ ಆತಂಕ ಆಗುತ್ತಿರುವುದೇಕೆ ಎಂಬ ಪ್ರಶ್ನೆ ಮೂಡುವಂತಾಗಿದೆ. ಮತದಾರರ ಪಟ್ಟಿಯನ್ನು ಶುದ್ಧೀಕರಿಸಿ ಪ್ರತಿಯೊಬ್ಬ ಅರ್ಹ ನಾಗರಿಕರಿಗೂ ಮತದಾನದ ಹಕ್ಕು ದೊರೆಯುವಂತೆ ಮಾಡುವ ಈ ಪ್ರಕ್ರಿಯೆಗೆ ಎಲ್ಲ ರಾಜಕೀಯ ಪಕ್ಷಗಳು ಸಹಕರಿಸಬೇಕೇ ಹೊರತು ಜನರಲ್ಲಿ ಗೊಂದಲ ಮತ್ತು ಭಯದ ವಾತಾವರಣ ನಿರ್ಮಿಸಬಾರದು ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವದ ಪ್ರಕ್ರಿಯೆಯ ಬಗ್ಗೆ ಜನರಿಗೆ ವಿಶ್ವಾಸ ತುಂಬುವ ಬದಲು ಅನುಮಾನ ಸೃಷ್ಟಿಸುತ್ತಿರುವುದು ಸರಿಯಲ್ಲ. ಕಾರ್ಯನಿರ್ವಹಿಸುತ್ತಿರುವ ಬೂತ್ಮಟ್ಟದ ಅಧಿಕಾರಿಗಳ ಸೇವೆಯನ್ನು ಅಭಿನಂದಿಸಲೇಬೇಕು. ಸೀಮಿತ ಅವಧಿ, ಅನೇಕ ತಾಂತ್ರಿಕ ಹಾಗೂ ಸ್ಥಳೀಯ ಸವಾಲುಗಳ ನಡುವೆಯೂ ಮನೆ-ಮನೆಗೆ ತೆರಳಿ ಸಾಧ್ಯವಾದಷ್ಟು ಹೆಚ್ಚು ಮತದಾರರನ್ನು ತಲುಪುವ ಪ್ರಯತ್ನ ಮಾಡುತ್ತಿದ್ದಾರೆ. ಆದಕಾರಣ ಯಾವುದೇ ಕಾರಣಕ್ಕೂ ಗೊಂದಲ ಸೃಷ್ಟಿಸದೇ ಮತದಾರರಿಗೆ ನೆರವು ನೀಡುವ ಮೂಲಕ ಎಸ್ಐಆರ್ ಪ್ರಕ್ರಿಯೆ ಸುಸೂತ್ರ ನಡೆಯುವಂತೆ ನೋಡಿಕೊಳ್ಳುವುದು ಎಲ್ಲ ರಾಜಕೀಯ ಪಕ್ಷಗಳ ಕರ್ತವ್ಯ. ಆದಕಾರಣ ಯಾವುದೇ ಕಾರಣಕ್ಕೂ ಗೊಂದಲಕ್ಕೆ ಅವಕಾಶ ನೀಡದೇ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.