ಕಾರ್ಮಿಕರ ಹಕ್ಕುಗಳು ಹಾಗೂ ಸಾಮಾಜಿಕ ಭದ್ರತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಭಾರತೀಯ ಮಜ್ದೂರು ಸಂಘ (ಬಿಎಂಎಸ್) ವತಿಯಿಂದ ಆ.17ರಂದು ದೇಶಾದ್ಯಂತ ನಡೆಸಿದ ರಾಷ್ಟ್ರವ್ಯಾಪಿ ಪ್ರತಿಭಟನೆಯ ಪರಿಣಾಮ ಕಾರ್ಮಿಕ ಸಂಹಿತೆ ತಿದ್ದುಪಡಿಗೆ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದು ಬಿಎಂಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು. ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಕಾರ್ಮಿಕರ ಹಕ್ಕುಗಳು ಹಾಗೂ ಸಾಮಾಜಿಕ ಭದ್ರತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಭಾರತೀಯ ಮಜ್ದೂರು ಸಂಘ (ಬಿಎಂಎಸ್) ವತಿಯಿಂದ ಆ.17ರಂದು ದೇಶಾದ್ಯಂತ ನಡೆಸಿದ ರಾಷ್ಟ್ರವ್ಯಾಪಿ ಪ್ರತಿಭಟನೆಯ ಪರಿಣಾಮ ಕಾರ್ಮಿಕ ಸಂಹಿತೆ ತಿದ್ದುಪಡಿಗೆ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದು ಬಿಎಂಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು. ತಿಳಿಸಿದ್ದಾರೆ.ಆ.17ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಜಿಲ್ಲಾ ಆಡಳಿತ ಮೂಲಕ ಪ್ರಧಾನಮಂತ್ರಿ, ಕೇಂದ್ರ ಕಾರ್ಮಿಕ ಸಚಿವರು ಹಾಗೂ ಕೇಂದ್ರ ಹಣಕಾಸು ಸಚಿವರಿಗೆ ಕಾರ್ಮಿಕರ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಸೆ.1ರಂದು ಬಿಎಂಎಸ್ ಅಖಿಲ ಭಾರತ ನಾಯಕತ್ವದ ಉನ್ನತ ಮಟ್ಟದ ನಿಯೋಗ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ.ಮನ್ಸುಖ್ ಮಾಂಡವೀಯ ಅವರನ್ನು ಭೇಟಿ ಮಾಡಿ, ಹೊಸ ಕಾರ್ಮಿಕ ಸಂಹಿತೆಗಳಲ್ಲಿರುವ ಕಾರ್ಮಿಕ ವಿರೋಧಿ ಅಂಶಗಳ ಕುರಿತು ಮಾತುಕತೆ ನಡೆಸಿದ್ದರು. ಬಿಎಂಎಸ್ ಅಖಿಲ ಭಾರತ ಅಧ್ಯಕ್ಷ ಎಸ್.ಮಲ್ಲೇಶಂ, ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಕುಮಾರ್ ಪಾಂಡೆ, ಅಖಿಲ ಭಾರತ ಸಂಘಟನಾ ಕಾರ್ಯದರ್ಶಿ ಬಿ.ಸುರೇಂದ್ರನ್, ಮಾಜಿ ಅಖಿಲ ಭಾರತ ಅಧ್ಯಕ್ಷ ಹಿರಣ್ಯ ಪಾಂಡ್ಯ, ಸಂಜಿ ನಾರಾಯಣ್ ನಿಯೋಗದಲ್ಲಿದ್ದರು.
ಬಿಎಂಎಸ್ ನಿಯೋಗದ ಅಹವಾಲುಗಳನ್ನು ಆಲಿಸಿದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ.ಮನ್ಸುಖ್ ಮಾಂಡವೀಯ ಅವರು, ಸಂಘ ಮುಂದಿಟ್ಟಿರುವ ಅಂಶಗಳನ್ನು ಪರಿಶೀಲಿಸಿ ಅಗತ್ಯ ಸುಧಾರಣೆಗಳು ಹಾಗೂ ಕಾನೂನು ತಿದ್ದುಪಡಿಗಳನ್ನು ಶೀಘ್ರದಲ್ಲೇ ಪರಿಗಣಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಅನಿಲ್ ಕುಮಾರ್ ಯು.ತಿಳಿಸಿದ್ದಾರೆ.ಮುಂದಿನ ಹಂತದಲ್ಲಿ ಬಿಎಂಎಸ್ ಕೇಂದ್ರ ನಾಯಕತ್ವ ಹಾಗೂ ಕೇಂದ್ರ ಕಾರ್ಮಿಕ ಸಚಿವರ ನಡುವೆ ಮತ್ತೊಂದು ಉನ್ನತ ಮಟ್ಟದ ಸಭೆ ನಡೆಯಲಿದೆ.
ಕಾರ್ಮಿಕರ ಹಿತಾಸಕ್ತಿಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಂಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು.ತಿಳಿಸಿದ್ದಾರೆ.