- ಅಭಿವೃದ್ಧಿ ಕಾಣದೇ ಕ್ಷೇತ್ರ ಜನತೆ ರೋಸಿಹೋಗಿದ್ದಾರೆ: ರಾಜಶೇಖರ್‌ ಕಿಡಿ । ಮಾಧ್ಯಮ ಕೇಂದ್ರ ಉದ್ಘಾಟನೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಕಾಂಗ್ರೆಸ್‌ನಿಂದಾಗಿ ಸಂಪೂರ್ಣ ಕಡೆಗಣಿಸಲ್ಪಟ್ಟಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಸಲ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಾಣ ಮಾಡುತ್ತೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಭಾನುವಾರ ಮಾಧ್ಯಮ ಕೇಂದ್ರ ಉದ್ಘಾಟನೆ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅಭಿವೃದ್ಧಿಯನ್ನೇ ಕಾಣದ ದಕ್ಷಿಣ ಕ್ಷೇತ್ರದ ಜನರು ಕಾಂಗ್ರೆಸ್‌ನಿಂದ ರೋಸಿ ಹೋಗಿದ್ದಾರೆ. ಇದೀಗ ಉಪ ಚುನಾವಣೆಯಲ್ಲಿ ಬದಲಾವಣೆಗೆ ಮುನ್ನುಡಿ ಬರೆಯಲಿದ್ದಾರೆ ಎಂದರು.


ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್‌ನ ರಾಜ್ಯ, ರಾಷ್ಟ್ರೀಯ ನಾಯಕರು ಬೆಂಗಳೂರಿನಲ್ಲಿ ಹರಸಾಹಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವಕ್ಕೆ ಸೀಮಿತವಾಗಿದೆಯೇ ಅಥವಾ ಕೇವಲ ಒಂದು ಕುಟುಂಬಕ್ಕಷ್ಟೇ ಸೀಮಿತವೇ ಎಂಬುದನ್ನು ಪ್ರತಿಯೊಂದು ಸಮಾಜದವರೂ ಗಂಭೀರವಾಗಿ ಆಲೋಚಿಸಬೇಕಾಗಿದೆ. ಕಾಂಗ್ರೆಸ್‌ನಲ್ಲಿ ಆಗುತ್ತಿರುವ ಬೆಳವಣಿಗೆಗಳು ಸ್ವತಃ ಕಾಂಗ್ರೆಸ್‌ ಕಾರ್ಯಕರ್ತರನ್ನೇ ಭ್ರಮನಿರಸನಗೊಳಿಸಿವೆ ಎಂದು ತಿಳಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಬಂದ ಅನುದಾನ, ಸ್ಮಾರ್ಟ್ ಸಿಟಿ ಯೋಜನೆ ಸೇರಿದಂತೆ ನಮ್ಮ ಸರ್ಕಾರಗಳಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನು ಬಿಟ್ಟರೆ ಕಾಂಗ್ರೆಸ್ ಶಾಸಕರ ಅನುದಾನದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಉತ್ತಮ ಆಸ್ಪತ್ರೆ, ಶಾಲಾ- ಕಾಲೇಜು, ತುರ್ತು ಚಿಕಿತ್ಸಾ ಆಂಬ್ಯುಲೆನ್ಸ್‌, ಸರ್ಕಾರಿ ಆಸ್ಪತ್ರೆ ಯಾವುದೂ ಆಗದೇ, ಸಿಗದೇ ಕ್ಷೇತ್ರದ ಮತದಾರರು ಸಹ ಈ ಸಲ ಬದಲಾವಣೆಗೆ ಮುಂದಾಗಿದ್ದಾರೆ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಎರಡೂವರೆ ವರ್ಷದಿಂದ ದಾವಣಗೆರೆ ದಕ್ಷಿಣದಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹಬ್ಬಗಳು, ಮೆರವಣಿಗೆಗಳನ್ನು ಮಾಡಲಾಗದಂತಹ ವಾತಾವರಣ ನಿರ್ಮಾಣ ಮಾಡಲಾಗಿದೆ. ಹಳೇ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ, ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿವೆ. ದಕ್ಷಿಣ ಕ್ಷೇತ್ರದ ಮತದಾರರು ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅನ್ನು ಸಾರಾಸಗಟಾಗಿ ತಿರಸ್ಕರಿಸಲಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಇಲ್ಲಿ ಜಯ ಸಾಧಿಸಲಿದ್ದಾರೆ ಎಂದು ರಾಜಶೇಖರ ನಾಗಪ್ಪ ತಿಳಿಸಿದರು.

