ಕನ್ನಡಪ್ರಭ ವಾರ್ತೆ, ದಾವಣಗೆರೆ
ಮಾಜಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಜಿ.ಎಂ.ಸಿದ್ದೇಶ್ವರ ಹಾಗೂ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನಡುವಿನ ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಬಿಜೆಪಿ ಕಸರತ್ತು ಆರಂಭಿಸಿದೆ. ಈ ಸಂಬಂಧ ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ಗುರುವಾರ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ ದಾಸ್ ಅಗರವಾಲ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಧ್ಯಸ್ಥಿಕೆಯಲ್ಲಿ ಸಂಧಾನ ಮಾತುಕತೆ ನಡೆಯಿತು.ಮಾತುಕತೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಜಿ.ಎಂ.ಸಿದ್ಧೇಶ್ವರ, ನಮ್ಮ ಮಧ್ಯೆ ಏನೇ ಇದ್ದರೂ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಬಳಿ ಕುಳಿತು ಚರ್ಚಿಸಿ, ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ. ಈಗ ಮಾಧ್ಯಮಗಳ ಮುಂದೆ ಈ ಬಗ್ಗೆ ಏನನ್ನೂ ಮಾತನಾಡಲ್ಲ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ನಂತರ ನಾನು ಮಾತನಾಡುತ್ತೇನೆ ಎಂದರು.
ಸಂಧಾನ ಮಾತುಕತೆ ಕುರಿತು ಪ್ರತಿಕ್ರಿಯಿಸಿ, ರಾಧಾಮೋಹನ ದಾಸ್ ಅಗರವಾಲ್, ವಿಜಯೇಂದ್ರ ಜೊತೆಗೆ ಯಾವುದೇ ಮೀಟಿಂಗ್ ಮಾಡಿಲ್ಲ. 2 ಸಲ ಟೀ ಕುಡಿದೆವು, ಊಟ ಮಾಡಿದೆವು. ಜನರಲ್ ಆಗಿ ಮಾತನಾಡಿ ಬಂದೆ ಅಷ್ಟೇ ಎಂದು ಹೇಳಿದರು.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾನಾಗಲಿ, ನನ್ನ ಕುಟುಂಬದವರಾಗಲಿ ನಿಲ್ಲುವುದಿಲ್ಲ. ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ಕೇಳಿಕೊಂಡಿದ್ದೇವೆ. ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು ಇಲ್ಲಿಯೇ ಇದ್ದರು. ಅವರು ಪ್ರತ್ಯೇಕ ಸಭೆ ಮಾಡಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿಯಿಂದ ಯಾರನ್ನೂ ಉಚ್ಛಾಟಿಸುವಂತೆಯೂ ನಾನು ಕೇಳಿಲ್ಲ. ಹೊರಗೆ ನಿಂತಿರುವ ಮುಖಂಡರು, ಕಾರ್ಯಕರ್ತರು ಸುಮ್ಮನೆ ಘೋಷಣೆ ಕೂಗುತ್ತಿದ್ದಾರೆ ಅಷ್ಟೇ ಎಂದರು.