ಹೊಸಟ್ಟಿ, ಮಂಡಿಹಾಳ, ಬೇಲೂರ ಮತ್ತು ಮುಗದ, ಹುಬ್ಬಳ್ಳಿಯ ನೂಲ್ವಿ ಮತ್ತು ಅದರಗುಂಚಿ ಹಾಗೂ ಕಲಘಟಗಿಯ ನೆಲ್ಲಿಹರವಿ ತಾಂಡಾ ಮತ್ತು ಬಿ. ಹುಲಿಕಟ್ಟಿ ಸೇರಿ 8 ಗ್ರಾಮಕ್ಕೆ 8 ಖಾಸಗಿ ಬೋರ್ವೆಲ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.
ಧಾರವಾಡ:
ಬೇಸಿಗೆಯಲ್ಲಿ ಜಿಲ್ಲೆಯ 90 ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ನಿರೀಕ್ಷೆ ಇದ್ದು ಅದರಲ್ಲಿ 8 ಗ್ರಾಮದಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ತಹಸೀಲ್ದಾರ್ ಮತ್ತು ಪಿಡಿಒ ನೀರಿನ ಅಭಾವ ಉಂಟಾಗದಂತೆ ಮುನ್ನಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ನಿರ್ದೇಶಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜರುಗಿಸಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಬಗ್ಗೆ ಕೈಗೊಂಡ ಕ್ರಿಯಾ ಯೋಜನೆ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಜಿಲ್ಲೆಯಲ್ಲಿ ಈ ವರೆಗೆ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿಲ್ಲ. ಜಾನುವಾರುಗಳಿಗೆ ಮೇವಿನ ದಾಸ್ತಾನು ಇದೆ ಎಂದ ಜಿಲ್ಲಾಧಿಕಾರಿ, ಹೊಸಟ್ಟಿ, ಮಂಡಿಹಾಳ, ಬೇಲೂರ ಮತ್ತು ಮುಗದ, ಹುಬ್ಬಳ್ಳಿಯ ನೂಲ್ವಿ ಮತ್ತು ಅದರಗುಂಚಿ ಹಾಗೂ ಕಲಘಟಗಿಯ ನೆಲ್ಲಿಹರವಿ ತಾಂಡಾ ಮತ್ತು ಬಿ. ಹುಲಿಕಟ್ಟಿ ಸೇರಿ 8 ಗ್ರಾಮಕ್ಕೆ 8 ಖಾಸಗಿ ಬೋರ್ವೆಲ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 395 ಗ್ರಾಮಗಳಿದ್ದು, ಈ ಪೈಕಿ 90 ಗ್ರಾಮಗಳಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ. ಮುನ್ನಚ್ಚರಿಕಾ ಕ್ರಮವಾಗಿ 186 ಖಾಸಗಿ ಕೊಳವೆಬಾವಿ ಮಾಲೀಕರೊಂದಿಗೆ ನೀರು ಪಡೆಯಲು ಒಪ್ಪಿಗೆ ಪತ್ರ ಮಾಡಿಕೊಳ್ಳಲಾಗಿದೆ ಎಂದರು.ಜಿಪಂ ಸಿಇಒ ಭುವನೇಶ ಪಾಟೀಲ ಮಾತನಾಡಿ, ಕುಂದಗೋಳ, ನವಲಗುಂದ, ಅಣ್ಣಿಗೇರಿ ಮತ್ತು ಹುಬ್ಬಳ್ಳಿ ತಾಲೂಕಿನ ಎಲ್ಲ ಕುಡಿಯುವ ನೀರಿನ ಕೆರೆ ತುಂಬಿಸಿದ್ದು ನವಲಗುಂದ ತಾಲೂಕಿನ 1 ಕೆರೆಯ ಹೂಳೆತ್ತುವ ಕಾಮಗಾರಿ ಆರಂಭಿಸಲಾಗಿದೆ. ಈ ಗ್ರಾಮಕ್ಕೆ ಅಗತ್ಯವಿದ್ದಾಗ ನೀರು ಸರಬರಾಜು ಮಾಡಲು 2 ಖಾಸಗಿ ಬೋರ್ವೆಲ್ ಮೂಲಕ ಕ್ರಮವಹಿಸಲಾಗಿದೆ ಎಂದು ಹೇಳಿದರು.ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ರೀತಿಕಾ ವರ್ಮಾ, ಎಡಿಸಿ ಗೀತಾ ಸಿ.ಡಿ., ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮಾಲೋಚಕ ವೆಂಕಟೇಶ ಬುಳ್ಳಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.