ರಕ್ತದಾನ ಪವಿತ್ರವಾದ ಸೇವೆಯಾಗಿದ್ದು, ಒಂದು ಯೂನಿಟ್ ರಕ್ತದಾನದಿಂದ ಅಗತ್ಯವಿರುವ ಹಲವು ಮಂದಿಯ ಜೀವ ಉಳಿಸಲು ಸಾಧ್ಯವಾಗುತ್ತದೆ ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕೊಡಗು ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ರಕ್ತದಾನ ಪವಿತ್ರವಾದ ಸೇವೆಯಾಗಿದ್ದು, ಒಂದು ಯೂನಿಟ್ ರಕ್ತದಾನದಿಂದ ಅಗತ್ಯವಿರುವ ಹಲವು ಮಂದಿಯ ಜೀವ ಉಳಿಸಲು ಸಾಧ್ಯವಾಗುತ್ತದೆ ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕೊಡಗು ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಹೇಳಿದರು.

ಬಿಜೆಪಿ ಜಿಲ್ಲಾ ಯುವಮೋರ್ಚಾ ವತಿಯಿಂದ ರಕ್ತನಿಧಿ ಕೇಂದ್ರ ಮಡಿಕೇರಿ, ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಗುರುವಾರ ಕೊಡವ ಸಮಾಜದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ಪ್ರಧಾನಿಯವರ ಹುಟ್ಟುಹಬ್ಬವನ್ನು ಸೇವಾ ಚಟುವಟಿಕೆಗಳ ಮೂಲಕ ಆಚರಿಸಲು ಪಕ್ಷ ನಿರ್ಧರಿಸಿದೆ ಎಂದರು.

ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಚಾಲನೆ ನೀಡಿ, ಶುಭ ಹಾರೈಸಿದರು. ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ವಿವಿಧ ಸಾಮಾಜಿಕ ಹಾಗೂ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರ ಭಾಗವಾಗಿ ಗುರುವಾರ ಬೆಳಗ್ಗೆ ಬಿಜೆಪಿ ಕಾರ್ಯಕರ್ತರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು ಎಂದು ತಿಳಿಸಿದರು.

ಅಭಿಯಾನದ ಅಂಗವಾಗಿ ಗುರುವಾರ ಸಂಜೆ ಬಿಜೆಪಿ ಕಾರ್ಯಕರ್ತರು ತಮ್ಮ ಮನೆಗಳ ಮೇಲೆ ದೀಪ ಬೆಳಗಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಯುಷ್ಯ, ಆರೋಗ್ಯ ಹಾಗೂ ಉತ್ತಮ ಸೇವೆ ಸಲ್ಲಿಸಲು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು ಎಂದು ಹೇಳಿದರು.

ಶಿಬಿರದಲ್ಲಿ 76 ಮಂದಿ ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ರಕ್ಷಿತ್ ಮಾವೋಜಿ, ಪದಾಧಿಕಾರಿಗಳಾದ ಪ್ರವೀಣ್ ಮಲ್ಲಜ್ಜಿರ, ಮೋಹಿತ್, ಪ್ರಸಿದ್, ರಕ್ತ ನಿಧಿ ಕೇಂದ್ರ ವೈದ್ಯಾಧಿಕಾರಿ ಕರುಂಬಯ್ಯ, ಸಮುದಾಯ ಆರೋಗ್ಯಾಧಿಕಾರಿ ಧರಣೇಶ್ ಮತ್ತು ಬಿಜೆಪಿ ಪ್ರಮುಖರು ಇದ್ದರು.