ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಅಪಘಾತ, ಕಾಯಿಲೆ ಇತ್ಯಾದಿಗಳ ಸಂದರ್ಭದಲ್ಲಿ ರಕ್ತದ ಲಭ್ಯತೆಯ ಕೊರತೆಯಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ಪ್ರಾಣಾಪಾಯದಲ್ಲಿರುವ ಜೀವ ಉಳಿಸಲು ರಕ್ತದಾನ ಮಹತ್ತರ ಪಾತ್ರ ವಹಿಸುತ್ತದೆ. ಆದ್ದರಿಂದ ರಕ್ತದಾನ ಮಾಡಲು ಜನರು ಮುಂದೆ ಬರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಜಿ. ಹುಬ್ಬಳ್ಳಿ ಕರೆ ನೀಡಿದ್ದಾರೆ.ಮಂಗಳವಾರ ಇಲ್ಲಿನ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತಕ್ಕೆ ಪರ್ಯಾಯ ವಸ್ತುವಿಲ್ಲ. ಅದನ್ನು ಕೃತಕವಾಗಿ ತಯಾರಿಸಲೂ ಸಾಧ್ಯವಿಲ್ಲ. ವ್ಯಕ್ತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಒಂದು ಬಾರಿಯಾದರೂ ರಕ್ತದಾನ ಮಾಡಿದ್ದಲ್ಲಿ ದೇಹದಲ್ಲಿ ಹೊಸ ರಕ್ತ ಉತ್ಪಾದನೆ ಆಗುವುದರೊಂದಿಗೆ ಹೃದಯಾಘಾತ, ಕ್ಯಾನ್ಸರ್, ಹೃದಯರೋಗಗಳು ಸೇರಿದಂತೆ ಮತ್ತಿತರ ಕಾಯಿಲೆಗಳಿಂದ ದೂರ ಉಳಿಯಬಹುದಾಗಿದೆ ಎಂದ ಅವರು, ಯುವ ಜನತೆ ಸ್ವಯಂಪ್ರೇರಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಮುಂದಾಗಬೇಕು ಎಂದರು.ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್ ಮಾತನಾಡಿ, ಉಡುಪಿ ಜಿಲ್ಲೆಯು ರಕ್ತದಾನಿಗಳ ಜಿಲ್ಲೆಯ ಎಂದು ಗುರುತಿಸಲ್ಪಟ್ಟಿದೆ. ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಜನರು ರಕ್ತದಾನ ಮಾಡಲು ಮುಂದೆ ಬರುತ್ತಾರೆ. ನಮ್ಮ ಜಿಲ್ಲೆಯಿಂದ ಅಕ್ಕಪಕ್ಕದ ನೆರೆಯ ಜಿಲ್ಲೆಯವರು ರಕ್ತವನ್ನು ಕೊಂಡೊಯ್ಯುತ್ತಾರೆ. ವಿದ್ಯಾರ್ಥಿಗಳು ಜೀವನದಲ್ಲಿ ರಕ್ತದಾನ ಮಾಡುವ ಹ್ಯವಾಸಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಪ್ರಾಂಶುಪಾಲೆ ಡಾ.ಮಮತಾ ಕೆ.ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜ ಸೇವೆಯಲ್ಲಿ ರಕ್ತದಾನವು ಶ್ರೇಷ್ಠ ದಾನವಾಗಿದೆ. ಒಬ್ಬರ ಜೀವವನ್ನು ಉಳಿಸಲು ರಕ್ತದಾನ ಬಹಳ ಮಹತ್ವವಾಗಿದೆ. ರಕ್ತದಾನದ ಬಗ್ಗೆ ಅರಿವು ಹೊಂದಲು ಇಂತಹ ಕಾರ್ಯಕ್ರಮಗಳು ಉಪಯೋಗ ಎಂದ ಅವರು, ರಕ್ತದಾನ ಮಾಡಲು ಸ್ವಯಂ ಪ್ರೇರಿತರಾಗಿ ಯುವಜನರು ಮುಂದೆ ಬರಬೇಕು ಎಂದು ಕರೆ ನೀಡಿದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು ಎಸ್.ವಿ ಪ್ರತಿಜ್ಞಾ ವಿಧಿ ಬೋಧಿಸಿ, ಮಾತನಾಡಿದರು.
ಇದೇ ಸಂದರ್ಭದಲ್ಲಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಾದ ಲಕ್ಷ್ಮೀಶ ಉಡುಪ, ರೂಪ ಬಲ್ಲಾಳ್, ಕಾರ್ತಿಕ್ ನಾಯ್ಕ್ ಹಾಗೂ ಗಿರಿಜ ಸುವರ್ಣ ಅವರುಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ,. ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ, ನಾಗರಾಜ್ ಎಸ್,, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾಕುಮಾರಿ, ಜೆಸಿಐ ಅಲೂಮಿನಿ ಕ್ಲಬ್ ಅಧ್ಯಕ್ಷೆ ಆಶಾ ಅಲೆನ್ ವಾಜ್ ಮತ್ತಿತರರು ಇದ್ದರು.ಡಾ.ವಿದ್ಯಾಲಕ್ಷ್ಮೀ ಸ್ವಾಗತಿಸಿದರು. ಜಿಲ್ಲಾ ಕಾರ್ಯಕ್ರಮ ಮೇಲ್ವಿಚಾರಕ ಮಹಾಬಲೇಶ್ವರ ನಿರೂಪಿಸಿ, ಯೂತ್ ರೆಡ್ಕ್ರಾಸ್ ಸಹಾಯಕ ಡೀನ್ ಯೋಗೀಶ್ ಆಚಾರ್ಯ ವಂದಿಸಿದರು.