ಬಿಜೆಪಿಯನ್ನು ತಳಮಟ್ಟದಿಂದ ಸಂಘಟನೆ ಗೊಳಿಸಲಾಗುವುದು: ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಹಳ್ಳಿ ಸುಬ್ಬಣ್ಣ ವಿಶ್ವಾಸ

| Published : Jun 13 2025, 03:36 AM IST

ಬಿಜೆಪಿಯನ್ನು ತಳಮಟ್ಟದಿಂದ ಸಂಘಟನೆ ಗೊಳಿಸಲಾಗುವುದು: ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಹಳ್ಳಿ ಸುಬ್ಬಣ್ಣ ವಿಶ್ವಾಸ
Share this Article
  • FB
  • TW
  • Linkdin
  • Email

ಸಾರಾಂಶ

ನಂಜನಗೂಡು ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ, ಎಲ್ಲರೂ ಜೊತೆಗೂಡಿ ಪಕ್ಷದ ಸಂಘಟನೆಗೆ ಕೆಲಸ ಮಾಡುತ್ತೇವೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಿ.ಆರ್. ಧ್ರುವನಾರಾಯಣ್ ಅವರ ನಿಧನದ ಅನುಕಂಪದಿಂದ ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಶತಸಿದ್ಧ .

ಕನ್ನಡಪ್ರಭ ವಾರ್ತೆ ನಂಜನಗೂಡು

ಮೈಸೂರು ಗ್ರಾಮಾಂತರ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ರಾಜ್ಯ ಮತ್ತು ರಾಷ್ಟ್ರ ಚುನಾವಣೆಗಳಿಗೆ ಅನುಕೂಲವಾಗುವಂತೆ ಮುಂಬರುವ ಸ್ಥಳೀಯ ಚುನಾವಣೆಗಳಿಗೆ ಬಿಜೆಪಿಯನ್ನು ತಳಮಟ್ಟದಿಂದ ಸಂಘಟನೆಗೊಳಿಸಲಾಗುವುದು ಎಂದು ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಹಳ್ಳಿ ಸುಬ್ಬಣ್ಣ ಹೇಳಿದರು.

ಬಿಜೆಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಪಟ್ಟಣದ ಕೆ.ಎಚ್.ಬಿ ಬಡಾವಣೆಯ ತಮ್ಮ ನಿವಾಸದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ನಾನು ಮೂಲತಃ ಬಿಜೆಪಿಗ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ದಿ.ಆರ್. ಧ್ರುವನಾರಾಯಣ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೆ, ನಂತರ 2018ರ ನಂಜನಗೂಡು ಉಪಚುನಾವಣೆ ವೇಳೆ ವಿ. ಶ್ರೀನಿವಾಸ ಪ್ರಸಾದ್ ಅವರ ಮೂಲಕ ಮತ್ತೆ ಬಿಜೆಪಿಗೆ ವಾಪಸಾಗಿ ವಿಧಾನಸಭಾ ಸೇರಿದಂತೆ ಹಲವಾರು ಚುನಾವಣೆಗಳಲ್ಲಿ ಪರವಾಗಿ ಕೆಲಸ ಮಾಡಿದ್ದೇನೆ. ವಿ. ಶ್ರೀನಿವಾಸಪ್ರಸಾದ್ ಅವರಿಗೆ ನನ್ನನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಬೇಕು ಎಂಬ ಮಹದಾಸೆ ಇತ್ತು. ಅದಕ್ಕಾಗಿ ಅವರು ನನ್ನ ಹೆಸರನ್ನು ಶಿಫಾರಸು ಮಾಡಿದ್ದರು, ಆದರೆ ಆಗ ಮಹೇಂದ್ರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು, ಈಗ ಪ್ರಸಾದ್ ಅವರ ಆಸೆ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ ತಂಡದ ಮೂಲಕ ಈಡೇರಿದೆ ಎಂದರು.

ಜಿಲ್ಲಾಧ್ಯಕ್ಷ ಸ್ಥಾನವನ್ನು ಎಸ್ಟಿ ಸಮುದಾಯಕ್ಕೆ ನೀಡಬೇಕು ಎಂದು ತೀರ್ಮಾನಿಸಿ, ಪಕ್ಷದ ವಿವಿಧ ಹಂತದ ಮುಖಂಡರು, ಕಾರ್ಯಕರ್ತರು, ಹಿತೈಷಿಗಳ ಸಲಹೆ ಪಡೆದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಮೂಲಕ ಬಹುಮುಖ್ಯವಾದ ಪಕ್ಷ ಸಂಘಟನೆಯ ಜವಾಬ್ದಾರಿ ಕೊಟ್ಟಿದ್ದಾರೆ ಎಂದರು.

