BJP slams exclusion of Molakalmuru from drought list

-ತಾಲೂಕು ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಚಾಲನೆ

--

ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು

ತಾಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ಮಂಡಲ ಬಿಜೆಪಿ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಚಾಲನೆ ನೀಡಲಾಯಿತು.

ರಾಜ್ಯದ ಹಲವು ತಾಲೂಕುಗಳನ್ನು ಬರ ಪೀಡಿತ ಪ್ರದೇಶಗಳೆಂದು ಘೋಷಿಸಿರುವ ಸರ್ಕಾರ, ಮೊಳಕಾಲ್ಮೂರು ತಾಲೂಕನ್ನು ಕಡೆಗಣಿಸಿರುವುದು ರೈತ ವಿರೋಧಿ ಧೋರಣೆಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಡಾ.ಪಿ.ಎಂ. ಮಂಜುನಾಥ ಮಾತನಾಡಿ, ಮೊಳಕಾಲ್ಮೂರು ತಾಲೂಕಿನಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆಗಳು ಒಣಗಿ, ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲೂ ತಾಲೂಕನ್ನು ಬರಪಟ್ಟಿಗೆ ಸೇರಿಸದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಸಚಿವರು ಬಂದು ಬರ ಪರಿಸ್ಥಿತಿ ಅವಲೋಕಿಸಿದರೂ ತಾಲೂಕು ಕೈಬಿಟ್ಟಿರುವುದು ರೈತವಿರೋಧಿ ನೀತಿಯಾಗಿದೆ. ಇದರಲ್ಲಿ ಶಾಸಕರು ಬದ್ಧತೆ ಪ್ರದರ್ಶಿಸಿ ಬರ ಪಟ್ಟಿಯಲ್ಲಿ ತಾಲೂಕನ್ನು ಸೇರ್ಪಡೆಗೊಳಿಸಬೇಕು ಎಂದರು.

ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಮೋಹನ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ರೈತರ ಪರವಾಗಿದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ವಾಸ್ತವದಲ್ಲಿ ಬರದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸುವಲ್ಲಿ ವಿಫಲವಾಗಿದೆ. ಅಧಿಕಾರಿಗಳ ವರದಿ ಹಾಗೂ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿ ಮೊಳಕಾಲ್ಮುರನ್ನು ಬರ ಪಟ್ಟಿಗೆ ಸೇರಿಸಿ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

ಮಂಡಲ ಅಧ್ಯಕ್ಷ ಕೆ ಟಿ ಶ್ರೀರಾಮರೆಡ್ಡಿ ಮಾತನಾಡಿ, ತಾಲೂಕಿನ ರೈತರ ಹಿತದೃಷ್ಟಿಯಿಂದ ನಮ್ಮ ಹೋರಾಟ ಆರಂಭವಾಗಿದೆ. ಸರ್ಕಾರ ತಕ್ಷಣ ಸ್ಪಂದಿಸಿ ಬರ ಪಟ್ಟಿಗೆ ಮೊಳಕಾಲ್ಮೂರು ತಾಲೂಕನ್ನು ಸೇರಿಸುವವರೆಗೆ ಧರಣಿ ಸತ್ಯಾಗ್ರಹ ಹಿಂಪಡೆಯುವುದಿಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಈ ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ನಾಯಕನಹಟ್ಟಿ ಮಂಡಲ ಅಧ್ಯಕ್ಷ ಚನ್ನಗಾನಹಳ್ಳಿ ಮಲ್ಲೇಶ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಎನ್.ಪಿ. ಪ್ರಭಾಕರ್, ಹರೀಶ್ ಕಡೆತೋಟ, ರಾಜ್ಯ ಕಾರ್ಯಕಾರಣಿ ಸದಸ್ಯ ರಾಮದಾಸ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ರೂಪ ವಿನಯ್ ಕುಮಾರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅರುಣ್ ಕುಮಾರ್, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಮೂರ್ತಿ, ಎಸ್‌ಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ದೇವಸಮುದ್ರ ಚಂದ್ರಣ್ಣ, ಎಸ್ ಸಿ. ಮೋರ್ಚಾ ಅಧ್ಯಕ್ಷ ಬಲರಾಮ್ ಇದ್ದರು.