ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿ ಕೈಬೆರಳು ವಿದ್ಯುತ್ ಚಾಲಿತ ಕಾಯಿ ತುರಿಯುವ ಯಂತ್ರದಲ್ಲಿ ಸಿಲುಕಿಕೊಂಡ ಸಂದರ್ಭ 5ನೇ ತರಗತಿ ವಿದ್ಯಾರ್ಥಿ ತೋರಿದ ಸಮಯಪ್ರಜ್ಞೆ ಹಾಗೂ ಧೈರ್ಯವು ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿಸಿದ ಘಟನೆ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಬಂಟ್ವಾಳ: ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿ ಕೈಬೆರಳು ವಿದ್ಯುತ್ ಚಾಲಿತ ಕಾಯಿ ತುರಿಯುವ ಯಂತ್ರದಲ್ಲಿ ಸಿಲುಕಿಕೊಂಡ ಸಂದರ್ಭ 5ನೇ ತರಗತಿ ವಿದ್ಯಾರ್ಥಿ ತೋರಿದ ಸಮಯಪ್ರಜ್ಞೆ ಹಾಗೂ ಧೈರ್ಯವು ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿಸಿದ ಘಟನೆ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಬಾಲಕನ ಕಾರ್ಯಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಶಾಲಾ ಶಿಕ್ಷಕ ವೃಂದ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿ ಕರ್ತವ್ಯ ನಿರತರಾಗಿದ್ದ ವೇಳೆ ವಿದ್ಯುತ್ ಚಾಲಿತ ಕಾಯಿ ತುರಿಯುವ ಯಂತ್ರದಲ್ಲಿ ಆಕಸ್ಮಿಕವಾಗಿ ಅವರ ಕೈಬೆರಳು ಸಿಲುಕಿಕೊಂಡಿದೆ. ನೋವಿನಿಂದ ಅವರು ಕಿರುಚಿಕೊಂಡಾಗ, ಶಾಲಾ ಅಂಗಳದಲ್ಲಿ ಆಟವಾಡುತ್ತಿದ್ದ 5ನೇ ತರಗತಿ ವಿದ್ಯಾರ್ಥಿ ಮನ್ವಿತ್ ತಕ್ಷಣ ವಿದ್ಯುತ್ ಸ್ವಿಚ್ ಆಫ್ ಮಾಡಿದ್ದಾನೆ. ಇದರಿಂದ ಮತ್ತಷ್ಟು ಅಪಾಯ ಸಂಭವಿಸುವುದನ್ನು ತಪ್ಪಿಸಿದ್ದಾನೆ.
ಬಾಲಕನ ಸಮಯಪ್ರಜ್ಞೆ, ಧೈರ್ಯ ಮತ್ತು ಸೂಕ್ತ ನಿರ್ಧಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಬಾಲಕನ ಧೈರ್ಯ ಮತ್ತು ಸಮಯಪ್ರಜ್ಞೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಶ್ಲಾಘಿಸಿದ್ದಾರೆ. ಬಾಲಕನ ಕಾರ್ಯ ನಿಜಕ್ಕೂ ಹೃದಯಸ್ಪರ್ಶಿ ಹಾಗೂ ಪ್ರಶಂಸನೀಯವಾಗಿದ್ದು, ಆತನ ಮುಂದಿನ ಭವಿಷ್ಯ ಉಜ್ವಲವಾಗಲಿ ಮತ್ತು ಸಮಾಜದ ಒಳಿತಿಗಾಗಿ ಸದಾ ಸ್ಪಂದಿಸುವ ಉತ್ತಮ ಪ್ರಜೆಯಾಗಿ ಬೆಳೆದು ನಾಡಿಗೆ ಕೀರ್ತಿ ತರಲಿ ಎಂದು ಅವರು ಹಾರೈಸಿದ್ದಾರೆ.ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಹಾಗೂ ಸದಸ್ಯರು ವಿದ್ಯಾರ್ಥಿಯ ಸಮಯಪ್ರಜ್ಞೆಯನ್ನು ಕೊಂಡಾಡಿದ್ದಾರೆ. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೋಣಯ್ಯ ನಾಯ್ಕ್ ಹಾಗೂ ಸಿಆರ್ಪಿ ಜ್ಯೋತಿ ಶಾಲೆಗೆ ಭೇಟಿ ನೀಡಿ ಬಾಲಕನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.