ಸಾರಾಂಶ
ಕನ್ನಡಪ್ರಭ ವಾರ್ತೆ ಬ್ರಹ್ಮಾವರ
ಇಲ್ಲಿನ ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ನಲ್ಲಿ ಯುಕೆಜಿ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಸಮಾರಂಭವನ್ನು ಆಯೋಜಿಸಲಾಗಿತ್ತು.ಕೆಎಂಸಿ ಮಣಿಪಾಲದ ಕಮ್ಯುನಿಟಿ ಮೆಡಿಸಿನ್ ವಿಭಾಗದ ಪ್ರೋಫೆಸರ್ ಡಾ. ಮುರಳಿಧರ ಎಂ. ಕುಲಕರ್ಣಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿ, ಯುಕೆಜಿ ಮಕ್ಕಳ ಶಿಕ್ಷಣದ ಮೊದಲ ಹಂತವಾಗಿದೆ. ಮಕ್ಕಳನ್ನು ಜಿಎಂ ಸಂಸ್ಥೆಗೆ ಸೇರಿಸಿ ಅವರ ಸಾಧನೆಗೆ ಉತ್ತಮ ಅಡಿಪಾಯ ಹಾಕಿದ್ದೀರಿ. ಮಕ್ಕಳಿಗೆ ಒತ್ತಡವನ್ನು ಹೇರದೆ ಅವರ ಆಸಕ್ತಿಯ ವಿಷಯವನ್ನು ಪ್ರೋತ್ಸಾಹಿಸಬೇಕು. ಅವರು ಸಮಾಜದ ಹಿತವನ್ನು ಕಾಯುವ ಕೆಲಸವನ್ನು ಮಾಡುವಂತೆ ಉತ್ತೇಜಿಸಬೇಕು. ಮಕ್ಕಳು ಹೆಚ್ಚಾಗಿ ನೋಡಿ ಕಲಿಯುವುದರಿಂದ ಶಿಕ್ಷಕರು ಮತ್ತು ಪೋಷಕರು ಮಗುವಿನಲ್ಲಿ ಉತ್ತಮ ಸಂಸ್ಕಾರವನ್ನು ಬೆಳೆಸಲು ಹೆಚ್ಚಿನ ಜವಾಬ್ದಾರಿಯನ್ನು ಹೊಂದಿರಬೇಕೆಂದರು.ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ ಪ್ರಕಾಶ್ಚಂದ್ರ ಶೆಟ್ಟಿ, ಎಲ್ಲ ಮಕ್ಕಳ ಭವಿಷ್ಯಕ್ಕೆ ಶುಭ ಹಾರೈಸಿ ಮಾತನಾಡಿ, ಮಕ್ಕಳಿಗೆ ತಮ್ಮ ಪೋಷಕರೇ ಆದರ್ಶ ವ್ಯಕ್ತಿಗಳಾಗಿರುತ್ತಾರೆ. ಪಾಲಕರು ಮಕ್ಕಳೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಬೇಕು. ಅವರ ಕಲಿಕೆಯಲ್ಲಿ ಪೋಷಕರು ಶಿಕ್ಷಕರೊಂದಿಗೆ ಕೈ ಜೋಡಿಸಬೇಕೆಂದರು.
ಯುಕೆಜಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಪೋಷಕರು, ಶಿಕ್ಷಕಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.