ಪಕ್ಷದ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ಮಾತನಾಡಿ, ಮಾ.20ರಂದು ಅಲ್ಪಸಂಖ್ಯಾತ ಮತದಾರರಿಗೆ ಆಹಾರ ಕಿಟ್ ವಿತರಿಸುವ ಮೂಲಕ ಕಾಂಗ್ರೆಸ್ ನೀತಿ ಸಂಹಿತೆ ಉಲ್ಲಂಘಿಸಿದೆ. ಈ ಬಗ್ಗೆ ಕ್ಷೇತ್ರದ ಚುನಾವಣಾಧಿಕಾರಿಗೆ ದೂರು ನೀಡಿದ್ದೇವೆ. ಕಿಟ್‌ನಲ್ಲಿ ಸಚಿವ, ಸಂಸದರು, ಕಾಂಗ್ರೆಸ್ ಅಭ್ಯರ್ಥಿಯ ಭಾವಚಿತ್ರ, ಕಾಂಗ್ರೆಸ್ ಪಕ್ಷದ ಚಿಹ್ನೆ ಇರುವ ಕಿಟ್‌ನ್ನು ರಂಜಾನ್ ಹಬ್ಬಕ್ಕೆ ಅಲ್ಪಸಂಖ್ಯಾತರಿಗೆ ಲೋಡ್‌ಗಟ್ಟಲೇ ವಿತರಿಸಿದ್ದಾರೆ. ಅಕ್ಕಿ, ಶ್ಯಾವಿಗೆ, ಬೇಳೆ, ಸಕ್ಕರೆ ಇರುವ ಕಿಟ್ ಇದು. ರಾಜಮಾರ್ಗದಲ್ಲಿ ಚುನಾವಣೆ ನಡೆಸಲಾಗದ ಕಾಂಗ್ರೆಸ್ ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಲು ಹೊರಟಿದೆ ಎಂದು ಆರೋಪಿಸಿದರು.

ಒಂದೇ ಮನೆಯಲ್ಲಿ ಸಚಿವರು, ಸಂಸದರು ಇದ್ದರೂ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಟಿಕೆಟ್ ಕೇಳಿದ್ದಕ್ಕೆ ಅಲ್ಪಸಂಖ್ಯಾತರ ಮಧ್ಯೆಯೇ ಹೊಡೆದಾಟ ಹಚ್ಚಿದ್ದಾರೆ. ನಾವು ಇದುವರೆಗೂ ಸೋತಿರುವುದು ಅಲ್ಪಸಂಖ್ಯಾತರ ಮತಗಳಿಂದಲೇ. ಆದರೂ, ಒಮ್ಮೆಯೂ ಅಲ್ಪಸಂಖ್ಯಾತರ ಬಗ್ಗೆ ಒಂದೇ ಒಂದು ಕೆಟ್ಟದಾಗಿ ನಾವು ಮಾತನಾಡಿಲ್ಲ. ಇದನ್ನು ಅಲ್ಪ ಸಂಖ್ಯಾತರು ಅರ್ಥ ಮಾಡಿಕೊಳ್ಳಬೇಕು. ಈ ಸಲ ದಕ್ಷಿಣ ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಪಕ್ಷದ ಮುಖಂಡರಾದ ಎಂ.ಡಿ. ಲಕ್ಷ್ಮೀನಾರಾಯಣ, ಗಾಯತ್ರಿ ಸಿದ್ದೇಶ್ವರ, ಬಿ.ಜಿ. ಅಜಯಕುಮಾರ, ಲೋಕಿಕೆರೆ ನಾಗರಾಜ, ದೇವರಮನಿ ಶಿವಕುಮಾರ, ರಾಜನಹಳ್ಳಿ ಶಿವಕುಮಾರ, ಬಿ.ರಮೇಶ ನಾಯ್ಕ, ಬಿ.ಎಂ. ಸತೀಶ ಕೊಳೇನಹಳ್ಳಿ, ಬಿ.ಎಚ್. ಜಗದೀಶ, ಎಚ್.ಪಿ. ವಿಶ್ವಾಸ ಇತರರು ಇದ್ದರು.

