ಸಾರಾಂಶ
ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರಾಯಚೂರು: ತಾಲೂಕಿನ ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ಸಚಿವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಅಧಿಕಾರಿಗಳು ಭಾಗವಹಿಸಿದ್ದರು.ಈ ಯೋಜನೆಯಿಂದ ಸುಮಾರು 6464 ಹೆಕ್ಟೇರ್ಗೆ ನೀರಾವರಿ ಹಾಗೂ ಕೆರೆಗಳನ್ನು ತುಂಬಿಸಬಹುದಾಗಿದೆ. ಕೃಷ್ಣಾ ನದಿ ನೀರನ್ನು ಬಳಸಿಕೊಳ್ಳುವ ಮೂಲಕ ಬೆಳೆಗೆ, ಜನರಿಗೆ ಕುಡಿಯುವ ನೀರಿಗಾಗಿ ಉಪಯೋಗಿಸಬಹುದಾಗಿದೆ. ಈ ಬಗ್ಗೆ ತಾಂತ್ರಿಕ ಕಾರ್ಯಸಾಧ್ಯತಾ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು.
ಇದೇ ವೇಳೆ ಮಸ್ಕಿ ವಿಧಾನಸಭಾ ಕ್ಷೇತ್ರದ 5ಎ ಕಾಲುವೆಯ ಪ್ರಸ್ತಾವನೆಯ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಮಸ್ಕಿ ಶಾಸಕರಾದ ಬಸವನಗೌಡ ತುರ್ವಿಹಾಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.