ಕನ್ನಡಪ್ರಭ ವಾರ್ತೆ ಬೆಂಗಳೂರು
ಪಂಚ ರಾಜ್ಯಗಳ ಪೈಕಿ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.ಬೆಂಗಳೂರಿನ ಮಲ್ಲೇಶ್ವರಂನಲ್ಲಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು.ಮಂಗಳೂರಿನಲ್ಲಿ ನಗರದ ಪಿವಿಎಸ್ ವೃತ್ತ ಬಳಿಯ ಬಿಜೆಪಿ ಜಿಲ್ಲಾ ಕಾರ್ಯಾಲಯದ ಮುಂಭಾಗ ಬಿಜೆಪಿ ಕಾರ್ಯಕರ್ತರು ಸೋಮವಾರ ವಿಜಯೋತ್ಸವ ಆಚರಿಸಿದರು. ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ಸಂದರ್ಭ ಜಲ್ಮುರಿ ಅಂಗಡಿಗೆ ಭೇಟಿ ನೀಡಿ ಜಲ್ಮುರಿ ಸವಿದಿರುವುದು ಚುನಾವಣಾ ಪ್ರಚಾರದಲ್ಲಿ ವ್ಯಾಪಕ ಜನಪ್ರಿಯತೆ ಗಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ವಿಜಯೋತ್ಸವ ಸಂದರ್ಭದಲ್ಲೂ ಕಾರ್ಯಕರ್ತರು ಚುರುಮುರಿ ಹಂಚಿ ಸಂಭ್ರಮಿಸಿದರು. ಗೆಲುವಿಗೆ ಜಯ ಘೋಷಣೆಗಳನ್ನು ಕೂಗಿ ಸಂಭ್ರಮಿಸಿ, ವಿಜಯೋತ್ಸವ ಆಚರಿಸಿದರು. ಮಹಿಳಾ ಕಾರ್ಯಕರ್ತರು ಕುಣಿದು ಸಂತಸ ಹಂಚಿಕೊಂಡರು. ಸಿಹಿ ಹಂಚಿದರು. ಬೀದರ್ ನಲ್ಲಿ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅವರ ನೇತೃತ್ವದಲ್ಲಿ ಅಭಿಮಾನಿಗಳು ಭರ್ಜರಿ ವಿಜಯೋತ್ಸವ ಆಚರಿಸಿದರು.
ಹುಬ್ಬಳ್ಳಿಯ ದುರ್ಗದಬೈಲ್ನಲ್ಲಿ ನಡೆದ ಬಿಜೆಪಿ ವಿಜಯೋತ್ಸವದಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕ ಮಹೇಶ ಟೆಂಗಿನಕಾಯಿ ಮೇಯರ್ ಜ್ಯೋತಿ ಪಾಟೀಲ ಪಾಲ್ಗೊಂಡಿದ್ದರು. ಪಟಾಕಿ ಸಿಡಿಸಿ, ಸಿಹಿ ಹಂಚಿ, ಗುಲಾಲು ಎರಚಿ ವಿಜಯೋತ್ಸವ ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರ ಹಿಡಿದು ಕಾರ್ಯಕರ್ತರು ಬಿಜೆಪಿ ಪರ ಘೋಷಣೆಗಳನ್ನು ಕೂಗಿದರು.ಗದಗದ ಹುಯಿಲಗೋಳ ನಾರಾಯಣರಾವ್ ವೃತ್ತದಲ್ಲಿ ನಡೆದ ವಿಜಯೋತ್ಸವದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಪಾಲ್ಗೊಂಡಿದ್ದರು. ಹಾವೇರಿಯ ಎಂ.ಜಿ.ವೃತ್ತ, ಕೊಪ್ಪಳದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು. ಇದೇ ವೇಳೆ, ಮುಂಡರಗಿ, ಶಿರಹಟ್ಟಿ, ಭಟ್ಕಳ, ಯಲ್ಲಾಪುರ, ಮುಂಡಗೋಡ, ಕಾರವಾರ, ತುಮಕೂರು, ಶಿವಮೊಗ್ಗ, ಬಳ್ಳಾರಿ, ಸಂಡೂರು, ಸಿರುಗುಪ್ಪ, ವಿಜಯನಗರ, ಹೊಸಪೇಟೆ, ಹರಪನಹಳ್ಳಿ ಸೇರಿ ರಾಜ್ಯದ ಇತರೆಡೆಯೂ ಸಂಭ್ರಮಾಚರಣೆ ನಡೆಯಿತು.