- - -

(ಬಾಕ್ಸ್‌)

* ಇಂದು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ನಾಮಪತ್ರ

- ಬಿಎಸ್‌ವೈ, ಶೆಟ್ಟರ್‌, ಜಿಎಂಎಸ್‌, ಎಸ್ಎಆರ್, ರಾಮುಲು, ಕಾರಜೋಳ ಭಾಗಿ ದಾವಣಗೆರೆ: ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ.ದಾಸಕರಿಯಪ್ಪ ಮಾ.23ರಂದು ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸುವ ಜೊತೆಗೆ ಬೃಹತ್ ಮೆರವಣಿಗೆ ಮೂಲಕ ತೆರಳಿ, ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10 ಗಂಟೆಗೆ ಪಕ್ಷದ ನಾಯಕರಾದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ಜಿ.ಎಂ. ಸಿದ್ದೇಶ್ವರ, ಎಸ್.ಎ. ರವೀಂದ್ರನಾಥ, ಬಿ.ಶ್ರೀರಾಮುಲು, ಗೋವಿಂದ ಕಾರಜೋಳ, ಶಾಸಕ ಬಿ.ಪಿ.ಹರೀಶ, ಎಂ.ಪಿ. ರೇಣುಕಾಚಾರ್ಯ, ಭಾರತಿ ಶೆಟ್ಟಿ, ಶಿವನಗೌಡ ನಾಯ್ಕ ಸೇರಿದಂತೆ ಪಕ್ಷದ ನಾಯಕರು ಮೆರವಣಿಗೆಯಲ್ಲಿ ಪಾಲ್ಗೊಳ್ಳುವರು ಎಂದರು.

ಬಿಜೆಪಿ ನಾಮಪತ್ರ ಸಲ್ಲಿಕೆ ವೇಳೆ 20 ಸಾವಿರಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ. ನಗರದ ಪ್ರಮುಖ ಪ್ರದೇಶ, ವೃತ್ತಗಳ ಮಾರ್ಗವಾಗಿ ಚುನಾವಣಾಧಿಕಾರಿ ಕಚೇರಿಯಾದ ಮಹಾನಗರ ಪಾಲಿಕೆ ಕಚೇರಿಗೆ ತೆರಳಿ, ಚುನಾವಣಾಧಿಕಾರಿಗೆ ನಮ್ಮ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ನಾಮಪತ್ರ ಸಲ್ಲಿಸುವರು ಎಂದು ಹೇಳಿದರು.

- - -

-22ಕೆಡಿವಿಜಿ1, 2, 3:

ದಾವಣಗೆರೆ ದಕ್ಷಿಣ ಕ್ಷೇತ್ರದ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಪಕ್ಷದಿಂದ ಹಂಚಿದ್ದು ಎನ್ನಲಾದ ಆಹಾರ ಕಿಟ್‌ನ್ನು ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ, ಹಿರಿಯ ಮುಖಂಡ ಯಶವಂತ ರಾವ್ ಜಾಧವ್ ಸುದ್ದಿಗೋಷ್ಠಿಯಲ್ಲಿ ಪ್ರದರ್ಶಿಸಿದರು. -22ಕೆಡಿವಿಜಿ4:

ದಾವಣಗೆರೆಯಲ್ಲಿ ಭಾನುವಾರ ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ, ಹಿರಿಯ ಮುಖಂಡ ಯಶವಂತ ರಾವ್ ಜಾಧವ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.