ಸಾರಾಂಶ
- ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಿಹಿ ಹಂಚಿದ ಕಾರ್ಯಕರ್ತರು - - - ಹೊನ್ನಾಳಿ: ಹರಿಯಾಣ ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸತತ 3ನೇ ಬಾರಿಗೆ ಅಧಿಕಾರ ಹಿಡಿಯುತ್ತಿರುವುದು ದೇಶದ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಮುಂದಿನ ದಿನಗಳಲ್ಲಿ ಈ ಫಲಿತಾಂಶ ಇತರೆ ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳ ದಿಕ್ಸೂಚಿಯಾಗಿದೆ ಎಂದು ಹೊನ್ನಾಳಿ ಮಂಡಲ ಬಿಜೆಪಿ ಅಧ್ಯಕ್ಷ ಜೆ.ಕೆ.ಸುರೇಶ್ ಹೇಳಿದರು.
ಹರಿಯಾಣದಲ್ಲಿ ಮಂಗಳವಾರ ಫಲಿತಾಂಶ ಪ್ರಕಟವಾದ ಹಿನ್ನೆಲೆ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯಲ್ಲಿ ಅವರು ಮಾತನಾಡಿದರು.ಹರಿಯಾಣ ಮುಖ್ಯಮಂತ್ರಿ ಉತ್ತಮ ಕೆಲಸ ಮಾಡಿದ್ದರು. ಎಲ್ಲ ಮತಗಟ್ಟೆ ಸಮೀಕ್ಷೆಗಳು ಕಾಂಗ್ರೆಸ್ ಬಹುಮತ ಪಡೆಯುತ್ತದೆ ಎಂದು ಹೇಳಿದ್ದವು. ಅಲ್ಲಿನ ಮತದಾರರು ವಿಚಾರವಂತರಾಗಿದ್ದು, 10 ವರ್ಷ ಆಡಳಿತ ನಡೆಸಿದ ಬಿಜೆಪಿಗೆ ಮತದಾರರು ಹ್ಯಾಟ್ರಿಕ್ ಸಾಧನೆಗೆ ಸಹಕರಿಸಿ, ಜೈ ಎಂದಿದ್ದಾರೆ ಎಂದು ಮತದಾರಿಗೆ ಅಭಿನಂದನೆ ಸಲ್ಲಿಸಿದರು.
ಅಲ್ಲಿ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳು ಧೂಳಿಪಟವಾಗಿವೆ. ನಮ್ಮ ರಾಜ್ಯದಲ್ಲಿ ಎಸ್ಸಿ-ಎಸ್ಟಿ ಅನುದಾನವನ್ನು ಬೇರೆ ಕಡೆ ವರ್ಗಾವಣೆ ಮಾಡಿರುವುದು, ಸಿಎಂ-ಪತ್ನಿಯ ಮುಡಾ ನಿವೇಶನ ಹಗರಣ, ವಾಲ್ಮೀಕಿ ಹಗರಣ ಸೇರಿದಂತೆ ಅನೇಕ ಹಗರಣಗಳಲ್ಲಿ ಸಿಲುಕಿ ಕಾಂಗ್ರೆಸ್ ನಲುಗುತ್ತಿದೆ. ಕಳೆದ ಒಂದೂವರೆ ವರ್ಷದ ಕಾಂಗ್ರೆಸ್ ಆಡಳಿತದಲ್ಲಿ ಜನರು ಭ್ರಮ ನಿರಸನಗೊಂಡಿದ್ದಾರೆ ಎಂದು ಆರೋಪಿಸಿದರು.ಹರಿಯಾಣ ವಿಧಾನಸಭಾ ಚುನಾವಣೆ ಮತ ಎಣಿಕೆ ಸಂದರ್ಭದ ಆರಂಭದ ಲೀಡ್ ಗಮನಿಸಿದ ಕಾಂಗ್ರೆಸ್ ಮಂದಿ ಹರಿಯಾಣ, ದೆಹಲಿ ಕಾಂಗ್ರೆಸ್ ಕಚೇರಿ ಮುಂದೆ ಸಿಹಿ ಹಂಚಿ ಸಂಭ್ರಮಿಸಿದರು. ಆದರೆ, ಇದಾದ 2 ಗಂಟೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದಾಗ ಕಾಂಗ್ರೆಸ್ಸಿಗರಿಗೆ ನಿರಾಸೆಯಾಗಿ, ಕಾಂಗ್ರೆಸ್ ಕಚೇರಿ ಮುಂದೆ ಸೇರಿದ್ದ ಎಲ್ಲರೂ ಮಾಯವಾಗಿದ್ದರು. ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸಿದರು ಗಾದೆಮಾತಿನ ಸ್ಥಿತಿ ಕಾಂಗ್ರೆಸ್ಗಾಯಿತು ಎಂದರು.
ಪಿಎಲ್ಡಿ ಬ್ಯಾಂಕ್ ನಿರ್ದೇಶಕ ತರಗನಹಳ್ಳಿ ರಮೇಶಗೌಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರಕೆರೆ ನಾಗರಾಜ್, ತಾಪಂ ಮಾಜಿ ಉಪಾಧ್ಯಕ್ಷ ಸಿ.ಆರ್. ಶಿವಾನಂದ್, ಪುರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಕೆ.ವಿ. ಶ್ರೀಧರ್, ಮುಖಂಡರಾದ ಎಂ.ಪಿ. ರಾಜು, ಪೇಟೆ ಪ್ರಶಾಂತ್, ಮಂಜುನಾಥ್ ಇಂಚರ, ವೇದಮೂರ್ತಿ, ಮಹೇಶ ಹುಡೇದ್, ಕುಮಾರಸ್ವಾಮಿ ಇತರರು ಇದ್ದರು.ಇದಕ್ಕೂ ಮುನ್ನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
- - - (** ಈ ಫೋಟೋ-ಕ್ಯಾಪ್ಷನ್ ಪ್ಯಾನೆಲ್ಗೆ ಬಳಸಿ)-8ಎಚ್ಎಲ್.ಐ2:ಹರಿಯಾಣ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದ ಪ್ರಯುಕ್ತ ಹೊನ್ನಾಳಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಮುಖಂಡರು, ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ, ಸಂಭ್ರಮಿಸಿದರು.