ರಾಜ್ಯ ಮತ್ತು ರಾಷ್ಟ್ರದ ಪಕ್ಷದ ವರಿಷ್ಠರ ಸೂಚನೆಗಳನ್ನು ಪಾಲಿಸಿ ಜಿಲ್ಲೆಯ ಎಲ್ಲ ಕ್ಷೇತ್ರದಲ್ಲೂ ಹಾಲಿ ಶಾಸಕರು, ಮಾಜಿ ಶಾಸಕರು, ವಿವಿಧ ಮೋರ್ಚಾಗಳ ಮುಖಂಡರು ಹಾಗೂ ಪಕ್ಷದ ಹಿರಿಯ ಮುಖಂಡರನ್ನು ಜೊತೆಗೂಡಿಸಿಕೊಂಡು ಬಿಜೆಪಿಯನ್ನು ತಳಮಟ್ಟದಿಂದ ಸಂಘಟನೆಗೊಳಿಸಲಾಗುವುದು ಎಂದು ಹೇಳಿದರು.

ನಂಜನಗೂಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಶತಸಿದ್ಧ:

ನಂಜನಗೂಡು ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ, ಎಲ್ಲರೂ ಜೊತೆಗೂಡಿ ಪಕ್ಷದ ಸಂಘಟನೆಗೆ ಕೆಲಸ ಮಾಡುತ್ತೇವೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಿ.ಆರ್. ಧ್ರುವನಾರಾಯಣ್ ಅವರ ನಿಧನದ ಅನುಕಂಪದಿಂದ ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಶತಸಿದ್ಧ ಎಂದರು.

ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ ಮಾತನಾಡಿ, ಜಿಲ್ಲೆಯಲ್ಲಿ ಎಲ್ಲಾ ಸಮುದಾಯಗಳನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಅಭ್ಯರ್ಥಿಗೆ ಮಣೆ ಹಾಕಬೇಕು ಎಂಬುದು ವರಿಷ್ಠರ ಸೂಚನೆಯಾಗಿತ್ತು, ಅದರಂತೆ ಎಲ್ಲ ಸಮುದಾಯದೊಂದಿಗೂ ನಿಕಟ ಸಂಪರ್ಕವುಳ್ಳ ಎಲ್ಲ ಸಮುದಾಯವನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಸಾಮರ್ಥ್ಯವಿರುವ ಕುಂಬ್ರಹಳ್ಳಿ ಸುಬ್ಬಣ್ಣ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆಗೊಳಿಸಿದ್ದಾರೆ, ಅವರಿಗೆ ಹಲವಾರು ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ಅನುಭವಿದೆ, ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷವನ್ನು ಸಮರ್ಥವಾಗಿ ಸಂಘಟನೆಗೊಳಿಸಿಲಿದ್ದಾರೆ ಎಂದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಜಿಪಂ ಮಾಜಿ ಸದಸ್ಯ ಶಿವರಾಮು, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಎನ್.ಆರ್. ಕೃಷ್ಣಪ್ಪಗೌಡ, ತಾಪಂ ಮಾಜಿ ಅಧ್ಯಕ್ಷ ಬಿ.ಎಸ್. ಮಹದೇವಪ್ಪ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಎಸ್.ಎಂ. ಕೆಂಪಣ್ಣ, ಮುಖಂಡರಾದ ವಿನಯ್ ಕುಮಾರ್, ಎನ್.ಸಿ. ಬಸವಣ್ಣ, ಹೆಮ್ಮರಗಾಲ ಸೋಮಣ್ಣ, ರವೀಂದ್ರ, ಮಹೇಶ್, ಹುಲ್ಲಹಳ್ಳಿ ಮೋಹನ್, ಮಲ್ಲಿಕಾರ್ಜುನ್, ಅರುಣ್ ಗೌಡ, ಮಧುರಾಜ್, ಜಗದೀಶ್, ನಾಗೇಂದ್ರ, ತಾಪಂ ಮಾಜಿ ಸದಸ್ಯರಾದ ಶಿವಣ್ಣ, ಸಿ.ಎಂ. ಮಹದೇವಯ್ಯ, ಮೂರ್ತಿ ಇದ್ದರು.